ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ; ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಬೆಂಗಳೂರು, ಅಕ್ಟೋಬರ್ 10; ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಕುರಿತಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರ ಉಚಿತ ಬಸ್ ಪ್ರಯಾಣ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸಿದರೂ, ನ್ಯಾಯಪೀಠಕ್ಕೆ ಅಭ್ಯಂತರವಿಲ್ಲ. ಆದರೆ, ಬಡ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಮೂಲ ಸೌಲಭ್ಯಗಳುಳ್ಳ ವ್ಯವಸ್ಥೆ ಕಲ್ಪಿಸಬೇಕು ಎಂಬುದೇ ನಮ್ಮ ಆಶಯ ಎಂದು ಹೇಳಿತು.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಮೂಲ ಸೌಲಭ್ಯ (ಶೌಚಾಲಯ, ಕುಡಿಯುವ ನೀರು) ಕೊರತೆಯನ್ನು ನೀಗಿಸುವಲ್ಲಿ ವಿಫಲವಾಗಿರುವ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಪೋಷಕರಿಗೆ ಮೂರು ಹೊತ್ತಿನ ಊಟಕ್ಕಿಲ್ಲದಿದ್ದರೂ ಬೇರೆ ದಾರಿಯಿಲ್ಲದೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಮಾಧ್ಯಮಗಳ ವರದಿ ಆಧಾರಿಸಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ, ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿತು.
ಶಿಕ್ಷಣ ಮೂಲಭೂತ ಹಕ್ಕು: ಮುಂದಿನ 8 ವಾರಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳ ಕಲ್ಪಿಸಿರುವ ಸಂಬಂಧ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಕೋರ್ಟ್ ಮುಂದೂಡಿತು.
ನಮ್ಮ ಸಂವಿಧಾನದ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕಾಗಿದೆ. ಆದರೆ, ಸರ್ಕಾರಗಳು ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಮುಂದಾಗಿಲ್ಲ. ಇದು ಪರೋಕ್ಷವಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ತಳ್ಳುವಂತೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿತು. ಜತೆಗೆ, ಹಣವಿರುವ ಪೋಷಕರು ಎಲ್ಲ ಸೌಲಭ್ಯಗಳುಳ್ಳ ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ಬಡವರ ಮಕ್ಕಳು ಸೌಲಭ್ಯಗಳುಳ್ಳ ಶಾಲೆಗಳಲ್ಲಿ ಶಿಕ್ಷಣ ಪಡೆಯಬಾರದೇ?. ಹೀಗಾದರೆ ಬಡವರ ಮಕ್ಕಳು ಶಿಕ್ಷಣ ಪಡೆಯುವುದು ಬೇಡವೇ? ಎಂದು ಕೋರ್ಟ್ ಪ್ರಶ್ನಿಸಿತು.
ಅಲ್ಲದೆ, ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆಯಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿಲ್ಲವೇ?, 2023ರಲ್ಲಿ ಈ ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ನಡೆಯುತ್ತಿದೆ. ಈವರೆಗೂ 494 ಶಾಲೆಗಳಲ್ಲಿ ಶೌಚಾಲಯ ಹಾಗೂ 32 ಶಾಲೆಗಳಲ್ಲಿ ಕುಡಿಯಲು ಶುದ್ದವಾದ ನೀರಿನ ಸೌಲಭ್ಯ ಕೊರತೆಯಿದೆ. ಆದರೂ ಸರ್ಕಾರ ಕ್ರಮಕ್ಕೆ ಮುಂದಾಗಿಲ್ಲ. ಆ ಮೂಲಕ ಪರೋಕ್ಷವಾಗಿ ಖಾಸಗಿ ಶಾಲೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಪೀಠ ಅಸಮಾಧಾನ ವ್ಯಕ್ತ ಪಡಿಸಿತು.
ಅಂಬೇಡ್ಕರ್ ಅವರು ಯಾವುದೇ ಭಾವಚಿತ್ರವನ್ನು ನೋಡಿದರೂ ಪುಸ್ತಕವನ್ನು ಹಿಡಿದುಕೊಂಡಿರುತ್ತಾರೆ. ಅದರ ಉದ್ದೇಶವೇ ಶಿಕ್ಷಣದ ಮಹತ್ವವನ್ನು ತಿಳಿಸುವುದಾಗಿದೆ. ಮುಂದುವರೆದ ಕೆಲ ದೇಶಗಳಲ್ಲಿ ರಕ್ಷಣಾ ಇಲಾಖೆಗಿಂತಲೂ ಹೆಚ್ಚಿನ ಪ್ರಮಾಣದ ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ರಾಜ್ಯ ಸಕಾರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.












Click it and Unblock the Notifications