ಏ.16 ರಿಂದ 18ರ ತನಕ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು, ಏಪ್ರಿಲ್ 16 : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 16 ರಿಂದ 18ರ ತನಕ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಂಸ್ಥೆ ಮನವಿ ಮಾಡಿದೆ.
ಏಪ್ರಿಲ್ 18ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಮತದಾನಕ್ಕೆ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ಕೆಎಸ್ಆರ್ಟಿಸಿ ಬಸ್ ಬಳಕೆ ಮಾಡಲಾಗುತ್ತದೆ.
ಏಪ್ರಿಲ್ 17ರಂದು ಕೆಎಸ್ಆರ್ಟಿಸಿ ಬಸ್ಗಳು ನಿಗದಿಪಡಿಸಿದ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರಬೇಕು. ಆದ್ದರಿಂದ, ಏಪ್ರಿಲ್ 16ರ ರಾತ್ರಿಯಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಏಪ್ರಿಲ್ 19ರ ಬಳಿಕ ಬಸ್ ಸಂಚಾರ ಎಂದಿನಂತೆ ಇರಲಿದೆ.

ಕೆಎಸ್ಆರ್ಟಿಸಿ ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಚುನಾವಣಾ ಕಾರ್ಯ ಮತ್ತು ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ಸಂಸ್ಥೆ ಒದಗಿಸುತ್ತಿದೆ. ಆದ್ದರಿಂದ, ಏಪ್ರಿಲ್ 16ರಿಂದ 18ರ ತನಕ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದೆ.
ಎಲ್ಲೆಲ್ಲಿ ಮತದಾನ : ಏಪ್ರಿಲ್ 18ರಂದು ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಉಡುಪಿ-ಚಿಕ್ಕಮಗಳೂರು, ಮೈಸೂರು-ಕೊಡಗು, ಚಿತ್ರದುರ್ಗ ಲೋಕಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ದಕ್ಷಿಣ ಕನ್ನಡ, ಹಾಸನ, ಮಂಡ್ಯ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿಯೂ ಮತದಾನ ನಡೆಯಲಿದೆ.












Click it and Unblock the Notifications