ಬೆಂಗಳೂರಿಗೆ ಬಂದ ಕೆ.ಸಿ.ವೇಣುಗೋಪಾಲ್ : ಸರಣಿ ಸಭೆಗಳು!
ಬೆಂಗಳೂರು, ಜೂನ್ 26 : ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕ ಕಾಂಗ್ರೆಸ್ ಪಕ್ಷ ಸಂಘಟನೆಯತ್ತ ಗಮನಹರಿಸಿದೆ. ಕೆಪಿಸಿಸಿ ಪದಾಧಿಕಾರಿಗಳ ಸಮಿತಿಗಳನ್ನು ವಿಸರ್ಜನೆ ಮಾಡಲಾಗಿದ್ದು, ಈಗ ಹೊಸ ಮುಖಗಳಿಗೆ ಹುಡುಕಾಟ ನಡೆದಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಬುಧವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ರಾಜ್ಯದ ವಿವಿಧ ನಾಯಕರ ಜೊತೆ ಅವರು ಸಭೆಗಳನ್ನು ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋತ 21 ಅಭ್ಯರ್ಥಿಗಳ ಜೊತೆಯೂ ಸಭೆ ನಡೆಸುತ್ತಿದ್ದಾರೆ.
ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆಗೆ ಸೂಚನೆ
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ವಿವಿಧ ನಾಯಕರ ಜೊತೆ ಕೆಪಿಸಿಸಿ ಕಚೇರಿಯಲ್ಲಿ ವೇಣುಗೋಪಾಲ್ ಸಭೆ ನಡೆಸುತ್ತಿದ್ದಾರೆ. ಕೆಪಿಸಿಸಿ ಪುನಾರಚನೆ ಬಗ್ಗೆ ತೀರ್ಮಾನಗಳನ್ನು ಕೈಗೊಳ್ಳುವ ನಿರೀಕ್ಷೆ ಇದೆ.
ಕೆಪಿಸಿಸಿ ಪುನಾರಚನೆ : ದಿನೇಶ್ ಗುಂಡೂರಾವ್ ಹೇಳುವುದೇನು?
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಚುನಾವಣೆ ಎದುರಿಸಿತ್ತು. 22 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದರು..
ಡಿ.ಕೆ.ಶಿವಕುಮಾರ್ ಆಸೆಗೆ ತಣ್ಣೀರು ಹಾಕಿದ ಸಿದ್ದರಾಮಯ್ಯ?
ಪಕ್ಷ ಸಂಘಟನೆ ಬಗ್ಗೆ ಚರ್ಚೆ
ಕರ್ನಾಟಕ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭಿಸಲಿದೆ. ಜೆಡಿಎಸ್ ಆಗಸ್ಟ್ 20ರಿಂದ ಪಾದಯಾತ್ರೆ ಆರಂಭಿಸಲಿದೆ. ಆದ್ದರಿಂದ, ಕರ್ನಾಟಕ ಕಾಂಗ್ರೆಸ್ ಪಕ್ಷ ಸಂಘಟನೆಯತ್ತ ಗಮನಕೊಟ್ಟಿದೆ. ಈ ಕುರಿತು ಕೆ.ಸಿ.ವೇಣುಗೋಪಾಲ್ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.
ಅಭ್ಯರ್ಥಿಗಳ ಜೊತೆ ಚರ್ಚೆ
2019ರ ಲೋಕಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಕೆ.ಸಿ.ವೇಣುಗೋಪಾಲ್ ಸಭೆ ನಡೆಸುತ್ತಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ 21 ಕ್ಷೇತ್ರಗಳ ಸೋತ ಅಭ್ಯರ್ಥಿಗಳು ಪಾಲ್ಗೊಂಡಿದ್ದಾರೆ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಕೆಪಿಸಿಸಿ ಪುನಾರಚನೆ
ಕೆಪಿಸಿಸಿ ಪುನಾರಚನೆ ಮಾಡಲು ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ. ಹಿಂದೆ ದೊಡ್ಡ ಸಂಖ್ಯೆಯಲ್ಲಿ ಪದಾಧಿಕಾರಿಗಳನ್ನು ನೇಮಿಸಿದ್ದರೂ ಪಕ್ಷ ಸಂಘಟನೆಯಲ್ಲಿ ಹಲವು ನಾಯಕರು ತೊಡಗಿಸಿಕೊಂಡಿರಲಿಲ್ಲ. ಈಗ ಗ್ರಾಮೀಣ ಮಟ್ಟದಿಂದ ರಾಜ್ಯ ಮಟ್ಟದ ತನಕ ಹೊಸ ನಾಯಕರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಕೆ.ಸಿ.ವೇಣುಗೋಪಾಲ್ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಕಾಂಗ್ರೆಸ್ ಸದಸ್ಯರಿಗೆ ಸನ್ಮಾನ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದ ಸದಸ್ಯರನ್ನು ಪಕ್ಷದ ವತಿಯಿಂದ ಸನ್ಮಾನಿಸಲು ಜುಲೈ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದಿನ ಸಭೆಯಲ್ಲಿ ಸಮಾವೇಶದ ದಿನಾಂಕವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.