ಆಪರೇಷನ್ ಹಸ್ತ: ಬಿಜೆಪಿಯ ಸಾಲು ಸಾಲು ನಾಯಕರು ಕಾಂಗ್ರೆಸ್ ಗೆ, ಬಿಜೆಪಿ ಶೋಚನೀಯ ಸ್ಥಿತಿಗೆ ಸಾಕ್ಷಿ: ಡಿ.ಕೆ. ಶಿವಕುಮಾರ್
ಬೆಂಗಳೂರು,ಮಾರ್ಚ್27: ಸಿಎಂ ಬಸವರಾಜ ಬೊಮ್ಮಾಯಿ ಅವರ ಬಲಗೈ ಭಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇನ್ನು ಚುನಾವಣಾ ಹೊತ್ತಲಿ ಆಪರೇಷನ್ ಹಸ್ತಕ್ಕೆ ಮುಂದಾಗಿರು ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಗಾಳ ಹಾಕುತ್ತಿದ್ದು, ಚಿಂತಾಮಣಿ, ಕೆ ಆರ್ ಪೇಟೆ, ಶಿಗ್ಗಾವ್ ಹಾಗೂ ಶಿವಮೊಗ್ಗ ಕ್ಷೇತ್ರದ ಅನ್ಯ ಪಕ್ಷಗಳ ನಾಯಕರು ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ರೆಹಮಾನ್ ಖಾನ್ ಅವರ ಸಮ್ಮುಖದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಅವರು, 'ರಾಜ್ಯದ ಮುಖ್ಯಮಂತ್ರಿಗಳು ತನ್ನ ಆಪ್ತರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವಾಗ ರಾಜ್ಯದ ಜನರ ವಿಶ್ವಾಸ ಗಳಿಸಲು ಸಾಧ್ಯವೇ? ಮಂಜುನಾಥ್ ಕುನ್ನೂರ ಅವರು ಲೋಕಸಭೆ ಮಾಜಿ ಸದಸ್ಯರು, ಮೂರು ಬಾರಿ ಶಾಸಕರಾಗಿದ್ದರು. ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವ ಹಾಗೂ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರುತ್ತಿದ್ದಾರೆ.
ಬಿಜೆಪಿ ನಾಯಕರೇ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಈ ಸೇರ್ಪಡೆ ಶಿಗ್ಗಾಂವ್ ಕ್ಷೇತ್ರದಲ್ಲಿ ಮುಂಬರುವ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಮಂಜುನಾಥ್ ಹಾಗೂ ಅವರ ಜತೆ ಬಂದಿರುವ ಎಲ್ಲ ನಾಯಕರಿಗೆ ನಾನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು.
ಬ್ರಿಟೀಷರ ಸೇನೆ ಟಿಪ್ಪುವನ್ನು ಕೊಂದಿದೆ ಎಂದು ಇತಿಹಾಸಕಾರರು ದಾಖಲೆ ಸಮೇತ ಹೇಳಿರುವ ಕುರಿತು ಮಾತನಾಡಿ,'ಇತಿಹಾಸಕಾರರು ಸತ್ಯವನ್ನು ಬಯಲಿಗೆಳೆದು ಬಿಜೆಪಿಯ ಸುಳ್ಳನ್ನು ಬೆತ್ತಲೆಗೊಳಿಸಿದ್ದಾರೆ. ಬಿಜೆಪಿಯವರು ಚುನಾವಣೆ ಸಮಯದಲ್ಲಿ ಜನರನ್ನು ದಾರಿ ತಪ್ಪಿಸಲು ಉರಿಗೌಡ, ನಂಜೇಗೌಡ ಟಿಪ್ಪುವನ್ನು ಕೊಂದರು ಎಂದು ಹೇಳುತ್ತಿದ್ದಾರೆ. ಇವು ಕೇವಲ ಕಾಲ್ಪನಿಕ ಪಾತ್ರಗಳಾಗಿದ್ದು, ಈ ಪಾತ್ರಗಳಿಗೆ ಅಶ್ವತ್ಥ್ ನಾರಾಯಣ ತಂದೆ, ಸಿ.ಟಿ ರವಿ ತಾಯಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗುತ್ತಿವೆ. ಇದು ಈಗಿನ ಇತಿಹಾಸ.

