Breaking; ತುರ್ತು ಪತ್ರಿಕಾಗೋಷ್ಠಿ ಕರೆದ ಕೆ. ಎಸ್. ಈಶ್ವರಪ್ಪ
ಬೆಂಗಳೂರು, ಡಿಸೆಂಬರ್ 19; ಮಾಜಿ ಸಚಿವ, ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭವಾದ ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಸಹ ಅವರು ಗೈರಾಗಿದ್ದಾರೆ.
ಡಿಸೆಂಬರ್ 20ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಾಜಿ ಉಪ ಮುಖ್ಯಮಂತ್ರಿ, ಕೆ. ಎಸ್. ಈಶ್ವರಪ್ಪ ಬೆಂಗಳೂರಿನ ಗೋಲ್ಡ್ ಪಿಂಚ್ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಹಲವು ಕಾರಣಗಳಿಗೆ ಈ ಪತ್ರಿಕಾಗೋಷ್ಠಿ ಕುತೂಹಲಕ್ಕೆ ಕಾರಣವಾಗಿದೆ.
ಕೆ. ಎಸ್. ಈಶ್ವರಪ್ಪ ಸೋಮವಾರ ವಿಧಾನಸಭೆ ಕಲಾಪಕ್ಕೆ ಗೈರಾಗಿದ್ದರು. ಈ ಕುರಿತು ಮಾಧ್ಯಮಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಪ್ರಶ್ನಿಸಿದಾಗ ಅವರು ಅಸಮಾಧಾನಗೊಂಡರು.

ಸಂಪುಟಕ್ಕೆ ಸೇರಿಸಿಕೊಳ್ಳದ ಕಾರಣ ಅಸಮಾಧಾನಗೊಂಡ ಸದನವನ್ನು ಬಹಿಷ್ಕಾರ ಮಾಡಿದ್ದಾರೆ ಎಂದು ಮಾಧ್ಯಮಗಳು ಪ್ರಶ್ನೆ ಮಾಡಿದ್ದಕ್ಕೆ ಸಿಎಂ ಕೋಪಗೊಂಡರು. "ನೀವು ಅದನ್ನೆಲ್ಲ ಸೃಷ್ಟಿ ಮಾಡಿಕೊಂಡು ಹೇಳಬೇಡಿ. ನಾನು ಈಶ್ವರಪ್ಪ ಜೊತೆ ಮಾತನಾಡುತ್ತೇನೆ" ಎಂದು ಮಾಧ್ಯಮಗಳ ಮೇಲೆಯೇ ಮುಖ್ಯಮಂತ್ರಿಗಳು ಗರಂ ಆದರು.
ಸ್ಪೀಕರ್ಗೆ ಪತ್ರ; ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಸದನಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಾಜರಾತಿಯಿಂದ ವಿನಾಯಿತಿ ನೀಡಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಈಶ್ವರಪ್ಪ ಅವರು 19/12/2022ರಿಂದ ಸುವರ್ಣ ಸೌಧ ಬೆಳಗಾವಿ ಇಲ್ಲಿ ನಡೆಯುತ್ತಿರುವ 15ನೇ ವಿಧಾನಸಭೆಯ 14ನೇ ಅಧಿವೇಶನದ ಕಾರ್ಯ ಕಲಾಪಗಳಲ್ಲಿ ಅನಿವಾರ್ಯ ತುರ್ತು ವೈಯಕ್ತಿಕ ಕಾರಣದಿಂದ ಪಾಲ್ಗೊಳ್ಳಲು ಕಷ್ಟಕರವಾಗಿರುತ್ತದೆ. ಆದ ಕಾರಣ ಸದರಿ ದಿನಗಳಿಗೆ ಹಾಜರಾತಿಯಿಂದ ವಿನಾಯಿತಿ ನೀಡಲು ವಿನಂತಿಸುವೆ ಎಂದು ಸ್ಪೀಕರ್ಗೆ ಮನವಿ ಮಾಡಿದ್ದಾರೆ.
ಈಶ್ವರಪ್ಪ ಅಸಮಾಧಾನ; ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ. ಎಸ್. ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಆದರೆ ಪ್ರಕರಣದಲ್ಲಿ ಅವರಿಗೆ ಕ್ಲೀನ್ಚಿಟ್ ಸಿಕ್ಕರೂ ಸಹ ಮತ್ತೆ ಸಚಿವ ಸ್ಥಾನ ನೀಡಿಲ್ಲ. ಈ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ.
ಸೋಮವಾರ ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, "ಕಮೀಷನ್ ಪಡೆದ ಆರೋಪ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಕ್ಲೀನ್ಚಿಟ್ ಸಿಕ್ಕಿದ್ದರೂ ನನ್ನನ್ನು ಯಾಕೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲಿಲ್ಲ?" ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.
"ಜನರು ಫೋನ್ ಮಾಡಿ ನಿಮ್ಮನ್ನೇಕೆ ಸಂಪುಟಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಇದರಿಂದಾಗಿ ಅಪಮಾನ ಆಗುತ್ತಿದೆ. ಇದನ್ನು ಅರ್ಥ ಮಾಡಿಸಲು ಸೌಜನ್ಯದ ಪ್ರತಿಭಟನೆ ಮಾಡುತ್ತಿದ್ದೇನೆ. ಸಚಿವ ಸಂಪುಟಕ್ಕೆ ನನ್ನನ್ನು ತೆಗೆದುಕೊಳ್ಳದ್ದಕ್ಕೆ ಅಭಿಮಾನಿಗಳಿಗೆ ನೋವಾಗಿದೆ, ಇದು ನನಗೂ ನೋವುಂಟು ಮಾಡಿದೆ" ಎಂದರು.











Click it and Unblock the Notifications