KRS Dam: ಕೆಆರ್ಎಸ್ ತುಂಬಲು 2 ಅಡಿ ಬಾಕಿ; 50,000 ಕ್ಯೂಸೆಕ್ಸ್ ನೀರು ಬಿಡುಗಡೆ
ಕಾವೇರಿ ನದಿ ಪಾತ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕೆಆರ್ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಕಬಿನಿ ಜಲಾಶಯ ಭರ್ತಿಯಾಗಿದೆ. ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲು ಇನ್ನು 2 ಅಡಿ ಮಾತ್ರ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ.
ಭಾನುವಾರ ಬೆಳಗ್ಗೆ ಹೊರಬಿಡುತ್ತಿರುವ ನೀರಿನ ಪ್ರಮಾಣವನ್ನು 50,000 ಕ್ಯೂಸೆಕ್ಸ್ಗೆ ಹೆಚ್ಚಿಸಲಾಗಿದೆ. ಪ್ರಸ್ತುತ ಜಲಾಶಯಕ್ಕೆ 67,617 ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ. ಕೆಆರ್ ಎಸ್ ಗರಿಷ್ಠ ನೀರಿನ ಮಟ್ಟ 124.80 ಅಡಿ ಆಗಿದ್ದು, ಈಗ 122.70 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಯಾಗಲು ಇನ್ನು ಎರಡು ಬಾಕಿ ಇದ್ದರು, ಮುನ್ನೆಚ್ಚರಿಕಾ ಕ್ರಮವಾಗಿ ನೀರು ಹೊರಬಿಡಲಾಗುತ್ತಿದೆ.

ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವೇಶ ನಿಷೇಧ
ಕೆಆರ್ಎಸ್ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಕಾರಣ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರವನ್ನು ಶುಕ್ರವಾರ ಸ್ಥಗಿತಗೊಳಿಸಲಾಗಿತ್ತು. ಆದರೆ ಈಗ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪಕ್ಷಿಧಾಮಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮೈಸೂರು ಉಪಸಂರಕ್ಷಣಾಧಿಕಾರಿ ಬಿಎಂ ಶರಣಬಸಪ್ಪ ಆದೇಶ ಕೊಟ್ಟಿದ್ದಾರೆ.
ಹೇಮಾವತಿ ಜಲಾಶಯ ಕೂಡ ಭರ್ತಿಯಾಗಿದ್ದು ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2922 ಅಡಿಗಳಾಗಿದ್ದು ಪ್ರಸ್ತುತ 2929.35 ಅಡಿಗಳಷ್ಟು ನೀರು ಸಂಗ್ರಹವಾಗಿದೆ. 33,141 ಕ್ಯೂಸೆಕ್ ಒಳಹರಿವು ಇದ್ದು, 27189 ಕ್ಯೂಸೆಲ್ ನೀರನ್ನು ನದಿಗೆ ಹೊರಬಿಡಲಾಗುತ್ತಿದೆ. ಕಾಲುವೆಗೆ 1200 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ಕಬಿನಿ ಜಲಾಶಯ ಕೂಡ ಭರ್ತಿಯಾಗಿದ್ದು 39,396 ಕ್ಯೂಸೆಕ್ ಒಳಹರಿವು ಇದ್ದು, 36,033 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಗರಿಷ್ಠ ನೀರಿನ ಮಟ್ಟ 2284 ಅಡಿಗಳಾಗಿದ್ದು ಸದ್ಯ 2281.23 ಅಡಿ ನೀರು ಸಂಗ್ರಹವಾಗಿದೆ.












Click it and Unblock the Notifications