ವ್ಯಕ್ತಿತ್ವ ಪರೀಕ್ಷೆ ಅಂಕ ಕಡಿತ ಮಾಡಿದ ಕೆಪಿಎಸ್‌ಸಿ ನಿರ್ಧಾರ ಸಂವಿಧಾನ ಬಾಹಿರ : ಸಿದ್ದರಾಮಯ್ಯ

ಬೆಂಗಳೂರು, ಮಾ.10: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ವ್ಯಕ್ತಿತ್ವ ಪರೀಕ್ಷೆಗೆ ನಿಗದಿಪಡಿಸಿರುವ ಅಂಕಗಳನ್ನು ಕಡಿತಗೊಳಿಸುವ ಕುರಿತು ಸರ್ಕಾರ ಸಂವಿಧಾನ ಬಾಹಿರವಾದ ತೀರ್ಮಾನವನ್ನು ತೆಗೆದುಕೊಂಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.‌

ಈ ನಿರ್ಧಾರವನ್ನು ಹಿಂಪಡೆದು, ಯುಪಿಎಸ್‍ಸಿಯ ಮಾದರಿಯಲ್ಲಿ ಲಿಖಿತ ಪರೀಕ್ಷೆಯ ಒಟ್ಟು ಅಂಕಗಳ ಶೇ.12.5 ರಷ್ಟನ್ನು ನಿಗದಿಪಡಿಸಿ ವ್ಯಕ್ತಿತ್ವ ಪರೀಕ್ಷೆಯನ್ನು ನಡೆಸುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಹಾಗೂ ಈಗ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಅಂಕ ಕಡಿತ ಕುರಿತಂತೆ ಹಲವರು ಸರ್ಕಾರಕ್ಕೆ ಪತ್ರ ಬರೆದು ಆಕ್ಷೇಪವನ್ನು ವ್ಯಕ್ತಪಡಿಸಿರುತ್ತಾರೆ. ಆದರೂ ಸಹ ಸರ್ಕಾರ ತನ್ನ ನಿರ್ಧಾರಗಳನ್ನು ಇನ್ನೂ ಸಹ ಬದಲಿಸಿಲ್ಲ ಎಂದು ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

KPSC Decision to Cut Personality Test Marks Is Unconstitutional: Siddaramaiah

ವ್ಯಕ್ತಿತ್ವ ಪರೀಕ್ಷೆ ಯಾವಾಗ ಮಾಡಲಾಗುತ್ತದೆ?

ಲೋಕಸೇವಾ ಆಯೋಗವು ಆಯ್ಕೆ ಮಾಡುವ 'ಎ' ಮತ್ತು 'ಬಿ' ಶ್ರೇಣಿಯ ಅಧಿಕಾರಿಗಳಿಗೆ ವ್ಯಕ್ತಿತ್ವ ಪರೀಕ್ಷೆ ಮಾಡುವಾಗ ಅಂಕಗಳನ್ನು ಲಿಖಿತ ಪರೀಕ್ಷೆ ಅಂಕಗಳ ಶೇ.2 ರಷ್ಟಕ್ಕೆ ಇಳಿಸಿದೆ. ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರವು ಕರ್ನಾಟಕದ ಪಾಲಿಗೆ ಅತ್ಯಂತ ಅನಾಹುತಕಾರಿಯಾಗಿದೆ. ದೇಶದ ಹಲವು ರಾಜ್ಯಗಳು 100 ರಿಂದ 275 ಅಂಕಗಳನ್ನು ವ್ಯಕ್ತಿತ್ವ ಪರೀಕ್ಷೆಗಾಗಿ ನಿಗದಿಪಡಿಸಿಕೊಂಡಿವೆ.

