ಈಶ್ವರಪ್ಪ ಪತ್ರ; ಸಿಎಂ ಬೆಂಬಲಕ್ಕೆ ನಿಂತ ಸಚಿವರು
ಬೆಂಗಳೂರು, ಏಪ್ರಿಲ್ 01; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ರಾಜ್ಯಪಾಲ ವಜುಭಾಯಿ ವಾಲಾಗೆ ಬರೆದಿರುವ 5 ಪುಟಗಳ ಪತ್ರದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಹಲವಾರು ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ.
ಮುಖ್ಯಮಂತ್ರಿಗಳು ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನನ್ನ ಗಮನಕ್ಕೆ ತರದೇ ಇಲಾಖೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿರುವ ಪತ್ರವನ್ನು ಈಶ್ವರಪ್ಪ ಬಿಜೆಪಿ ಹೈಕಮಾಂಡ್ ನಾಯಕರಿಗೆ ಸಹ ರವಾನೆ ಮಾಡಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಈಶ್ವರಪ್ಪ ಪತ್ರ
ಕೃಷಿ ಸಚಿವ ಬಿ. ಸಿ. ಪಾಟೀಲ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. "ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ" ಎಂದು ಹೇಳಿದ್ದಾರೆ.
ರಾಜಕೀಯ ಜೀವನದಲ್ಲಿ ಮೊದಲ ಬಾರಿ ಈಶ್ವರಪ್ಪ ಒಳ್ಳೆಯ ಕೆಲಸ ಮಾಡಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ
"ಯಾವುದೇ ವಿಷಯಗಳು ಇದ್ದರೂ ಕೂಡ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಕೂಡ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಈಶ್ವರಪ್ಪನವರಿಗೆ ಶೋಭೆ ತರುವಂತಹದ್ದಲ್ಲ" ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ಹಸ್ತಕ್ಷೇಪ ವಿಷಯವಾಗಿ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು: ಸಚಿವ ಈಶ್ವರಪ್ಪ ಹೇಳಿದ್ದೇನು?
"ಯಾವುದೇ ತಪ್ಪನ್ನು ಮಾಡದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ?" ಎಂದು ಬಿ. ಸಿ. ಪಾಟೀಲ್ ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಹೇಳಿದ್ದೇನು?; ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಈಶ್ವರಪ್ಪ, "ನಮ್ಮ ಇಲಾಖೆ ವಿಷಯಗಳನ್ನ ರಾಜ್ಯಪಾಲರ ಬಳಿ ಮಾತನಾಡಿಕೊಂಡು ಬಂದಿದ್ದೇನೆ ಅಷ್ಟೇ ಅದರಲ್ಲೇನೂ ವಿಶೇಷತೆ ಇಲ್ಲ. ಇಲಾಖೆ ವಿಷಯಗಳನ್ನ ಚರ್ಚೆ ಮಾಡುವುದಕ್ಕೆ ಅವಕಾಶವಿತ್ತು ಭೇಟಿ ಮಾಡಿಕೊಂಡು ಬಂದಿದ್ದೇನೆ" ಎಂದು ಹೇಳಿದ್ದರು.
Recommended Video
"ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ. ಇಲಾಖೆ ಸಂಬಂಧ ವಿಷಯಗಳನ್ನು ಮಾತನಾಡಲು ರಾಜ್ಯಪಾಲರಷ್ಟೇ ಅಲ್ಲ ದೆಹಲಿಗೂ ಹೋಗುತ್ತೇನೆ. ದೆಹಲಿಯಲ್ಲಿ ನಮ್ಮ ಪಕ್ಷದ ನಾಯಕರ ಬಳಿ, ಕೇಂದ್ರ ಮಂತ್ರಿಗಳ ಜೊತೆ, ಇಲಾಖೆ ಅಧಿಕಾರಿಗಳ ಜೊತೆ, ಇಲಾಖಾ ಅಭಿವೃದ್ಧಿ ಕುರಿತಂತೆ ಅನೇಕ ಚರ್ಚೆಗಳನ್ನು ಮಾಡಬೇಕಾಗುತ್ತೆ" ಎಂದು ತಿಳಿಸಿದ್ದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