ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ
ಬೆಂಗಳೂರು, ಮಾರ್ಚ್ 4: ಕರ್ನಾಟಕದ 2022-23ನೇ ಸಾಲಿನ ಆಯವ್ಯಯದಲ್ಲಿ ಮೇಕೆದಾಟು ಯೋಜನೆಗೆ ಒಂದು ಸಾವಿರ ಕೋಟಿ ರೂಪಾಯಿ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿನಂದಿಸಿದ್ದಾರೆ.
"ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ," ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಬಜೆಟ್ - 2022: ಬೆಂಗಳೂರಿಗೆ ಸಿಕ್ಕಿದ್ದೇನು? ಹೈಲೆಟ್ಸ್
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ ತಮ್ಮ ಚೊಚ್ಚಲ ಬಜೆಟ್ನಲ್ಲಿ ಹಲವು ಕ್ಷೇತ್ರಗಳಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ನಡುವೆ 2022-23ನೇ ಸಾಲಿನಲ್ಲಿ ಮೇಕೆದಾಟು ಯೋಜನೆಗೆ 1000 ಕೋಟಿ ಹಣ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಈ ಕುರಿತು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸರಣಿ ಟ್ವೀಟ್ ಮಾಡಿದ್ದಾರೆ.
ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದ:
"ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕನ್ನಡಿಗರಿಗೂ ಇದರ ಪ್ರತಿಫಲ ಸಲ್ಲುತ್ತದೆ. ಇದು ನಮ್ಮೆಲ್ಲರ ಗೆಲುವು. ಸಾಮೂಹಿಕ ಹೋರಾಟದಿಂದ ಹಕ್ಕುಗಳನ್ನು ಪಡೆಯಬಹುದು ಎಂಬುದಕ್ಕೆ ಇದೊಂದು ನಿದರ್ಶನ. ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು," ಎಂದು ಡಿಕೆ ಶಿವಕುಮಾರ್ ತಮ್ಮ ಎರಡನೇ ಟ್ವೀಟ್ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ ಬಜೆಟ್ 2022: ಯಾವ ಇಲಾಖೆಗೆ ಎಷ್ಟು ಅನುದಾನ, ಇಲ್ಲಿದೆ ವಿವರ
ಸಾವಿರ ಕೋಟಿ ಘೋಷಣೆ ಕೇವಲ ಭರವಸೆಯಾಗದಿರಲಿ:
"ಕಳೆದ ಸಾಲಿನ ಬಜೆಟ್ನಲ್ಲಿ ಬೆಂಗಳೂರು ನಗರಕ್ಕೆ ಘೋಷಿಸಿದ್ದ 7,795 ಕೋಟಿ ರೂಪಾಯಿ ವೆಚ್ಚದ ಕಾರ್ಯಕ್ರಮವನ್ನು ಸರ್ಕಾರ ಒಂದು ವರ್ಷ ಕಳೆದರೂ ಈಡೇರಿಸಿಲ್ಲ ಎಂಬುದು ಗಮನಾರ್ಹ. ಹಾಗಾಗಿ ಮಹತ್ವಾಕಾಂಕ್ಷೆಯ ಯೋಜನೆಗೆ ಸಾವಿರ ಕೋಟಿ ರೂಪಾಯಿ ಘೋಷಣೆ ಕೇವಲ ಭರವಸೆಯಾಗಿ ಉಳಿಯದೆ ತ್ವರಿತವಾಗಿ ಕಾರ್ಯಗತಗೊಳ್ಳಬೇಕು," ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.