ಕೃಷ್ಣಾ ನದಿಗೆ ನೀರು : ಶೀಘ್ರದಲ್ಲೇ ಕುಮಾರಸ್ವಾಮಿ, ಫಡ್ನವೀಸ್ ಸಭೆ
ಬೆಂಗಳೂರು, ಮೇ 31 : ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸುವ ಕುರಿತು ಶೀಘ್ರದಲ್ಲಿಯೇ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ತೆರಳಿದ್ದ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ.
ಉಭಯ ರಾಜ್ಯಗಳ ನಡುವೆ ಶಾಶ್ವತ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಪ್ರಾಥಮಿಕ ಹಂತದ ಸಮಾಲೋಚನೆ ನಡೆಸಿದರು.

ಕರ್ನಾಟಕದ ಪ್ರಸ್ತಾವನೆಗೆ ಮಹಾರಾಷ್ಟ್ರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕೃಷ್ಣಾ ನದಿ ನೀರು ಹಂಚಿಕೆ ಕುರಿತು ವಿವರವಾಗಿ ಮಾತುಕತೆ ನಡೆಸಲು ಸಮಯ ನಿಗದಿಪಡಿಸುವುದಾಗಿ ದೇವೇಂದ್ರ ಫಡ್ನವೀಸ್ ಅವರು ಭರವಸೆ ನೀಡಿದ್ದಾರೆ.
ಭೀಮಾ ನದಿಗೆ ನೀರು : ಪ್ರಸ್ತುತ ಕರ್ನಾಟಕದಲ್ಲಿನ ತೀವ್ರ ಬರಗಾಲದ ಹಿನ್ನಲೆಯಲ್ಲಿ ಮಹಾರಾಷ್ಟ್ರದಿಂದ ಭೀಮಾ ನದಿಗೆ 1 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದ ಉಜನಿಯಿಂದ ಗುರುವಾರ 1 ಟಿಎಂಸಿ ನೀರು ಬಿಡಲಾಗಿದ್ದು, ಅದು ಲಚ್ಯಾಣ ಸಮೀಪದ ಭೀಮಾ ನದಿಯ ಹಿಂಗಣಿ ಬಾಂದಾರಕ್ಕೆ ಬಂದು ತಲುಪಿದೆ.












Click it and Unblock the Notifications