ಗೌಡರಿಂದ ತೆರವಾದ ಪ್ರತಿಪಕ್ಷ ಸ್ಥಾನಕ್ಕೆ ಈಶ್ವರಪ್ಪ?
ಬೆಂಗಳೂರು, ಮೇ 19 : ಲೋಕಸಭೆ ಚುಣಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಪರಿಷತ್ ಪ್ರತಿಪಕ್ಷ ನಾಯಕ ಡಿ.ವಿ.ಸದಾನಂದ ಗೌಡರಿಂದ ತೆರವಾಗುತ್ತಿರುವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ಅವರ ಹಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಲೋಕಸಭೆಗೆ ಹೋಗುತ್ತಿದ್ದಾರೆ. ಆದ್ದರಿಂದ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ಸ್ಥಾನ ತೆರವಾಗುತ್ತಿದೆ. ಜೂನ್ ನಲ್ಲಿ ಪರಿಷತ್ ಚುನಾವಣೆಯ ನಡೆಯಲಿದ್ದು ಈಶ್ವರಪ್ಪ ಅವರು ಈ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ.

ಜೂನ್ ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಕೇವಲ ಒಬ್ಬ ಸದಸ್ಯರನ್ನು ಮಾತ್ರ ಆಯ್ಕೆ ಮಾಡಿ ಕಳುಹಿಸಲು ಬಿಜೆಪಿಗೆ ಅವಕಾಶವಿದೆ. ಹೀಗೆ ಆಯ್ಕೆಯಾದವರು ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಲಿದ್ದಾರೆ. ಈ ಸ್ಥಾನಕ್ಕೆ ಈಶ್ವರಪ್ಪ ಮತ್ತು ವಿ.ಸೋಮಣ್ಣ ಅವರ ಹೆಸರು ಕೇಳಿಬರುತ್ತಿದ್ದು, ಈಶ್ವರಪ್ಪ ಆಯ್ಕೆ ಖಚಿತ ಎಂದು ತಿಳಿದುಬಂದಿದೆ. [ಪರಿಷತ್ ನತ್ತ ಹೊರಟ ಈಶ್ವರಪ್ಪ]
ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡ ಬಳಿಕ ಕೆ.ಎಸ್.ಈಶ್ವರಪ್ಪ ಅವರು ರಾಜ್ಯ ಬಿಜೆಪಿಯಲ್ಲಿ ಯಾವುದೇ ಹುದ್ದೆಯನ್ನು ಪಡೆದಿಲ್ಲ. ಈಶ್ವರಪ್ಪ ಅವರನ್ನು ಪರಿಷತ್ ಪ್ರತಿಪಕ್ಷ ಸ್ಥಾನಕ್ಕೆ ಆಯ್ಕೆ ಮಾಡಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ದರಿಂದ ಈಶ್ವರಪ್ಪ ಅವರು ಆಯ್ಕೆ ಆಗುವ ಸಾಧ್ಯತೆ ಇದೆ. [ಸದಾನಂದ ಗೌಡರಿಗೆ ಭರ್ಜರಿ ಜಯ]
ವಿಧಾನಸಭೆಯ ಪ್ರತಿಪಕ್ಷ ಸ್ಥಾನವನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಲಂಕರಿಸಿದ್ದಾರೆ. ಕೆ.ಎಸ್.ಈಶ್ವರಪ್ಪ ಮಾತಿನಲ್ಲೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಶಕ್ತಿ ಹೊಂದಿರುವುದರಿಂದ ಅವರನ್ನು ಆಯ್ಕೆ ಮಾಡುವ ಕುರಿತು ಚಿಂತನೆ ನಡೆಸಿದೆ. ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ರಾಜ್ಯದಲ್ಲಿ ಈ ಕುರಿತ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.












Click it and Unblock the Notifications