ಯುವ ಕಾಂಗ್ರೆಸ್ನಿಂದ ಕೆಪಿಸಿಸಿ ತನಕ, ದಿನೇಶ್ ಗುಂಡೂರಾವ್ ಪರಿಚಯ
ಬೆಂಗಳೂರು, ಜುಲೈ 11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ವಹಿಸಿಕೊಂಡಿದ್ದಾರೆ. 48 ವರ್ಷದ ದಿನೇಶ್ ಗುಂಡೂರಾವ್ ಅವರಿಗೆ ಕೆಪಿಸಿಸಿ ಸಾರಥ್ಯ ನೀಡುವ ಮೂಲಕ ಎಐಸಿಸಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವ ಉದ್ದೇಶ ಹೊಂದಿದೆ.
2013ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ಸಂಪುಟ ಪುನಾರಚನೆ ಬಳಿಕ ಅವರ ಸಂಪುಟದಿಂದ ಹೊರಬಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದರು.
ಚಿತ್ರಗಳು : ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ
ಜುಲೈ 11ರ ಬುಧವಾರ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜ್ಯದಲ್ಲಿ ಆಪ್ತರಾಗಿರುವ ನಾಯಕರಲ್ಲಿ ದಿನೇಶ್ ಗುಂಡೂರಾವ್ ಅವರು ಸಹ ಒಬ್ಬರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದಿರುವ ಸವಾಲುಗಳು!
ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ಮೂವರು ಮಕ್ಕಳಲ್ಲಿ ದಿನೇಶ್ ಗುಂಡೂರಾವ್ ಎರಡನೇಯವರು. ಬ್ರಾಹ್ಮಣ ಸಮುದಾಯಕ್ಕೆ ಸೇರಿದ ದಿನೇಶ್ ಗುಂಡೂರಾವ್ ವಿವಾಹವಾಗಿರುವುದು ಮುಸ್ಲಿಂ ಸಮುದಾಯಕ್ಕೆ ಸೇರಿದ ತಬು ಅವರನ್ನು... ದಿನೇಶ್ ಗುಂಡೂರಾವ್ ಪರಿಚಯ ಚಿತ್ರಗಳಲ್ಲಿ ಓದಿ...
ಬೆಂಗಳೂರಿನಲ್ಲಿ ಶಿಕ್ಷಣ
* ದಿನೇಶ್ ಗುಂಡೂರಾವ್ ಅಕ್ಟೋಬರ್ 9, 1969ರಲ್ಲಿ ಕೊಡಗಿನಲ್ಲಿ ಜನಿಸಿದರು. ತಂದೆ ಆರ್.ಗುಂಡೂರಾವ್, ತಾಯಿ ವರಲಕ್ಷ್ಮೀ ಗುಂಡೂರಾವ್.
* ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯಲ್ಲಿ ದಿನೇಶ್ ಗುಂಡೂರಾವ್ ಪ್ರಾಥಮಿಕ ಶಿಕ್ಷಣ ಪಡೆದರು. ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ನಲ್ಲಿ ಬಿಇ ಪದವಿ ಪಡೆದಿದ್ದಾರೆ.
ಯುವ ಕಾಂಗ್ರೆಸ್ ಸೇರ್ಪಡೆ
* ಬಿಇ ಪದವಿ ಪಡೆದ ಬಳಿಕ ದಿನೇಶ್ ಗುಂಡೂರಾವ್ ಕಂಪ್ಯೂಟರ್ ತರಬೇತಿ ಕೇಂದ್ರ ನಡೆಸುತ್ತಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷದ ಕಾರ್ಯಗಳಲ್ಲಿ ತೊಡಗಿದ್ದರು. ಪಕ್ಷಕ್ಕೆ ಅಧಿಕೃತವಾಗಿ ಸೇರುವುದಕ್ಕೂ 6 ವರ್ಷ ಮೊದಲೇ ಅವರು ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.
* 1993ರಲ್ಲಿ ಯುವ ಕಾಂಗ್ರೆಸ್ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. 1996ರಲ್ಲಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಅವರ ಸಂಘಟನಾ ಚತುರತೆ ನೋಡಿದ ಪಕ್ಷ 1998ರಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿತು.
ಗಾಂಧಿನಗರ ಕ್ಷೇತ್ರದಿಂದ ಚುನಾವಣೆಗೆ
* 1999ರಲ್ಲಿ ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಪಕ್ಷ ದಿನೇಶ್ ಗುಂಡೂರಾವ್ ಅವರಿಗೆ ಅವಕಾಶ ನೀಡಿತು. ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ಸತತವಾಗಿ 5ನೇ ಬಾರಿಗೆ ಗಾಂಧಿನಗರ ಕ್ಷೇತ್ರದಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.
* 2013ರ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಆದರೆ, ಸಂಪುಟ ಪುನಾರಚನೆ ಮಾಡುವಾಗ ಅವರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟು ಪಕ್ಷ ಸಂಘಟನೆಯ ಹೊಣೆ ನೀಡಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ
* ಸಿದ್ದರಾಮಯ್ಯ ಸಂಪುಟದಿಂದ ಹೊರಬಂದ ದಿನೇಶ್ ಗುಂಡೂರಾವ್ ಕೆಪಿಸಿಸಿ ಕಾರ್ಯಾಧ್ಯಕ್ಷರಾದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯಾಧ್ಯಕ್ಷರಾಗಿ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದರು.
* ಸಾಮಾಜಿಕ ಜಾಲತಾಣದಲ್ಲಿ ದಿನೇಶ್ ಗುಂಡೂರಾವ್ ಸಕ್ರಿಯರಾಗಿದ್ದಾರೆ. ರಾಷ್ಟ್ರೀಯ ವಾಹಿನಿಗಳಲ್ಲಿ ನಡೆಯುವ ಚರ್ಚೆಗಳಲ್ಲಿ ಕರ್ನಾಟಕ ಕಾಂಗ್ರೆಸ್ ಪರವಾಗಿ ಪಾಲ್ಗೊಳ್ಳುತ್ತಾರೆ. ಜುಲೈ 11ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.