ಚಾಮುಂಡೇಶ್ವರಿಯ ದರ್ಶನದ ನಂತರ ಕುಮಾರಸ್ವಾಮಿ ಪ್ರಮಾಣ ವಚನ
ಬೆಂಗಳೂರು, ಮೇ 22: ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ನಾಳೆ (ಮೇ 23) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ಇಲ್ಲಿಂದಲೇ ತಮ್ಮ ರಾಜ್ಯ ಚುನಾವಣಾ ಪ್ರವಾಸ 'ಕುಮಾರ ಪರ್ವ'ಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದೀಗ ಅಧಿಕಾರ ವಹಿಸಿಕೊಳ್ಳುವ ಮುನ್ನ ಮತ್ತೆ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಲಿದ್ದಾರೆ.
ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ನಂತರ ರಾಮನಗರದಲ್ಲಿರುವ ಚಾಮುಂಡೇಶ್ವರಿ ದೇವಿಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಸಂಜೆ 4.30 ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಹೆಚ್.ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಅವರು ಅಧಿಕಾರ ಪದ ಮತ್ತು ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಲಿದ್ದಾರೆ.
In Pics: ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಕುಮಾರಸ್ವಾಮಿ
ಪ್ರಮಾಣ ವಚನ ಸಮಾರಂಭ ಮುಕ್ತಾಯವಾದ ಕೂಡಲೇ, ಈ ವಿಶೇಷ ಸಮಾರಂಭದಲ್ಲಿ ಪಾಲ್ಗೊಂಡ ಗಣ್ಯಾತಿಗಣ್ಯರಿಗೆ ವಿಧಾನಸೌಧದ ಔತಣ ಸಭಾಂಗಣದಲ್ಲಿ ಚಹಾ ಕೂಟವನ್ನು ಆಯೋಜಿಸಲಾಗಿದೆ. ನಂತರ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ.
ಬುಧವಾರ ಪರಮೇಶ್ವರ್, ಕುಮಾರಸ್ವಾಮಿ ಮಾತ್ರ ಪ್ರಮಾಣ ವಚನ
ತದ ನಂತರ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನ ಮುಖ್ಯಮಂತ್ರಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಲಾಗಿದೆ.