ಬಾಯಿಗೆ ಬೀಗ ಹಾಕೊಂಡಿರಿ; ಹೆಚ್ಚುವರಿ ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ನೋಟಿಸ್: ಡಿಕೆ ಶಿವಕುಮಾರ್ ಎಚ್ಚರಿಕೆ
ಬೆಂಗಳೂರು, ಜೂನ್ 29: ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರು ಸಿಎಂ ಬದಲಾವಣೆ ಬಗ್ಗೆ ಶನಿವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇಂದು ಇವರುಗಳು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ನಾನು, ಸಿದ್ದರಾಮಯ್ಯ ಅವರು ಪಕ್ಷದ ಹಿತ ದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದೇವೆ. ಈ ವಿಚಾರವಾಗಿ ಯಾವುದೇ ಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಹೈಕಮಾಂಡ್ ಬಳಿ ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಯಿತೇ ಎಂದು ಕೇಳಿದಾಗ "ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ. ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಿದರೆ ಸಾಕು. ನಾನು ಸಿಎಂ ಆಗಲು ಯಾರೂ ಶಿಫಾರಸ್ಸು ಮಾಡುವುದು ಬೇಡ. ನಾನು ಮಾಡಿರುವ ಕೆಲಸವನ್ನು ನೋಡಿ ನಮ್ಮ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ. ದಯವಿಟ್ಟು ಈ ವಿಚಾರ ಇಲ್ಲಿಗೆ ಮುಗಿಸಿಬಿಡಿ. ಹೆಚ್ಚುವರಿ ಡಿಸಿಎಂ ಬಗ್ಗೆ ಕೆಲವರು ಹೇಳಿಕೆ ಕೊಡುತ್ತಿದ್ದಾರಲ್ಲಾ ಎಂದು ಕೇಳಿದಾಗ "ಇದರ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ ಎಂದರು.
ಲಿಂಗಾಯತ ಸ್ವಾಮೀಜಿಗಳು ಸೇರಿದಂತೆ ಎಲ್ಲಾ ವಿಚಾರಗಳಲ್ಲಿ ಪದೇ, ಪದೇ ಸ್ವಾಮೀಜಿಗಳ ಮಧ್ಯಪ್ರವೇಶದ ಬಗ್ಗೆ ಕೇಳಿದಾಗ "ಯಾವ ಸ್ವಾಮೀಜಿಗಳು ಮಾತನಾಡಿಲ್ಲ, ಇವತ್ತೇ ಮಾತನಾಡಿದ್ದು ಅವರು. ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ ಎಂದು ಹೇಳಿದರು. ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿಗಳಿಗೆ ಹೇಳಿಕೊಟ್ಟು ಹೇಳಿಕೆ ನೀಡಿಸಲಾಗಿದೆ ಎನ್ನುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪರಮೇಶ್ವರ್ ಅವರ ಸಂಭಾಷಣೆ ಕುರಿತು ನನಗೇನೂ ಗೊತ್ತಿಲ್ಲ ಎಂದರು.
ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆ, ರಾಜ್ಯದ ಅಭಿವೃದ್ಧಿ, ಬಾಕಿ ಇರುವ ಯೋಜನೆಗಳು, ಅನುದಾನದಲ್ಲಿ ನ್ಯಾಯ ಒದಗಿಸುವ, ರಾಜ್ಯದ ಬೇಡಿಕೆಗಳ ವಿಚಾರವಾಗಿ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರು ಹಾಗೂ ಸಚಿವರ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಎರಡು ಗಂಟೆಗಳ ಕಾಲ ನಮ್ಮ ಚರ್ಚೆಯಲ್ಲಿ ಭಾಗವಹಿಸಿದ್ದರು. ನಂತರ ಎಲ್ಲರು ಒಟ್ಟಿಗೆ ಊಟ ಮಾಡಿದೆವು" ಎಂದರು.
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಾಯಿತು. ಹೆದ್ದಾರಿ ಕಾಮಗಾರಿಗಳಿಗೆ ಎಲ್ಲೆಲ್ಲಿ ಅಡಚಣೆಯಿದೆ ಆ ಭಾಗದ ಶಾಸಕರ ಜೊತೆ ಮಾತನಾಡಲಾಗುವುದು. ಅನೇಕ ಕಡೆ ದೇವಸ್ಥಾನಗಳಿವೆ. ಅವುಗಳನ್ನು ಮುಟ್ಟಬೇಡಿ ಎಂದು ಹೇಳುತ್ತಾರೆ. ಹೀಗೆ ಅನೇಕ ಸಮಸ್ಯೆಗಳಿವೆ, ಈ ಎಲ್ಲದರ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡಲಾಗುವುದು. ಅಲ್ಲೆಲ್ಲಾ ಮಾರ್ಗ ಬದಲಾವಣೆ ಮಾಡಲು ಆಗುತ್ತದೆಯೇ ಹಾಗೂ ರೈತರ ವಿರೋಧ ಇರುವ ಕಡೆ ಏನು ಮಾಡುವುದು ಎಂದು ಚರ್ಚೆ ನಡೆಸಲಾಯಿತು. ಇಂದು ಸಂಜೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಾಗುವುದು" ಎಂದು ಹೇಳಿದರು.











Click it and Unblock the Notifications