ಸಂಕ್ರಾಂತಿ ಹಬ್ಬಕ್ಕೆ 650 ಹೆಚ್ಚುವರಿ ಕೆಎಸ್ಆರ್ ಟಿಸಿ ಬಸ್
ಬೆಂಗಳೂರು, ಜನವರಿ. 12 : ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ 650 ಕೆಎಸ್ಆರ್ ಟಿಸಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಜನವರಿ 13 ಮತ್ತು 14ರಂದು ವಿಶೇಷ ಬಸ್ ಗಳು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಂಚಾರ ನಡೆಸಲಿವೆ.
ಪ್ರಸ್ತುತ ಸಂಚಾರ ನಡೆಸುತ್ತಿರುವ ಬಸ್ ಗಳ ಜೊತೆಗೆ 650 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಜನವರಿ 15ರಂದು ರಾಜ್ಯದ ವಿವಿಧ ಪ್ರದೇಶಗಳಿಂದ ವಿಶೇಷ ಬಸ್ಸುಗಳು ಪುನಃ ಬೆಂಗಳೂರಿಗೆ ಆಗಮಿಸಲಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಮುಂತಾದ ಜಿಲ್ಲೆಗಳಿಗೆ ಸಂಚಾರ ನಡೆಸಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಬಸ್ಸುಗಳು ಸಂಚಾರ ನಡೆಸಲಿವೆ.
ಮಧುರೈ, ಕುಂಬಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ತೆರಳುವ ಐಷಾರಾಮಿ ಬಸ್ಸುಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ.
ಪ್ರಯಾಣಿಕರ ಸಂಖ್ಯೆ ಹೆಚ್ಚಾದರೆ ವಿಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೇ ಕ್ರಾಸ್, ಕೆಂಗೇರಿ ಉಪನಗರದಿಂದ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ ಮುಂತಾದ ಪ್ರದೇಶಗಳಿಗೆ ಸಂಚಾರ ನಡೆಸುವ ಮುಂಗಡ ಆಸನ ಕಾಯ್ದಿರಿಸಲಾದ ವಿಶೇಷ ಬಸ್ಸುಗಳು ಮೈಸೂರು ರಸ್ತೆ ನಿಲ್ದಾಣದಿಂದ ಹೊರಡಲಿವೆ.
ಕಲಬುರಗಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಗೆ ಸಂಚಾರ ನಡೆಸುವ ಮುಂಗಡ ಟಿಕೆಟ್ ಕಾಯ್ದಿರಿಸಲಾದ ಬಸ್ಸುಗಳು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದಿಂದ ಹೊರಡಲಿವೆ.












Click it and Unblock the Notifications