ರಾಜಕೀಯ ಹೈಡ್ರಾಮ : ಇಂದು ಸಂಜೆ ಬೆಂಗಳೂರಿಗೆ ಕುಮಾರಸ್ವಾಮಿ ವಾಪಸ್
ಬೆಂಗಳೂರು, ಜುಲೈ 07 : ಶನಿವಾರದಿಂದ ಕರ್ನಾಟಕ ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿಯುವ ಆತಂಕ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ಜೂನ್ 8 ರಿಂದ ಜುಲೈ 6ರ ತನಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿದ್ದರು. ಈಗಾಗಲೇ ಅವರು ನ್ಯೂಯಾರ್ಕ್ನಿಂದ ಹೊರಟಿದ್ದು, ಸಂಜೆ 8.30ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಕಾಂಗ್ರೆಸ್ನ 9, ಜೆಡಿಎಸ್ನ 3 ಶಾಸಕರು ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಅವರು ಮಂಗಳವಾರದ ತನಕ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ನಡೆಸುವ ನಿರೀಕ್ಷೆ ಇದೆ.

ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ನ ಶಾಸಕರಿಗಿಂತ ಜೆಡಿಎಸ್ನ ಎಚ್.ವಿಶ್ವನಾಥ್ (ಹುಣಸೂರು), ನಾರಾಯಣ ಗೌಡ (ಕೆ.ಆರ್.ಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮೀ ಲೇಔಟ್) ರಾಜೀನಾಮೆ ನೀಡಿರುವುದು ಎಚ್.ಡಿ.ಕುಮಾರಸ್ವಾಮಿ ಅವರ ಚಿಂತೆಗೆ ಕಾರಣವಾಗಿದೆ.
ಕಾಂಗ್ರೆಸ್ನ 9 ಮತ್ತು ಜೆಡಿಎಸ್ನ 3 ಶಾಸಕರ ರಾಜೀನಾಮೆ ಬಗ್ಗೆ ಮಂಗಳವಾರ ಪರಿಶೀಲನೆ ನಡೆಸುವುದಾಗಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದ್ದಾರೆ. ಆದ್ದರಿಂದ, ಕಾಂಗ್ರೆಸ್-ಜೆಡಿಎಸ್ಗೆ ಸರ್ಕಾರವನ್ನು ಉಳಿಸಿಕೊಳ್ಳಲು ಮೂರು ದಿನಗಳ ಅವಕಾಶ ಸಿಕ್ಕಿದೆ.












Click it and Unblock the Notifications