KSRTC: ಗಣೇಶ ಹಬ್ಬದ ಪ್ರಯುಕ್ತ 1500 ಹೆಚ್ಚುವರಿ ಬಸ್ ಕಾರ್ಯಾಚರಣೆ, ಟಿಕೆಟ್ ಮೇಲೆ ಭಾರೀ ರಿಯಾಯಿತಿ
ಬೆಂಗಳೂರು, ಸೆಪ್ಟಂಬರ್ 03: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮದ ಆಚರಣೆಗೆ ದಿನಗಣನೆ ಶುರುವಾಗಿದೆ. ರಾಜಧಾನಿ ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬರೋಬ್ಬರಿ 1500 ಹೆಚ್ಚುವರಿ ವಿಶೇಷ ಬಸ್ಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ನಿಗಮ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಸೆಪ್ಟಂಬರ್ 06ರಂದು ಸ್ವರ್ಣಗೌರಿ ವ್ರತ, ಸೆ. 07ರಂದು ಗಣೇಶ ಚತುರ್ಥಿ ಹಾಗೂ ಸೆಪ್ಟಂಬರ್ 08 ರಂದು ವಾರಾಂತ್ಯದ ದಿನ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುತ್ತದೆ. ಅದರಲ್ಲೂ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವವರಿಗೆ ಅನುಕೂಲವಾಗಲೆಂದು ವಿಶೇಷ ಬಸ್ ಓಡಿಸಲಾಗುತ್ತದೆ.

ಇನ್ನೂ ಹಬ್ಬ ಮುಗಿಸಿ ಮರಳಿ ಬೆಂಗಳೂರಿಗೆ ಬರುವರಿಗೆ ಸಹಾಯವಾಗಲಿ ಎಂದು ಕರ್ನಾಟಕ ಹಾಗೂ ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟಂಬರ್ 08ರಿಂದ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಹಾಗಾದರೆ ಎಲ್ಲಿಂದ ಯಾವೆಲ್ಲ ಬಸ್ಗಳು ಕಾರ್ಯಾಚರಣೆ ನಡೆಸಲಿವೆ? ಎಲ್ಲಿಂದ ಎಲ್ಲಿಗೆ ವಿಶೇಷ ಬಸ್ ಸೌಲಭ್ಯಗಳು ಇವೆ. ಟಿಕೆಟ್ ಬುಕ್ಕಿಂಗ್ ಮತ್ತು ರಿಯಾಯಿತಿ ಮಾಹಿತಿ ಇಲ್ಲಿದೆ.
KSRTC ವಿಶೇಷ ಬಸ್ ಕಾರ್ಯಾಚರಣೆ ಮಾರ್ಗಗಳು
* ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಗೋಕರ್ಣ, ಶಿರಸಿ, ಕಾರವಾರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ರಾಯಚೂರು, ಬೀದರ್, ಹೈದರಾಬಾದ್, ತಿರುಪತಿ, ವಿಜಯವಾಡ ಸೇರಿದಂತೆ ಇನ್ನಿತರ ಸ್ಥಳಗಳಿಗೆ ವಿಶೇಷ ಬಸ್ಗಳು ಆಯಾ ದಿನಾಂಕದಂದು ಸಂಚರಿಸಲಿವೆ.

* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ.
* ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬಿಎಂಟಿಸಿ ನಿಲ್ದಾಣದಿಂದ ಸಂಚರಿಸಲಿವೆ.
* ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಟಿಕೆಟ್ ಕಾಯ್ದಿರಿಸುವ ಎಂದಿನಂತೆ ಚಾಲ್ತಿಯಲ್ಲಿರಲಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮೊದಲೇ ಆನ್ಲೈನ್ ಮೂಲಕ ಬುಕ್ ಮಾಡಬಹುದು. ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್ನ ಹೆಸರು ನೋಡಿಕೊಂಡು ಬುಕ್ ಮಾಡಬೇಕು. ಅದಕ್ಕಾಗಿ ನೀವು ಅಧಿಕೃತ ವೆಬ್ಸೈಟ್ www.ksrtc.karnataka.gov.in ಮೂಲಕ ಮಾಡಬೇಕಿದೆ.
* ಇಲ್ಲವೇ ನೀವು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ ಟಿಕೆಟ್ ಬುಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನ ಕಾಯ್ದಿರಿಸಬಹುದು.
* 04 ಇಲ್ಲವೇ ಅದಕ್ಕಿಂತ ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಬುಕ್ ಮಾಡಿದಲ್ಲಿ ಅವರಿಗೆ ಶೇಕಡ 5 ರಷ್ಟು ರಿಯಾಯಿತಿ ಸಿಗುತ್ತದೆ. ಇನ್ನು ಎರಡು ಕಡೆಯ ಟಿಕೆಟ್ ಬುಕ್ ಮಾಡಿದಲ್ಲಿ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಸಿಗಲಿದೆ.
* ನೆರೆಯ ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಪುದುಚೆರಿಯ ಪ್ರಮುಖ ನಗರಗಳಲ್ಲಿ ಟಿಕೆಟ್ ಬುಕ್ಕಿಂಗ್ ಕೌಂಟರ್ಗಳು ಇವೆ. ಈ ಮೂಲಕ ಟಿಕೆಟ್ ಬುಕ್ಕಿಂಗ್ಗೆ ಅವಕಾಶ ಇದೆ.
* ಕರ್ನಾಟಕದ ನಿಗಮದ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರದ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್ಗಳನ್ನು ಕಾರ್ಯಾಚರಣೆ ನಡೆಸಲಾಗುತ್ತದೆ. ಪ್ರಯಾಣಿಕರು, ಬೇರೆ ಬೇರೆ ಊರುಗಳಲ್ಲಿ ಉದ್ಯೋಗ ಸಲುವಾಗಿ ಇರುವವರು, ಓಡಾಡುವವರು ಈ ಸೌಲಭ್ಯದ ಸದುಪಯೋಗ ಮಾಡಿಕೊಳ್ಳಬೇಕು ಎಂದು KSRTC ಮನವಿ ಮಾಡಿದೆ.












Click it and Unblock the Notifications