Karnataka Budget 2023: ಇದು ಬಿಜೆಪಿ ಸರ್ಕಾರದ ಬೈ ಬೈ ಬಜೆಟ್, ಶೋಕೇಸ್ ಬಜೆಟ್: ಡಿ ಕೆ ಶಿವಕುಮಾರ್
ಇದೊಂದು ಬಿಸಿಲ್ಗುದುರೆ ಬಜೆಟ್, ಕೈಗೆ ಏನೂ ಸಿಗಲ್ಲ. ಈ ಬಜೆಟ್ ಜಾತ್ರೆಯಲ್ಲಿ ಸಿಗುವ ಬಣ್ಣದ ಕನ್ನಡಕದಂತೆ, ಅದರಲ್ಲಿ ನೋಡಿದರೆ ಏನೂ ಕಾಣುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಛೇಡಿಸಿದ್ದಾರೆ.
ಬೆಂಗಳೂರು,ಫೆಬ್ರವರಿ17: ಇದು ಬಿಜೆಪಿ ಸರ್ಕಾರದ ಬೈ ಬೈ ಬಜೆಟ್, ಶೋಕೇಸ್ ಬಜೆಟ್, ಇದರಿಂದ ಯಾವುದೇ ಪ್ರಯೋಜನವಿಲ್ಲ. ಒಂದು ಕಾರ್ಯಕ್ರಮವೂ ಜಾರಿ ಆಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದರು.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ ವರ್ಷ 2.50 ಲಕ್ಷ ಕೋಟಿ ಬಜೆಟ್ ನಲ್ಲಿ ಎಷ್ಟು ಖರ್ಚಾಗಿದೆ ಎಂದು ಲೆಕ್ಕ ನೀಡಲಿ. ಇವರು ಆದಾಯ ಬರುವಂತಹ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ. ಕೇವಲ ಸಾಲ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಹೇಳಿದರು.
ಈ ಸರ್ಕಾರ ಬಜೆಟ್ ನಲ್ಲಿ ಎರಡನೇ ಹಂತದ ನಗರಗಳಿಗೆ ಯಾವ ಕಾರ್ಯಕ್ರಮ ನೀಡಿದ್ದಾರೆ? ಶಿವಮೊಗ್ಗದಲ್ಲಿ ಯಾರಾದರೂ ಒಬ್ಬ ಬಂಡವಾಳ ಹೂಡಿಕೆ ಮಾಡಿದ್ದಾನಾ? 10 ಲಕ್ಷ ಕೋಟಿ ಬಂಡವಾಳ ಹೂಡಿಕೆ ಇದೆ ಎಂದಿದ್ದಾರೆ. ಎಲ್ಲಿದೆ? ಅಲ್ಲಿ ಆಯನೂರು ಮಂಜುನಾಥ್ ಅವರು ಏನು ಹೇಳುತ್ತಿದ್ದಾರೆ ಎಂಬುದು ಈ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಕಿಡಿಕಾರಿರು.

ಇದೊಂದು ಬಿಸಿಲ್ಗುದುರೆ ಬಜೆಟ್, ಕೈಗೆ ಏನೂ ಸಿಗಲ್ಲ. ಈ ಬಜೆಟ್ ಜಾತ್ರೆಯಲ್ಲಿ ಸಿಗುವ ಬಣ್ಣದ ಕನ್ನಡಕದಂತೆ, ಅದರಲ್ಲಿ ನೋಡಿದರೆ ಏನೂ ಕಾಣುವುದಿಲ್ಲ ಎಂದು ಛೇಡಿಸಿದ್ದಾರೆ.