ಇತಿಹಾಸಕಾರರು ನಿಜವಾದ ಇತಿಹಾಸದ ಬಗ್ಗೆ ದಾಖಲೆ ಸಮೇತ ಟಿಪ್ಪುವನ್ನು ಬ್ರಿಟೀಷರ ಸೇನೆ ಕೊಂದಿದೆ ಎಂದು ಹೇಳಿದ್ದಾರೆ. ನಮ್ಮ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ರಾಜ್ಯ ವಿಧಾನಮಂಡಲದಲ್ಲಿ ಟಿಪ್ಪು ಕುರಿತು ಭಾಷಣ ಮಾಡಿದ್ದಾರೆ. ಬಿಜೆಪಿಯ ಸುಳ್ಳಿನ ಇತಿಹಾಸವನ್ನು ಇತಿಹಾಸಕಾರರು ನಗ್ನಗೊಳಿಸುತ್ತಿದ್ದಾರೆ. ದೇಶ ಹಾಗೂ ರಾಜ್ಯದಲ್ಲಿ ಅಶಾಂತಿ ಮೂಡಿಸಲು ಆಮೂಲಕ ಚುನಾವಣೆ ಗೆಲ್ಲಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ.
ಉರಿಗೌಡ ಎಂದು ತಿಗಳ ಸಮುದಾಯದಲ್ಲೂ ಇದ್ದಾರೆ, ನಂಜೇಗೌಡ ಎಂದು ಕುರುಬ ಸಮುದಾಯದಲ್ಲೂ ಇದ್ದಾರೆ. ಆದರೆ ಬಿಜೆಪಿಯವರು ಎಲ್ಲ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಖಂಡನೀಯ. ಇದಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ' ಎಂದು ಬಿಜೆಪಿ ನಾಯಕರ ವಿರುದ್ಧ ಕೆಂಡ ಕಾರಿದರು.
ಮೀಸಲಾತಿ ವಿಚಾರವಾಗಿ ಕುರಿತು ಮಾತನಾಡಿ, ಸಮಾಜದ ಎಲ್ಲ ಸಮುದಾಯಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟರು, ಒಕ್ಕಲಿಗರು, ಲಿಂಗಾಯತರು ಮೀಸಲಾತಿ ವಿಚಾರವಾಗಿ ಬೇಡಿಕೆ ಇಟ್ಟಿದ್ದು, ಬಿಜೆಪಿ ಮೀಸಲಾತಿ ಹೆಸರಿನಲ್ಲಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಲಿಂಗಾಯತರು ಶೇ.16, ಒಕ್ಕಲಿಗರು ಶೇ.12ರಷ್ಟು ಮೀಸಲಾತಿ ಕೇಳಿದ್ದಾರೆ.
ಅಲ್ಪಸಂಖ್ಯಾತರಿಗೆ ಇದ್ದ ಶೇ.4 ರಷ್ಟು ಕಸಿದು ಈ ಸಮುದಾಯಗಳಿಗೆ ಕೇವಲ ತಲಾ 2% ನೀಡಿದೆ. ಲಿಂಗಾಯತರು, ಒಕ್ಕಲಿಗರು ರೈತ ಸಮುದಾಯದವರಾಗಿದ್ದು, ಇವರು ಭಿಕ್ಷುಕರಲ್ಲ. ಇನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ವಿಚಾರದಲ್ಲಿ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಕೇಂದ್ರಕ್ಕೆ ಮೀಸಲಾತಿ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಿರಲಿಲ್ಲ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸಿ ಪ್ರತಿಭಟನೆಗೆ ಮುಂದಾದಾಗ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವ ಪತ್ರವನ್ನು ಬಿಡುಗಡೆ ಮಾಡಿದೆ.
ಈ ಸರ್ಕಾರ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಸರ್ಕಾರದ ಈ ತೀರ್ಮಾನವನ್ನು ರದ್ದು ಮಾಡಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗ ಬಿಜೆಪಿಯವರು ಇಂತಹ ಕುತಂತ್ರ ರೂಪಿಸುತ್ತಿದ್ದಾರೆ. ರಾಜ್ಯದ ಜನ ಇವರ ಕುತಂತ್ರ ಅರ್ಥ ಮಾಡಿಕೊಳ್ಳುವಷ್ಟು ಪ್ರಜ್ಞಾವಂತರಾಗಿದ್ದು, ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಿದ್ದಾರೆ , ಮತ್ತೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.












Click it and Unblock the Notifications