ವಿಮಾನ ನಿಲ್ದಾಣಗಳಿಗೆ ಚೆನ್ನಮ್ಮ ಮತ್ತು ರಾಯಣ್ಣ ಹೆಸರು: ಸಿಎಂ ಪತ್ರ
ಬೆಂಗಳೂರು, ಡಿಸೆಂಬರ್ 22: ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರಾಗಿ ಈ ಭಾಗದ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಆದ್ದರಿಂದ ಈ ವಿಮಾನ ನಿಲ್ದಾಣಗಳಿಗೆ ಅವರ ಹೆಸರು ಇಡಬೇಕು ಎಂದು ಪತ್ರದಲ್ಲಿ ಕುಮಾರಸ್ವಾಮಿ ಕೋರಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಅವರ ಹೆಸರು ಇರಿಸುವಂತೆ ಸುದೀರ್ಘ ಕಾಲದಿಂದ ಅಲ್ಲಿನ ಮುಖಂಡರು, ಸಂಘಟನೆಗಳು, ಒತ್ತಾಯಿಸುತ್ತಿದ್ದರು.
ಇದನ್ನು ಪರಿಗಣಿಸಿ ಈ ಹಿಂದೆಯೂ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸು ಕಳುಹಿಸಲಾಗಿತ್ತು. ಆದರೆ, ಸಚಿವಾಲಯ ಅದನ್ನು ತಿರಸ್ಕರಿಸಿತ್ತು.
ಈ ಬಗ್ಗೆ ಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್ನಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕಿತ್ತೂರು ರಾಣಿ ಚನ್ನಮ್ಮ ಅವರ ಹೆಸರನ್ನು ಇರಿಸುವಂತೆ ಮತ್ತೊಮ್ಮೆ ಶಿಫಾರಸು ಮಾಡಲು ಸಿದ್ಧರಿರುವುದಾಗಿ ತಿಳಿಸಿದ್ದರು.