ಕಳೆದ ನಾಲ್ಕು ವರ್ಷದಿಂದ ಅಧಿಕಾರದಲ್ಲಿದ್ದಾಗ ಸರ್ಕಾರ ಜನರಿಗೆ ಏನೂ ಮಾಡಿಲ್ಲ. ಕಳೆದ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದನ್ನು ಜಾರಿ ಮಾಡಿಲ್ಲ. ಈ ಬಾರಿ ಬಜೆಟ್ ನಲ್ಲಿ ಜಾರಿ ಮಾಡುವಂತಹದ್ದು ಏನೂ ಇಲ್ಲ ಎಂದು ಹೇಳಿದ್ದಾರೆ. ದಮ್ಮು, ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳಿಗೆ ಬಜೆಟ್ ಓದುವಾಗ ಸ್ವರವೇ ಇರಲಿಲ್ಲ. ಈ ಬಜೆಟ್ ನಲ್ಲಿ ರೈತರು, ಕಾರ್ಮಿಕರು, ಯುವಕರು, ವರ್ತಕರು ಯಾರಿಗೂ ಲಾಭವಿಲ್ಲ. ಈ ಬಜೆಟ್ ನಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆಯೂ ಮಾತನಾಡಿಲ್ಲ. ಸ್ವಯಂ ಉದ್ಯೋಗ ಯೋಜನೆಗಳೂ ಇಲ್ಲ. ಹೀಗಾಗಿ ಈ ಬಜೆಟ್ ನಿಂದ ಯಾವುದೇ ವರ್ಗಕ್ಕೂ ಪ್ರಯೋಜನ ಆಗುವುದಿಲ್ಲ ಎಂದು ಹೇಳಿದರು.
ದಕ್ಷಿಣ ಭಾರತದ ಹೆಬ್ಬಾಗಿಲು ತೆರೆಯುತ್ತಿದ್ದೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ಇದು ಕೇವಲ ಘೋಷಣೆ, ಭರವಸೆ ಹಾಗೂ ಭಾಷಣಕ್ಕೆ ಸೀಮಿತವಾಗಿರುವ ಬಜೆಟ್. ಸರ್ಕಾರ ಕಳೆದ ಬಜೆಟ್ ನಲ್ಲಿ ಘೋಷಿಸಿದ ಭರವಸೆಗಳ ಜಾರಿ ಬಗ್ಗೆ ಕಾಂಗ್ರೆಸ್ ಪಕ್ಷ ನಿನ್ನೆ ಪ್ರಶ್ನೆ ಮಾಡಿತ್ತು. ಕಳೆದ ಬಜೆಟ್ ನಲ್ಲಿ ಶೇ.50ರಷ್ಟು ಅನುದಾನ ಖರ್ಚು ಮಾಡಿಲ್ಲ. ಇನ್ನು ಕಳೆದ ಚುನಾವಣೆ ಸಂದರ್ಭದಲ್ಲಿ ಅವರು ಕೊಟ್ಟ 600 ಭರವಸೆಗಳ ಪೈಕಿ 550 ಭರವಸೆ ಈಡೇರಿಸಿಲ್ಲ. ಆಮೂಲಕ 90%ರಷ್ಟು ವಿಫಲವಾಗಿದ್ದಾರೆ. ಆಮೂಲಕ ಬಿಜೆಪಿ ಸರ್ಕಾರ ಜನರ ಕಿವಿಗೆ ಹೂ ಇಡುವ ಪ್ರಯತ್ನ ಮಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ನಾಯಕರು ಕಿವಿ ಮೇಲೆ ಚೆಂಡುವ್ವ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಈ ಬಜೆಟ್ ಗೊತ್ತು ಗುರಿ ಇಲ್ಲದ ಬಜೆಟ್ ಆಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ನಗರ. ಇದರ ಅಭಿವೃದ್ಧಿಗೆ ಯಾವುದೇ ಕಾರ್ಯಯೋಜನೆ ಇಲ್ಲ. ಬೆಂಗಳೂರಿನ ರಸ್ತೆ ಗುಂಡಿಗೆ 7100 ಕೋಟಿ ವೆಚ್ಚ ಮಾಡಿದ್ದು, ಇದರಲ್ಲಿ ಯಾವ ರಸ್ತೆಗೆ ಎಷ್ಟು ಖರ್ಚು ಮಾಡಿದ್ದಾರೆ, ಎಷ್ಟು ರಸ್ತೆ ಗುಂಡಿ ಮುಕ್ತ ಮಾಡಿದ್ದಾರೆ ಎಂಬ ಯಾವುದೇ ಮಾಹಿತಿ ಇಲ್ಲ. ರಾಜ್ಯಕ್ಕೆ ಭ್ರಷ್ಟಾಚಾರದ ಕಳಂಕ ಅಂಟಿದ್ದು, ಈ ವಿಚಾರವಾಗಿ ಭ್ರಷ್ಟಾಚಾರ ನಿಗ್ರಹದ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದರು.












Click it and Unblock the Notifications