ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಮಾತಾಡಿದ್ದು ಏಕೆ?
ಬೆಂಗಳೂರು, ನವೆಂಬರ್ 25 : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಬಗ್ಗೆ ಮಾತುಕತೆಗಳು ಆರಂಭವಾಗಿವೆ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಡಿಸೆಂಬರ್ 27ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. [ಚುನಾವಣಾ ವೇಳಾಪಟ್ಟಿ]
ಬಿಬಿಎಂಪಿಯಲ್ಲಿ ಮೇಯರ್ ಆಯ್ಕೆಗೆ ಬೆಂಬಲ ನೀಡಿದಂತೆ ಈ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಪಕ್ಷದ ಕೆಲವು ನಾಯಕರು ಮುಂದಾಗಿದ್ದಾರೆ. ಈ ಬೆಳವಣಿಗೆಗೆ ಪಕ್ಷದಲ್ಲಿ ವಿರೋಧದ ಅಲೆ ಎದ್ದಿದೆ. 'ಮೈತ್ರಿ ಮಾಡಿಕೊಂಡರೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ' ಎಂದು ಕುಮಾರಸ್ವಾಮಿ ಆಪ್ತರ ಬಳಿ ಹೇಳಿದ್ದಾರೆ. [ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ]
ಮೈತ್ರಿ ಮಾತುಕತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂಬುದು ಸದ್ಯದ ಮಾಹಿತಿ. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಮೈತ್ರಿ ಕುರಿತು ಈಗಾಗಲೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಮೈತ್ರಿ ಮಾತುಕತೆಯ ವಿವರಗಳು ಚಿತ್ರಗಳಲ್ಲಿ......[ಎಂಎಲ್ಸಿ ಚುನಾವಣೆ ಲಾಬಿ, ರಮ್ಯಾ ಹೆಸರು ಐತೇನ್ರಿ!]

ಕಾಂಗ್ರೆಸ್ ಜೊತೆ ದೋಸ್ತಿ ಮಾತುಕತೆ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಬಗ್ಗೆ ಮಾತುಕತೆಗಳು ಆರಂಭವಾಗಿವೆ. ಆದರೆ, ಜೆಡಿಎಸ್ ಪಕ್ಷದಲ್ಲಿ ಮೈತ್ರಿ ಬಗ್ಗೆ ಅಸಮಧಾನ ಉಂಟಾಗಿದೆ. ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿಯನ್ನು ವಿರೋಧಿಸುತ್ತಿದ್ದಾರೆ.

ಜಮೀರ್ -ದಿಗ್ವಿಜಯ್ ಭೇಟಿ
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಮೈತ್ರಿ ಮಾತುಕತೆಯ ನೇತೃತ್ವ ವಹಿಸಿದ್ದಾರೆ. ಸೋಮವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮೈತ್ರಿ ಕುರಿತು ಚರ್ಚೆ ನಡೆಸಿದ್ದಾರೆ.

ಕುಮಾರಸ್ವಾಮಿ ಅಸಮಧಾನ
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ಧವಿಲ್ಲ. 'ಮೈತ್ರಿ ಮಾಡಿಕೊಂಡರೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತೇನೆ' ಎಂದು ಕುಮಾರಸ್ವಾಮಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಜನರಿಗೆ ಏನು ಉತ್ತರ ಹೇಳುವಿರಿ?
'ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದರೆ 5-6 ಸ್ಥಾನಗಳಲ್ಲಿ ಜಯಗಳಿಸಬಹುದು. ಹೀಗಿರುವಾಗ ಕಾಂಗ್ರೆಸ್ ಜೊತೆ ಹೊಂದಾಣಿಕೆಯ ಅವಶ್ಯಕತೆ ಏನಿದೆ?. ಸದನದಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುವ ನಾವು ಅದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೆ ಜನರಿಗೆ ಏನು ಉತ್ತರ ಹೇಳುವಿರಿ?' ಎಂಬುದು ಕುಮಾರಸ್ವಾಮಿ ಪ್ರಶ್ನೆ.

ಜಮೀರ್, ಚೆಲುವರಾಯಸ್ವಾಮಿ ಮುಂದಾಳತ್ವ
ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಕುಮಾರಸ್ವಾಮಿ ಅವರು ಜಮೀರ್ ಅಹಮದ್ ಮತ್ತು ಎನ್. ಚೆಲುವರಾಯಸ್ವಾಮಿ ಅವರನ್ನು ತುಸು ದೂರವಿಟ್ಟಿದ್ದಾರೆ. ಆದರೆ, ಈಗ ಅವರೇ ಚುನಾವಣಾ ಮೈತ್ರಿಯಂತಹ ವಿಚಾರದಲ್ಲಿ ಮುಂದಾತ್ವ ತೆಗೆದುಕೊಂಡಿರುವುದು ಕುಮಾರಸ್ವಾಮಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಮೈತ್ರಿ ಮಾಡಿಕೊಳ್ಳಲ್ಲ ಅಂದ್ರು ಪರಮೇಶ್ವರ
'ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾಪ ಕಾಂಗ್ರೆಸ್ ಮುಂದೆ ಇಲ್ಲ. ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ'ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರು ಹೇಳಿದ್ದಾರೆ.

ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ
ಅಂದಹಾಗೆ ಪರಿಷತ್ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಡಿಸೆಂಬರ್ 2 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 9 ಕೊನೆಯ ದಿನ. ಡಿಸೆಂಬರ್ 10ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಡಿಸೆಂಬರ್ 12 ಕೊನೆಯ ದಿನ. ಡಿಸೆಂಬರ್ 27 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.












Click it and Unblock the Notifications