ಖಾತೆ ಬದಲಾವಣೆಗೆ ಬೇಡಿಕೆ ಇಟ್ಟ ಕಾರ್ಮಿಕ ಸಚಿವ ವೆಂಕಟರಮಣಪ್ಪ
ಬೆಂಗಳೂರು, ಸೆಪ್ಟೆಂಬರ್ 30 : ಕಾರ್ಮಿಕ ಸಚಿವ ಎಚ್.ವೆಂಕಟರಮಣಪ್ಪ ಅವರು ತಮ್ಮ ಖಾತೆಯನ್ನು ಬದಲಾವಣೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಿಂದೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಖಾತೆ ಬದಲಾವಣೆಗೆ ಮನವಿ ಮಾಡಿದ್ದರು.
ಪಾವಗಡ ಕ್ಷೇತ್ರದ ಕಾಂಗ್ರೆಸ್ ಶಾಸಕ, ಕಾರ್ಮಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾಉಸ್ತುವಾರಿ ಸಚಿವರಾದ ವೆಂಕಟರಮಣಪ್ಪ ಅವರು ತಮ್ಮ ಖಾತೆಯನ್ನು ಬದಲಾವಣೆ ಮಾಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.
ಐಎಎಸ್ ಅಧಿಕಾರಿ ಆದಿತ್ಯ ಬಿಸ್ವಾಸ್ ಅವರ ಕಾರ್ಯವೈಖರಿಯಿಂದ ಬೇಸತ್ತು ವೆಂಕಟರಮಣಪ್ಪ ಅವರು ಖಾತೆ ಬದಲಾವಣೆ ಕೇಳಿದ್ದಾರೆ. ಆದಿತ್ಯ ಬಿಸ್ವಾಸ್ ಅವರು ನನ್ನ ಮಾತಿಗೆ ಬೆಲೆ ಕೊಡುತ್ತಿಲ್ಲ. ನನ್ನ ವಿರುದ್ಧ ಕೆಲಸ ಮಾಡುತ್ತಾರೆ. ನನ್ನ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದೇ ನನಗೆ ತಿಳಿಯುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ನನ್ನ ಮಾತಿಗೆ ಬೆಲೆ ಇಲ್ಲದ ಮೇಲೆ ಈ ಖಾತೆ ಇದ್ದರೆಷ್ಟು, ಬಿಟ್ಟರೆಷ್ಟು? ಹೀಗಾಗಿ ಖಾತೆಯನ್ನು ಬದಲಾವಣೆ ಮಾಡಿ, ಇಲ್ಲವೇ ನನ್ನ ರಾಜೀನಾಮೆ ತೆಗೆದುಕೊಳ್ಳಿ ಎಂದು ಎಚ್.ವೆಂಕಟರಮಣಪ್ಪ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ನನ್ನ ಖಾತೆಯೇ ನನಗರ ಮರೆತು ಹೋಗಿದೆ. ಎಲ್ಲಾ ಟೆಂಡರ್ಗಳನ್ನು ಅವರೇ ಕರೆಯುತ್ತಾರೆ. ಗುತ್ತಿಗೆ ಆಧಾರದ ಮೇಲೆ ಅವರೇ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಅವರು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಸಚಿವ ಸ್ಥಾನ ಏಕೆ ಬೇಕು? ಎಂದು ಕೇಳಿದ್ದಾರೆ.
ಸಚಿವ ಸಂಪುಟ ಪುನರ್ ರಚನೆ ಮಾಡುವಾಗ ತಮ್ಮ ಖಾತೆಯನ್ನು ಬದಲಾವಣೆ ಮಾಡಬೇಕು ಇಲ್ಲವೇ ರಾಜೀನಾಮೆ ನೀಡಬೇಕು ಎಂದು ಎಚ್.ವೆಂಕಟರಮಣಪ್ಪ ಒತ್ತಾಯಿಸಿದ್ದಾರೆ.












Click it and Unblock the Notifications