ನಾನೇಕೆ ಕಾಂಗ್ರೆಸ್ ಸೇರಲಿ? : ಕುಮಾರಸ್ವಾಮಿ
ಬೆಂಗಳೂರು, ಆ.6 : "ಜೆಡಿಎಸ್ ಪಕ್ಷ ಬಿಡುವುದಿಲ್ಲ, ಪಕ್ಷವನ್ನು ರಾಜ್ಯದಲ್ಲಿ ಬಲಿಷ್ಠವಾಗಿ ಕಟ್ಟುತ್ತೇವೆ, ಕಾಂಗ್ರೆಸ್ ಸೇರಲಿದ್ದೇನೆ ಎಂಬುದು ಕೇವಲ ಗಾಳಿ ಸುದ್ದಿ. ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್ ಬೆಂಬಲಿಸುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸೋಮವಾರ ಸಂಜೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ ಬೆನ್ನಲ್ಲೇ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಹಬ್ಬಿದ್ದವು. ದೆಹಲಿಯಲ್ಲಿ ಮಾತನಾಡಿರುವ ಕುಮಾರಸ್ವಾಮಿ ಇದೊಂದು ಗಾಳಿ ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, "ದೆಹಲಿಗೆ ಬಂದಿರುವುದು ವೈಯಕ್ತಿಕ ಕೆಲಸಕ್ಕಾಗಿ, ಇಲ್ಲಿ ಯಾವುದೇ ರಾಜಕೀಯದ ಕುರಿತು ಚರ್ಚೆ ಮಾಡಲು ಬಂದಿಲ್ಲ. ನಾನು ಕಾಂಗ್ರೆಸ್ ಸೇರಲಿದ್ದಾನೆ ಎಂಬುದು ಕೇಲವ ಗಾಳಿ ಸುದ್ದಿ" ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದರು. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷ ತಟಸ್ಥ ಧೋರಣೆ ಅನುಸರಿಸಲಿದೆ. ಆರ್ಥಿಕ ಸಂಪನ್ಮೂಲಗಳ ಕೊರತೆ ಕಾರಣದಿಂದ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. [ಉಪ ಚುನಾವಣೆಗೆ ಸ್ಪರ್ಧೆ, ಹೊಂದಾಣಿಕೆ ಇಲ್ಲ]
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂಬ ವದಂತಿಯನ್ನು ತಳ್ಳಿಹಾಕಿದ ಕುಮಾರಸ್ವಾಮಿ, ನಮಗೆ ಬಿಜೆಪಿಯಷ್ಟೇ ಕಾಂಗ್ರೆಸ್ ಕೂಡ ವಿರೋಧಿ. ಇದರಲ್ಲಿ ಯಾವುದೆ ಅನುಮಾನಗಳು ಬೇಡ. ಆ.21ರಂದು ನಡೆಯುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಅವರು ತಿಳಿಸಿದರು. [ಉಪ ಚುನಾವಣೆ ವೇಳಾಪಟ್ಟಿ]
ಒಳ್ಳೆ ಸಮಯಕ್ಕಾಗಿ ಕಾದಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಮೃದು ಧೋರಣೆ ತಾಳಿಲ್ಲ ಎಂದು ಹೇಳಿದ ಅವರು, ಸರ್ಕಾರ ಎಡವಿದಾಗ ನಾವು ಎಚ್ಚರಿಸಿದ್ದೇವೆ. ಸರ್ಕಾರವನ್ನು ವಿನಾ ಕಾರಣ ಟೀಕಿಸಬಾರದು. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications