ಡಿಕೆಶಿ ಬಂಧನ ಖಂಡನೆ ಹೋರಾಟಕ್ಕೂ ಕರವೇಗೂ ಸಂಬಂಧವಿಲ್ಲ
Recommended Video
ಬೆಂಗಳೂರು, ಸೆಪ್ಟೆಂಬರ್ 11 : "ಕಾಂಗ್ರೆಸ್ ನಾಯಕ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ನಡೆಸುತ್ತಿರುವ ಹೋರಾಟಕ್ಕೂ ಕರ್ನಾಟಕ ರಕ್ಷಣಾ ವೇದಿಕೆಗೂ ಯಾವುದೇ ಸಂಬಂಧವಿಲ್ಲ" ಎಂದು ನಾರಾಯಣ ಗೌಡ ಸ್ಪಷ್ಟಪಡಿಸಿದರು.
ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ. ಎ. ನಾರಾಯಣ ಗೌಡ, "ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕುತಂತ್ರ ಮಾಡಿ ಬಂಧಿಸಿದೆ" ಎಂದು ಆರೋಪಿಸಿದರು.
"ಶಿವಕುಮಾರ್ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದರೂ ಅನಗತ್ಯವಾಗಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿರುವುದು ಸ್ಪಷ್ಟ" ಎಂದು ದೂರಿದರು.

"ಬೆಂಗಳೂರಿನಲ್ಲಿ ನಡೆಯುತ್ತಿರುವ ಇಂದಿನ ಹೋರಾಟದಲ್ಲಿ ಸಮುದಾಯದ ನಾಯಕನಾಗಿ ನಾನು ಭಾಗವಹಿಸುತ್ತಿದ್ದೇನೆ. ಕರ್ನಾಟಕ ರಕ್ಷಣಾ ವೇದಿಕೆಗೂ ಈ ಹೋರಾಟಕ್ಕೂ ಸಂಬಂಧವಿಲ್ಲ" ಎಂದು ಅವರು ಸ್ಪಷ್ಟನೆ ನೀಡಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನವಾಗಿದ್ದು ಅವರು ಇಡಿ ವಶದಲ್ಲಿದ್ದಾರೆ. ಬಂಧನ ಖಂಡಿಸಿ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ವಿಶ್ವ ಒಕ್ಕಲಿಗರ ಒಕ್ಕೂಟದಡಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಿವೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆ ತನಕ ಪ್ರತಿಭಟನೆ ನಡೆಯಲಿದ್ದು, ವಿವಿಧ ಪಕ್ಷಗಳ ನಾಯಕರು, ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.











Click it and Unblock the Notifications