ಕೆಪಿಸಿಸಿ ಪುನಾರಚನೆ : ಪದಾಧಿಕಾರಿಗಳ ನೇಮಕ 75ಕ್ಕೆ ಸೀಮಿತ
ಬೆಂಗಳೂರು, ಜೂನ್ 28 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ಎಲ್ಲಾ ಸಮಿತಿಗಳನ್ನು ವಿಸರ್ಜನೆ ಮಾಡಲಾಗಿದೆ. ಮೂರು ವಾರಗಳಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಲಿದೆ. ಆದರೆ, ಪದಾಧಿಕಾರಿಗಳ ಸಂಖ್ಯೆ 75ಕ್ಕೆ ಸೀಮಿತವಾಗಲಿದೆ.
ಈಗಾಗಲೇ ಕೆಪಿಸಿಸಿಯ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಮಿತಿಗಳನ್ನು ವಿಸರ್ಜನೆ ಮಾಡಲಾಗಿದೆ. ಒಂದು ತಿಂಗಳಿನಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲು ಕೆಪಿಸಿಸಿ ಅಧ್ಯ್ಕಕ್ಷ ದಿನೇಶ್ ಗುಂಡೂರಾವ್ ತೀರ್ಮಾನಿಸಿದ್ದಾರೆ.
ಕಳೆದ ಬಾರಿ 200ಕ್ಕೂ ಅಧಿಕ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಆದರೆ, ಅವರಲ್ಲಿ ಅನೇಕರು ಹೆಸರಿಗೆ ಮಾತ್ರ ಸಮಿತಿಗಳಲ್ಲಿ ಇದ್ದರು. ಈ ಬಾರಿ ಚಿಕ್ಕ ತಂಡವನ್ನು ರಚನೆ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ 75 ಪದಾಧಿಕಾರಿಗಳ ನೇಮಕ ಮಾತ್ರ ನಡೆಯಲಿದೆ.
ಜುಲೈ 20ರ ಬಳಿಕ ದಿನೇಶ್ ಗುಂಡೂರಾವ್ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅದಕ್ಕೂ ಮೊದಲು ಪದಾಧಿಕಾರಿಗಳನ್ನು ನೇಮಕ ಮಾಡಿ, ಅದಕ್ಕೆ ಹೈಕಮಾಂಡ್ ನಾಯಕರ ಒಪ್ಪಿಗೆಯನ್ನು ಅವರು ಪಡೆಯಲಿದ್ದಾರೆ.

ಜುಲೈ 10ರ ಬಳಿಕ ನೇಮಕಾತಿ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ವಿದೇಶ ಪ್ರವಾಸ ಕೈಗೊಳ್ಳಲಿದ್ದು, ಜುಲೈ 9ಕ್ಕೆ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ. ಬಳಿಕ ಪದಾಧಿಕಾರಿಗಳ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಜುಲೈ 22ರೊಳಗೆ ಹೊಸ ಪದಾಧಿಕಾರಿಗಳ ನೇಮಕ ನಡೆಯಲಿದೆ ಎಂಬುದು ಸದ್ಯ ಸಿಕ್ಕಿರುವ ಮಾಹಿತಿ.

ಸ್ಪಷ್ಟವಾದ ಮಾರ್ಗಸೂಚಿ ರಚನೆ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಬುಧವಾರ ರಾಜ್ಯ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮಾತನಾಡಿದ ಅವರು, 'ಪಕ್ಷ ಸಂಘಟನೆಗೆ ಒತ್ತು ನೀಡುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮೂರು ವಾರದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ನೇಮಕ ನಡೆಯಲಿದೆ. ಇದಕ್ಕೆ ಸ್ಪಷ್ಟವಾದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ' ಎಂದು ಹೇಳಿದರು.

ಪಂಚಾಯಿತಿ ಮಟ್ಟದಲ್ಲೂ ನೇಮಕ
ಕೆಪಿಸಿಸಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿದ ಬಳಿಕ ಡಿಸಿಸಿ, ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲೂ ನೇಮಕ ನಡೆಯಲಿದೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಂಚಾಯಿತಿ ಮಟ್ಟದಲ್ಲಿಯೂ ಪದಾಧಿಕಾರಿಗಳನ್ನು ನೇಮಕ ಮಾಡಲಿದೆ.

ದೆಹಲಿಗೆ ಪ್ರಯಾಣ
ಜುಲೈ 10ರ ಬಳಿಕ ಪದಾಧಿಕಾರಿಗಳ ಪಟ್ಟಿಯನ್ನು ತಯಾರು ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರ ಒಪ್ಪಿಗೆ ಪಡೆದ ಬಳಿಕ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.












Click it and Unblock the Notifications