ಕರ್ನಾಟಕ ಕರಾವಳಿಯಲ್ಲಿ 10 ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು, ಜೂನ್ 30; ಜೂನ್ ತಿಂಗಳು ಕಳೆಯಿತು ಆದರೆ ನೈಋತ್ಯ ಮುಂಗಾರು ಮಳೆ ಬಿರುಸಾಗುವ ಸೂಚನೆಗಳು ಕಾಣುತ್ತಿಲ್ಲ. ವಿವಿಧ ಜಲಾಶಯಗಳು ಖಾಲಿಯಾಗಿದ್ದು, ಜುಲೈನಲ್ಲಿಯೂ ಮಳೆಯಾಗದಿದ್ದರೆ ರಾಜ್ಯದಲ್ಲಿ ಕುಡಿಯುವ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಮುಂದಿನ 10 ದಿನಗಳ ಕಾಲ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಎಂಡಿಸಿ) ಮುನ್ಸೂಚನೆ ನೀಡಿದೆ. ತಗ್ಗು ಪ್ರದೇಶಗಳು ಜಲಾವೃತವಾಗುವಷ್ಟು ಮಳೆಯಾಗಲಿದೆ ಎಂದು ಹೇಳಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. 64.5 ಮಿ. ಮೀ. ನಿಂದ 115 ಮಿ. ಮೀ. ತನಕ ಮಳೆಯಾಗಲಿದೆ ಎಂದು ಕೆಎಸ್ಎನ್ಎಂಡಿಸಿ ಪ್ರಕಟಣೆ ತಿಳಿಸಿದೆ. ಈ ಕುರಿತು ಪಿಟಿಐ ವರದಿ ಮಾಡಿದೆ. 224 ಮಿ. ಮೀ. ತನಕವೂ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಕೆಲವು ದಿನಗಳಿಂದ ಮಳೆ; ಜೂನ್ ಆರಂಭದಲ್ಲಿ ಮುಂಗಾರು ಆಗಮನ ವಿಳಂಬವಾಯಿತು. ಬಳಿಕ ಬಿಪರ್ಜಾಯ್ ಚಂಡಮಾರುತದ ಪರಿಣಾಮ ಮುಂಗಾರು ಮಳೆ ನಿರೀಕ್ಷಿತವಾಗಿ ಸುರಿಯಲಿಲ್ಲ. ಮತ್ತೊಂದು ಕಡೆ ಚಂಡಮಾರುತ ಸಹ ರಾಜ್ಯಕ್ಕೆ ಮಳೆ ತರಲಿಲ್ಲ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಸಾಧಾರಣೆ ಮಳೆಯಾಗುತ್ತಿದೆ.
ಮುಂದಿನ 10 ದಿನ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಜುಲೈ 2 ರ ತನಕ ಗಂಟೆಗೆ 45 ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ತಗ್ಗು ಪ್ರದೇಶಗಳು ಜಲಾವೃತವಾಗುವ ನಿರೀಕ್ಷೆ ಇದ್ದು, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಪಡೆಗೆ ಸಹ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ.
ಕರಾವಳಿ ತೀರದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ಸಮುದ್ರದಲ್ಲಿ 3 ರಿಂದ 3.2 ಮೀಟರ್ ವ್ಯಾಪ್ತಿಯಲ್ಲಿ ಹೆಚ್ಚಿನ ಅಲೆಗಳು ಏಳುವ ನಿರೀಕ್ಷೆ ಇದೆ. ಚಂಡಮಾರುತದ ಪರಿಣಾಮ ಕಡಲ್ಕೊರೆತ ಉಂಟಾಗಿ ಸಮುದ್ರ ತೀರದ ಜನರು ಈಗಾಗಲೇ ಸಂಕಷ್ಟ ಅನುಭವಿಸಿದ್ದಾರೆ. ಈಗ ಮತ್ತೆ ದೊಡ್ಡ ಅಲೆಗಳು ಏಳುವ ಭೀತಿ ಎದುರಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜುಲೈ 2ರ ತನಕ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಜುಲೈನಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಹೇಳಿದೆ. ಮಳೆ ಕೊರತೆ ಉಂಟಾಗುವುದಿಲ್ಲ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ತಿಳಿಸಿದೆ. ಆದರೆ ಜುಲೈ 2ರ ಬಳಿಕ ಮುಂಗಾರು ಮಾರುತಗಳು ಪ್ರಬಲವಾಗಲಿದೆ.
ಬೆಂಗಳೂರು ನಗರದಲ್ಲಿ ಗುರುವಾರವೂ ಮೋಡ ಕವಿದ ವಾತಾವರಣ ಮುಂದುವರೆಯಿತು. ಮಧ್ಯಾಹ್ನ ಕೆಲವು ಬಡಾವಣೆಗಳಲ್ಲಿ ಮಳೆಯಾಗಿದ್ದು, ರಾತ್ರಿಯ ತನಕ ತುಂತುರು ಮಳೆ ಸುರಿಯುತ್ತಲೇ ಇತ್ತು. ನಗರದಲ್ಲಿ ಉಷ್ಣಾಂಶ ಕುಸಿತ ಕಂಡಿದೆ. ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆ ಇದೆ.
ಜುಲೈ 3 ರಿಂದ 6ರ ತನಕ ಕರ್ನಾಟಕ, ಕೇರಳ, ತಮಿಳುನಾಡು, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಮೂಲಕ ವಿವಿಧ ರಾಜ್ಯಗಳಲ್ಲಿಯೂ ಮುಂಗಾರು ಮಳೆ ಬಿರುಸಾಗುವ ಸೂಚನೆ ಸಿಕ್ಕಿದೆ.












Click it and Unblock the Notifications