ಕೆಪಿಸಿಸಿ ಅಧ್ಯಕ್ಷರ ನೇಮಕ : ರಾಹುಲ್ ಗಾಂಧಿ ಕೊಟ್ಟ ಸೂಚನೆ ಏನು?
ಬೆಂಗಳೂರು, ಜೂನ್ 20 : ಕರ್ನಾಟಕ ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸುವವರು ಯಾರು? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು? ಎಂದು ಅಭಿಪ್ರಾಯ ಸಂಗ್ರಹಿಸಲು ಸೂಚನೆ ನೀಡಿದ್ದಾರೆ.
ಸಚಿವ ಸಂಪುಟ ರಚನೆ ವಿಚಾರದಲ್ಲಿ ಆಗಿರುವ ಗೊಂದಲವನ್ನು ಬಗೆಹರಿಸಿರುವ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷರ ನೇಮಕದತ್ತ ಗಮನ ಹರಿಸಿದೆ. ರಾಮನಗರ ಕ್ಷೇತ್ರದ ಉಪ ಚುನಾವಣೆ ಮುಗಿದ ಬಳಿಕ ಕೆಪಿಸಿಸಿಗೆ ನೂತನ ಸಾರಥಿ ಆಯ್ಕೆಯಾಗಬಹುದು.
ಕೆಪಿಸಿಸಿ ಅಧ್ಯಕ್ಷರಾಗಿ ಸುದೀರ್ಘ ಕಾಲ ಕಾರ್ಯ ನಿರ್ವಹಿಸಿದ ದಾಖಲೆಯನ್ನು ಡಾ.ಜಿ.ಪರಮೇಶ್ವರ ಅವರು ಮಾಡಿದ್ದಾರೆ. 2010ರ ಅ.29ರಿಂದ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಸದ್ಯ, ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ, ಹೊಸ ಅಧ್ಯಕ್ಷರು ಆಯ್ಕೆಯಾಗುವ ತನಕ ಅವರೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
2019ರಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ. ಆದ್ದರಿಂದ, ಅಧ್ಯಕ್ಷರು ಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ನಾಯಕರ ಅಭಿಪ್ರಾಯ ಸಂಗ್ರಹ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ನಾಯಕರ ಅಭಿಪ್ರಾಯ ಸಂಗ್ರಹ ಮಾಡುವಂತೆ ಸೂಚನೆ ನೀಡಿದ್ದಾರೆ. ರಾಮನಗರ ಕ್ಷೇತ್ರದ ಉಪ ಚುನಾವಣೆ ನಡೆದ ಬಳಿಕ ಕೆಪಿಸಿಸಿಗೆ ನೂತನ ಸಾರಥಿ ಘೋಷಣೆಯಾಗುವ ಸಾಧ್ಯತೆ ಇದೆ.
ಸಂಪುಟ ರಚನೆ ಸಮಯದಲ್ಲಿ ಉಂಟಾದ ಪ್ರಾದೇಶಿಕ ಅಸಮತೋಲವನ್ನು ನಿವಾರಿಸಲು ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಿದೆ. ಆದ್ದರಿಂದ, ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಒಲಿಯಬಹುದು ಎಂಬುದು ಲೆಕ್ಕಚಾರವಾಗಿದೆ.

ಹಲವು ನಾಯಕರ ಹೆಸರು
ಕೆಪಿಸಿಸಿ ಅಧ್ಯಕ್ಷರು ಯಾರಾಗಲಿದ್ದಾರೆ? ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿರುವ ಪ್ರಶ್ನೆ. ಅಧ್ಯಕ್ಷ ಸ್ಥಾನದ ಪಟ್ಟಿಯಲ್ಲಿ ಶಾಸಕ ಎಂ.ಬಿ.ಪಾಟೀಲ್, ಎಸ್.ಆರ್.ಪಾಟೀಲ್, ಅಪ್ಪಾಜ್ಜಿ ನಾಡಗೌಡ, ದಿನೇಶ್ ಗುಂಡೂರಾವ್, ಎಚ್.ಕೆ.ಪಾಟೀಲ್, ಕೆ.ಎಚ್.ಮುನಿಯಪ್ಪ ಅವರ ಹೆಸರು ಕೇಳಿಬರುತ್ತಿದೆ.
ಸಚಿವ ಸ್ಥಾನ ವಂಚಿತರಾದ ಎಂ.ಬಿ.ಪಾಟೀಲ್ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬರುತ್ತಿದೆ. ಉತ್ತರ ಕರ್ನಾಟಕ ಭಾಗದ ಪ್ರಭಾವಿ ಲಿಂಗಾಯತ ಸಮುದಾಯದ ಮುಖಂಡರಾದ ಪಾಟೀಲ್ ಅವರಿಗೆ ಅಧ್ಯಕ್ಷ ಸ್ಥಾನ ನೀಡಬಹುದು ಎಂಬುದು ಸದ್ಯದ ಮಾಹಿತಿ.

ಅಭಿಪ್ರಾಯ ಸಂಗ್ರಹ
ರಾಹುಲ್ ಗಾಂಧಿ ಅವರ ಸೂಚನೆಯಂತೆ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ನಡೆಸಿ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೆಂಗಳೂರಿಗೆ ಮರಳಿದ ಬಳಿಕ ಕೆ.ಸಿ.ವೇಣುಗೋಪಾಲ್ ಅವರು ರಾಜ್ಯದ ನಾಯಕರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ.

ಯಾರಿಗೆ ಅಧ್ಯಕ್ಷ ಸ್ಥಾನ?
ಕೆಪಿಸಿಸಿ ಅಧ್ಯಕ್ಷರನ್ನಾಗಿ ಯಾರನ್ನು ನೇಮಿಸಬೇಕು? ಎಂಬ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಿದೆ. ಹಲವಾರು ನಾಯಕರ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ರಾಜ್ಯ ನಾಯಕರು ಯಾರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ? ಎಂಬುದು ಸಹ ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications