ಸಾರಿಗೆ ನೌಕರರ ಮುಷ್ಕರ; ಸರ್ಕಾರಿ ಬಸ್ಗಳ ಸಂಚಾರ ಸ್ತಬ್ಧ
ಬೆಂಗಳೂರು, ಏಪ್ರಿಲ್ 7: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಇಂದಿನಿಂದ ಧರಣಿ ಆರಂಭಿಸಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ಬಸ್ಗಳ ಸಂಚಾರ ಸ್ಥಗಿತಗೊಂಡಿದೆ.
ಇಂದಿನಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ ಆರಂಭಗೊಳ್ಳಲಿದ್ದು, ಸುಮಾರು 24 ಸಾವಿರ ಬಸ್ಗಳು ಸಂಚರಿಸುವುದಿಲ್ಲ ಎಂದು ತಿಳಿದುಬಂದಿದೆ.
ಕಳೆದ ಡಿಸೆಂಬರ್ನಲ್ಲಿಯೂ ಸಾರಿಗೆ ನೌಕರರು ನಾಲ್ಕು ದಿನಗಳ ಕಾಲ ಮುಷ್ಕರ ನಡೆಸಿದ್ದರು. ಮೂರು ತಿಂಗಳ ಅಂತರದಲ್ಲಿ ಮತ್ತೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಸದ್ಯಕ್ಕೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

6ನೇ ವೇತನ ಆಯೋಗದ ಶಿಫಾರಸು ಜಾರಿ ಸದ್ಯಕ್ಕೆ ಸಾಧ್ಯವಿಲ್ಲ ಹಾಗೂ ಈ ವಿಷಯದಲ್ಲಿ ಸಂಧಾನದ ಪ್ರಶ್ನೆ ಇಲ್ಲ. ಮುಷ್ಕರ ನಡೆಸಿದರೆ ಎಸ್ಮಾ ಕಾಯ್ದೆ ಹೇರಲು ಹಿಂಜರಿಯುವುದಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರರ ವೇತನವನ್ನು ಶೇ 8ರಷ್ಟು ಏರಿಸಲು ನಿರ್ಧರಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವೇತನ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದಿದ್ದಾರೆ.
ಆದರೆ ನಮ್ಮ ಪ್ರಮುಖ ಬೇಡಿಕೆಯನ್ನೇ ಕಡೆಗಣಿಸಲಾಗಿದೆ ಎಂದು ನೌಕರರು ಮುಷ್ಕರ ನಡೆಸುವ ಬಿಗಿಪಟ್ಟು ಹಿಡಿದಿದ್ದಾರೆ.
ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿಮೆ ಮಾಡಲು ನಾಲ್ಕು ನಿಗಮಗಳು ನಿರ್ಧರಿಸಿವೆ. ಖಾಸಗಿ ಬಸ್ಗಳಿಗೆ ಅವಕಾಶ ನೀಡಲಾಗಿದೆ.
ಬಿಎಂಟಿಸಿ 6536, ಕೆಎಸ್ ಆರ್ಟಿಸಿ 8360, ವಾಯವ್ಯ ಸಾರಿಗೆ 4868, ಈಶಾನ್ಯ ಸಾರಿಗೆ 4600 ಸೇರಿ ಒಟ್ಟು 24,400 ಬಸ್ಗಳು ಸಂಚರಿಸುವುದಿಲ್ಲ ಎಂದು ತಿಳಿದುಬಂದಿದೆ.












Click it and Unblock the Notifications