ಜಗತ್ತಿನಲ್ಲಿ ಗುಣ ಮಟ್ಟದ ಆಯ್ಕೆಯ ವಿಚಾರದಲ್ಲಿ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡಿರುವ ಕೇಂದ್ರ ಲೋಕ ಸೇವಾ ಆಯೋಗವು 1750 ಅಂಕಗಳಿಗೆ ಲಿಖಿತ ಪರೀಕ್ಷೆಗೆ ಹಾಗೂ 275 ಅಂಕಗಳನ್ನು ವ್ಯಕ್ತಿತ್ವ ಪರೀಕ್ಷೆಗೆ ಅಳವಡಿಸಿಕೊಂಡಿದೆ. ವ್ಯಕ್ತಿತ್ವ ಪರೀಕ್ಷೆಗಳಿಗಾಗಿ ಹಲವು ರಾಜ್ಯಗಳು ಭಿನ್ನ ಭಿನ್ನ ಮಾದರಿಗಳನ್ನು ಅಳವಡಿಸಿಕೊಂಡಿವೆ. ಉದಾಹರಣೆಗೆ ಅಸ್ಸಾಂನಲ್ಲಿ-275, ಪಶ್ಚಿಮ ಬಂಗಾಳ-200, ಬಿಹಾರ-120, ಉತ್ತರಾಖಂಡದಲ್ಲಿ -200, ಉತ್ತರ ಪ್ರದೇಶ-100, ಗುಜರಾತ್-100, ಮಹಾರಾಷ್ಟ್ರ-100, ಮಧ್ಯಪ್ರದೇಶ-175, ಪಂಜಾಬ್-150 ಮತ್ತು ತಮಿಳುನಾಡು ರಾಜ್ಯವು 100 ಅಂಕಗಳನ್ನು ನಿಗಧಿಪಡಿಸಿಕೊಂಡಿದೆ. ಯು.ಪಿ.ಎಸ್.ಸಿ.ಯಲ್ಲಿ ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಯ ನಡುವಿನ ಅನುಪಾತ ಶೇ.15.71 ರಷ್ಟಿದೆ. ನಮ್ಮ ರಾಜ್ಯದಲ್ಲಿ 200 ಅಂಕಗಳಿಗೆ ವ್ಯಕ್ತಿತ್ವ ಪರೀಕ್ಷೆ ಇರುತ್ತಿತ್ತು. ಆನಂತರ ದಿ:04-06-2020 ರಲ್ಲಿ 200 ಅಂಕಗಳ ಬದಲಿಗೆ 50 ಅಂಕಗಳಿಗೆ ಕಡಿತಗೊಳಿಸಲಾಯಿತು.

KPSC Decision to Cut Personality Test Marks Is Unconstitutional: Siddaramaiah

ಕೇವಲ 25 ಅಂಕಗಳಿಗೆ ಇಳಿಕೆ:

2020 ಕ್ಕಿಂತ ಮೊದಲು 1750 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 200 ಅಂಕಗಳಿಗೆ ವ್ಯಕ್ತಿತ್ವ ಪರೀಕ್ಷೆ ಇರುತ್ತಿತ್ತು. ಈಗ ಕಳೆದ ಫೆ.18 ರಂದು ಕೆಪಿಎಸ್‍ಸಿಯ ಜೊತೆ ಸಮಾಲೋಚಿಸದೆ ಏಕಾಏಕಿಯಾಗಿ ಸರ್ವಾಧಿಕಾರಿ ಪ್ರವೃತ್ತಿಯಿಂದ ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು 25 ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಗಳ ಅಂಕಗಳ ನಡುವಿನ ಅನುಪಾತ ಶೇ.2 ಕ್ಕೆ ಇಳಿಸಿದಂತಾಗಿದೆ.

ಸಾಂವಿಧಾನಿಕ ಸಂಸ್ಥೆಗಳಾದ ಲೋಕಸೇವಾ ಆಯೋಗಗಳು ಭಾರತದ ಸಂವಿಧಾನದ ಅನುಚ್ಛೇದ-315 ರಡಿ ರಚಿತವಾಗಿವೆ. ಅನುಚ್ಛೇದ-320 ರಡಿ ಆಯೋಗಗಳು ಕಾರ್ಯನಿರ್ವಹಣೆ ಮಾಡುತ್ತವೆ. ಸರ್ಕಾರಗಳು ನೇಮಕಾತಿ ಇತ್ಯಾದಿಗಳ ಕುರಿತು ನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊಂದಿವೆಯಾದರೂ ಲೋಕಸೇವಾ ಆಯೋಗದ ಜೊತೆ ಸಮಾಲೋಚನೆ ನಡೆಸಿಯೇ ನಿಯಮಗಳನ್ನು ರೂಪಿಸುವುದು ಸಾಂವಿಧಾನಿಕ ಸಂಸ್ಥೆಗಳಿಗೆ ನೀಡುವ ಗೌರವವಾಗಿರುತ್ತದೆ. ಆದರೆ ಬಿಜೆಪಿ ಸರ್ಕಾರಗಳು ಅಧಿಕಾರಕ್ಕೆ ಬಂದ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ನಿರಂತರವಾಗಿ ದಮನ ಮಾಡುತ್ತಿವೆ ಎಂಬ ಆರೋಪವನ್ನು ಇನ್ನಷ್ಟು ಗಟ್ಟಿಗೊಳಿಸಲೆಂಬಂತೆ ಕೆಪಿಎಸ್‍ಸಿಯ ವಿಚಾರದಲ್ಲೂ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ.

ಕೆಪಿಎಸ್‍ಸಿಯ ಮೂಲಕ ಆಯ್ಕೆಯಾಗುವ ಅಧಿಕಾರಿಗಳು ಕನಿಷ್ಠ 30 ವರ್ಷಗಳ ಕಾಲ ರಾಜ್ಯದ ತಾಲ್ಲೂಕು, ಉಪ ವಿಭಾಗ, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳಾಗಿ ಕೆಲಸ ಮಾಡುತ್ತಾರೆ. ಗ್ರಾಮೀಣ, ಅರೆ ಗ್ರಾಮೀಣ, ಪಟ್ಟಣ, ನಗರ ಪ್ರದೇಶಗಳಲ್ಲಿನ ರೈತರು, ಪಶು ಪಾಲಕರು, ಬಡವರು, ಹಿಂದುಳಿದವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಕುಶಲಕರ್ಮಿಗಳು, ಕಾರ್ಮಿಕರು ಹೀಗೆ ವಿವಿಧ ಸಾಮಾಜಿಕ ಗುಂಪುಗಳ ಜೊತೆ ಅವರು ಮಾತೃ ಹೃದಯದಿಂದ ನಡೆದುಕೊಳ್ಳಬೇಕಾಗುತ್ತದೆ. ವಿವಿಧ ಸಾಮಾಜಿಕ, ಧಾರ್ಮಿಕ, ಭಾಷಿಕ ಗುಂಪುಗಳ ಹಿನ್ನೆಲೆಯ ಅರಿವು ಇರಬೇಕಾಗುತ್ತದೆ. ಅರಿವು ಮತ್ತು ತಿಳುವಳಿಕೆಗಳು ಇರಬೇಕಾಗುತ್ತದೆ. ಈ ರೀತಿಯ ವ್ಯಕ್ತಿತ್ವ ಪುಸ್ತಕಗಳಿಂದ ಬರುವಂಥದ್ದಲ್ಲ. ವಿವಿಧ ಸಾಮಾಜಿಕ ಗುಂಪುಗಳ ಕುರಿತು ಹೆಚ್ಚು ತಿಳುವಳಿಕೆ ಮತ್ತು ಕರುಣೆ ಇರಬೇಕಾಗುತ್ತದೆ. ಅಭ್ಯರ್ಥಿಗಳು ಹೆಚ್ಚು ಅಂಕಗಳನ್ನು ಗಳಿಸುವುದರ ಕುರಿತು ನಮಗೆಲ್ಲರಿಗೂ ಗೌರವವಿದೆ. ಅದರ ಜೊತೆಯಲ್ಲಿಯೇ ಒಂದು ತಾಲ್ಲೂಕನ್ನು, ಉಪ ವಿಭಾಗ, ಜಿಲ್ಲೆ ಹಾಗೂ ರಾಜ್ಯವನ್ನು ಮುನ್ನಡೆಸಬೇಕಾದ ನಾಯಕತ್ವದ ಗುಣವು ಸಹ ಅಧಿಕಾರಿಯಾಗುವವರಿಗೆ ಇರಬೇಕಾಗುತ್ತದೆ. ಈ ರೀತಿಯ ಗುಣ ಇದೆಯೇ ಇಲ್ಲವೇ ಎಂಬುದು ಲಿಖಿತ ಪರೀಕ್ಷೆಯ ಮೂಲಕ ಗಳಿಸುವ ಅಂಕಗಳಿಂದ ಮಾತ್ರ ನಿರ್ಧಾರವಾಗುವುದಿಲ್ಲ. ಕರುಣೆ, ಸಾಮಾನ್ಯ ಜ್ಞಾನ, ನಾಯಕತ್ವದ ಗುಣ ಮುಂತಾದ ಸ್ವಭಾವಗಳು ಕಾರ್ಯಾಂಗದ ಪ್ರಮುಖ ಭಾಗವಾಗುವ 'ಎ' ಮತ್ತು 'ಬಿ' ಶ್ರೇಣಿಯ ಅಧಿಕಾರಿಯಾಗುವವರಿಗೆ ಇದೆಯೊ ಇಲ್ಲವೊ ಎಂಬುದನ್ನು ವ್ಯಕ್ತಿತ್ವ ಪರೀಕ್ಷೆಯ ಮೂಲಕ ನಿರ್ಧರಿಸಬೇಕಾಗುತ್ತದೆ.

ಆಡಳಿತ ನಡೆಸುವಾಗ ಪದೇ ಪದೇ ಉಂಟಾಗುವ ಹಲವು ರೀತಿಯ ಬಿಕ್ಕಟ್ಟುಗಳನ್ನು ಸಂದರ್ಭಗಳ ಸೂಕ್ಷ್ಮತೆ ಮತ್ತು ಹಿನ್ನೆಲೆಗಳನ್ನು ಅರಿತು ಅವುಗಳನ್ನು ನಿಭಾಯಿಸಬೇಕಾಗುತ್ತದೆ. ಈ ಕಾರಣಕ್ಕಾಗಿಯೇ ಕೇಂದ್ರ ಲೋಕ ಸೇವಾ ಆಯೋಗವು ಇಂದಿಗೂ ಕೂಡಾ 275 ಅಂಕಗಳಿಗೆ ವ್ಯಕ್ತಿತ್ವ ಪರೀಕ್ಷೆ ನಡೆಸುತ್ತದೆ.

M/s Ashok Kumar yadav and others V/s State of Hariyana and others Reported in 1987 AIR 454 (SC) ನೀಡಿದ ತೀರ್ಪಿನಂತೆ ಲಿಖಿತ ಪರೀಕ್ಷೆಗೂ, ವ್ಯಕ್ತಿತ್ವ ಪರೀಕ್ಷೆಯ ಅಂಕಗಳ ನಡುವಿನ ಅನುಪಾತ ಕನಿಷ್ಠ ಶೇ.12.2 ರಷ್ಟು ಇರಬೇಕು ಎಂದು ಸರ್ವೋಚ್ಛ ನ್ಯಾಯಾಲಯವು 1985ರ ಮೇ10 ರಂದು ತೀರ್ಪು ನೀಡಿದೆ. ಆದರೆ ಕರ್ನಾಟಕದಲ್ಲಿ ಈಗ ಈ ಅನುಪಾತವನ್ನು ಶೇ.2 ಕ್ಕೆ ಇಳಿಸಲಾಗಿದೆ.

ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಲೋಪ ದೋಷಗಳಿಲ್ಲವೆಂದಲ್ಲ, ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಗಳಿಗೆ ನಿಗದಿಪಡಿಸಿದ ಅಂಕಗಳಿಗೆ ಸಂಬಂಧಪಟ್ಟಂತೆ ಹಲವಾರು ಆರೋಪಗಳು ಇವೆ. ಹಾಗಾಗಿಯೇ ನಮ್ಮ ಸರ್ಕಾರದ ಅವಧಿಯಲ್ಲಿ ಪಿ.ಸಿ.ಹೋಟಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಪಾರದರ್ಶಕತೆಯನ್ನು ತರಲು ಪ್ರಯತ್ನಿಸಿದ್ದೆವು. ಪಿ.ಸಿ.ಹೋಟಾ ಸಮಿತಿಯ ಹಲವು ಶಿಫಾರಸ್ಸುಗಳನ್ನು ಅನುಷ್ಠಾನ ಮಾಡಿದ ನಂತರ ಭ್ರಷ್ಟಾಚಾರದ ಆರೋಪಗಳು ಬಹುತೇಕ ಕಡಿಮೆಯಾಗಿವೆ. ಹಾಗಾಗಿ ಯುಪಿಎಸ್‍ಸಿ ಯ ಮಾದರಿಯಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಂಡು ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಸಂದರ್ಶನಗಳನ್ನು ನಡೆಸಬೇಕಾಗಿದೆಯೇ ಹೊರತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನೆ ಕಡಿಮೆ ಮಾಡಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯದ ಕಾರ್ಯಾಂಗಕ್ಕೆ ಮಾನವೀಯ ಮತ್ತು ಸಮರ್ಥ ಅಧಿಕಾರಿಗಳು ಇಲ್ಲದೇ ಹೋಗುತ್ತದೆ. ಇದರ ದುಷ್ಪರಿಣಾಮ ರಾಜ್ಯದ ಮುಂದಿನ ಭವಿಷ್ಯದ ಮೇಲೆ ಆಗುತ್ತದೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+