ಕಾನೂನು ಹೋರಾಟಕ್ಕೆ ಮುಂದಾದ ಕೆಪಿಎಸ್ಸಿ ಅಭ್ಯರ್ಥಿಗಳು
ಬೆಂಗಳೂರು, ಆ.18 : 2011ರ ಕೆಪಿಎಸ್ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳಯ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೈಬಿಡಲು ನಿರ್ಧರಿಸಿದ್ದಾರೆ. ಆಗಸ್ಟ್ 20ರಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ಉಪವಾಸ ಕೈಬಿಟ್ಟು, ಕಾನೂನು ಹೋರಾಟ ನಡೆಸಲು ಅಭ್ಯರ್ಥಿಗಳು ನಿರ್ಧರಿಸಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಳೆದ 29 ದಿನಗಳಿಂದ ಸರ್ಕಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, 2011ರ ನೇಮಕಾತಿ ಆದೇಶವನ್ನು ರದ್ದುಗೊಳಿಸಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ, ನೊಂದ ಅಭ್ಯರ್ಥಿಗಳ ಆಗ್ರಹಕ್ಕೆ ಸರ್ಕಾರ ಮಣಿಯದ ಹಿನ್ನಲೆಯಲ್ಲಿ ತಮ್ಮ ನಿರಶನವನ್ನು ಕೈಬಿಡಲು ನಿರ್ಧರಿಸಿದ್ದಾರೆ.

ಸರ್ಕಾರದಿಂದ ಯಾವುದೇ ನ್ಯಾಯ ಸಿಗುವುದಿಲ್ಲ. ಆದ್ದರಿಂದ ನಾವು ನಮ್ಮ ಪ್ರತಿಭಟನೆಯನ್ನು ಕೈಬಿಡುತ್ತಿದ್ದೇವೆ. ಆದರೆ, ನಮ್ಮ ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಪ್ರತಿಭಟನಾನಿರತ ಅಭ್ಯರ್ಥಿಗಳು ಹೇಳಿದ್ದಾರೆ. [ಕೆಪಿಎಸ್ಸಿ ಹಗರಣ : ಎಚ್ಡಿಕೆ ನೀಡಿದ ದಾಖಲೆಗಳೇನು?]
ಆಗಸ್ಟ್ 20ರಂದು ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ನೊಂದ ಅಭ್ಯರ್ಥಿಗಳು ಹಮ್ಮಿಕೊಂಡಿದ್ದಾರೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಈ ಬೃಹತ್ ಪ್ರತಿಭಟನೆಗೆ ಬೆಂಬಲ ನೀಡಲಿವೆ ಎಂದು ಅಭ್ಯರ್ಥಿಗಳು ತಿಳಿಸಿದ್ದಾರೆ. [ಕೆಪಿಎಸ್ಸಿ ನೇಮಕಾತಿ ರದ್ದು, ಸಿಡಿದೆದ್ದ ಅಭ್ಯರ್ಥಿಗಳು]
2011ರಲ್ಲಿ ನಡೆದಿದ್ದ ಕರ್ನಾಟಕ ಲೋಕಸೇವಾ ಆಯೋಗದ 362 ನೇಮಕಾತಿಯಲ್ಲಿ ಅಕ್ರಮದ ವಿಚಾರಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನಡೆಸಿದ್ದ ತನಿಖೆಯಲ್ಲಿ ಅಕ್ರಮ ಬಯಲಾದ ಪರಿಣಾಮ ರಾಜ್ಯ ಸರ್ಕಾರ ನೇಮಕಾತಿಯನ್ನು ರದ್ದತಿ ಮಾಡಿತ್ತು. ಸರ್ಕಾರದ ನಿರ್ಧಾರ ವಿರೋಧಿಸಿ ನೊಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications