ರೈತ ಚಳುವಳಿ: ಫೆಬ್ರವರಿ 6ರಂದು ರಾಜ್ಯಾದ್ಯಂತ ಹೆದ್ದಾರಿ ತಡೆ?
ಬೆಂಗಳೂರು, ಫೆ. 03: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸ್ ಬಲದ ಮೂಲಕ ಸಾಕಷ್ಟು ಕಿರುಕುಳ ಕೊಡುತ್ತಿದೆ. ಮತ್ತೊಂದೆಡೆ ಚಳವಳಿ ಮಾಡುತ್ತಿರುವ ರೈತರೊಂದಿಗೆ ನಾವು ಮಾತುಕತೆಗೆ ಸಿದ್ಧ ಎನ್ನುವ ಸಂದೇಶವನ್ನೂ ಕೇಂದ್ರ ಸರ್ಕಾರ ಕೊಡುತ್ತಿದೆ. ಚಳುವಳಿ ನಡೆಯುತ್ತಿರುವ ಪ್ರದೇಶದಲ್ಲಿ ಇಂಟರ್ನೆಟ್ ಸೌಲಭ್ಯ ಸ್ಥಗಿತಗೊಳಿಸಿರುವುದು, ರಸ್ತೆಗಳಿಗೆ ಮುಳ್ಳುತಂತಿ ಹಾಕಿರುವುದು ಪ್ರಧಾನಿ ಮೋದಿ ಅವರ ಇಬ್ಬಗೆ ನೀತಿ ಆಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಕೇಂದ್ರ ಸರ್ಕಾರದ ನಿಲುವು ಖಂಡಿದ್ದಾರೆ.
ಇದರ ವಿರುದ್ಧ ಶಾಂತಿಯುತ ಹೋರಾಟ ನಡೆಸಲು ರಾಷ್ಟ್ರ ಮಟ್ಟದ ಕಿಸಾನ್ ಸಂಯುಕ್ತ ಮೋರ್ಚಾ ಕರೆ ಕೊಟ್ಟಿದೆ. ಅವರ ಕರೆ ಮೇರೆಗೆ ರಾಜ್ಯದಲ್ಲಿಯೂ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಫೆ. 6 ರಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಗಳ ಕಾಲ ರಸ್ತೆ ಬಂದ್ ಚಳುವಳಿ ನಡೆಸುವ ಮೂಲಕ ದೇಶದ ರೈತರ ಹೋರಾಟವನ್ನು ಬೆಂಬಲಿಸಬೇಕು. ಈ ಹೋರಾಟ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡುತ್ತದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಪ್ರತಿಭಟನಾ ನಿರತ ರೈತರ ಮೇಲೆ ಹಾಗೂ ಈ ಹೋರಾಟದ ಬಗ್ಗೆ ಮಾಧ್ಯಮಗಳಿಗೆ ಸುದ್ದಿ ಮಾಡುತ್ತಿದ್ದ ವರದಿಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಖಂಡನೀಯ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿಯು ಸಹ ಇಂತಹ ಅತಿರೇಕದ ಕಾರ್ಯ ನಡೆದಿಲ್ಲ, ಜನತಂತ್ರ ವ್ಯವಸ್ಥೆಗೆ ಮಾಡಿದ ಅಪಮಾನ, ಕೇಂದ್ರ ಸರ್ಕಾರ ಜಾರಿ ಮಾಡಿರುವ ಕಾಯ್ದೆಗಳನ್ನು ವಾಪಸ್ ಪಡಯಬೇಕು ಕೃಷಿ ಉತ್ಪನ್ನಗಳಿಗೆ ಶಾಸನಬದ್ದ ಖಾತರಿ ಬೆಂಬಲ ಬೆಲೆ ನಿಗದಿ ಮಾಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಎಂದು ಕುರಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.