ಭಾರಿ ಮಳೆ ಸುರಿದರೂ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ ಕೊರತೆ
ಬೆಂಗಳೂರು, ಆಗಸ್ಟ್ 4: ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಸುರಿದ ಮುಂಗಾರು ಮಳೆಗೆ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿದೆ ಎಂದು ಅಂದುಕೊಂಡಿದ್ದೇವೆ. ಆದರೆ ಸುಮಾರು 18 ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಕೊರತೆ ಕಾಣುತ್ತಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಜೂನ್ ತಿಂಗಳಲ್ಲಿ ಮಳೆಯಾಗಿರುವುದು ನಿಜ ಆದರೆ ಎಲ್ಲಾ ಜಲಾಶಯಗಳು ಭರ್ತಿಯಾಗಿಲ್ಲ, ರಾಜ್ಯದ 18 ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದೆ, ಮಳೆ ಕೈಕೊಟ್ಟಿದೆ, ಜುಲೈನಲ್ಲಿ 18 ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಶೇ.43ರಷ್ಟು ಮಳೆ ಕೊರತೆ ಉಂಟಾಗಿದೆ.
ಕೊಡಗಿಗೆ ಪ್ರವಾಸ ಹೊರಟಿರಾ? ಹಾಗಿದ್ದರೆ ಈ ಮಳೆ ವರದಿ ಓದಿಕೊಳ್ಳಿ...
ಉತ್ತರ ಒಳನಾಡಿನ 12 ಜಿಲ್ಲೆಗಳ ಪೈಕಿ 11 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ, ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ ತೀವ್ರ ಮಳೆಯ ಅಭಾವವನ್ನು ಎದುರಿಸುತ್ತಿದ್ದಾರೆ. ಈ ಐದು ಜಿಲ್ಲೆಗಳಲ್ಲಿ ಶೇ.60ಕ್ಕೂ ಹೆಚ್ಚು ಮಳೆಯ ಕೊರತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದೀಗ ಮತ್ತೆ ಎರಡು ದಿನಗಳಿಂದ ಮುಂಗಾರು ಮತ್ತೆ ಚುರುಕುಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಶಿವಮೊಗ್ಗ ಜಿಲ್ಲೆಗಳ ಕೆಲ ಪ್ರದೇಶದಲ್ಲಿ ಆ.7ರವರೆಗೆ ಸಾಧಾರಣದಿಂದ ಭಾರಿ ಪ್ರಮಾಣದ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿತ ವಾತಾವರಣವಿರಲಿದ್ದು ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.