ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್; ಆರ್. ಶಂಕರ್ಗೆ ನಿರಾಸೆ
ಬೆಂಗಳೂರು, ಫೆಬ್ರವರಿ 01 : ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಫೆಬ್ರವರಿ 17ರಂದು ಉಪ ಚುನಾವಣೆ ನಿಗದಿಯಾಗಿದೆ.
ಶನಿವಾರ ಕರ್ನಾಟಕ ಬಿಜೆಪಿ ಒಂದು ಸ್ಥಾನದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಅವಿರೋಧವಾಗಿ ಅವರು ಆಯ್ಕೆಯಾಗುವ ಸಾಧ್ಯತೆ ಇದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಸೋಲು ಕಂಡರೂ ಲಕ್ಷ್ಮಣ ಸವದಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. ಫೆಬ್ರವರಿ 26ರೊಳಗೆ ಅವರು ವಿಧಾನಸಭೆ ಅಥವ ಪರಿಷತ್ ಸದಸ್ಯರಾಗುವುದು ಅನಿವಾರ್ಯವಾಗಿತ್ತು.
ರಾಣೆಬೆನ್ನೂರು ಕ್ಷೇತ್ರದ ಮಾಜಿ ಶಾಸಕ ಆರ್. ಶಂಕರ್ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಅಕಾಂಕ್ಷಿಯಾಗಿದ್ದರು. ಆದರೆ, ಲಕ್ಷ್ಮಣ ಸವದಿಗೆ ಟಿಕೆಟ್ ಕೊಟ್ಟಿರುವುದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಒಂದು ಸ್ಥಾನದ ಉಪ ಚುನಾವಣೆ
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ಆಯ್ಕೆಯಾಗಿದ್ದರು. ಶಿವಾಜಿನಗರ ಕ್ಷೇತ್ರದ ಉಪ ಚುನಾವಣಾ ಕಣಕ್ಕಿಳಿದಿದ್ದ ಅವರು ಗೆಲುವು ಸಾಧಿಸಿದ್ದರಿಂದ ಪರಿಷತ್ ಸ್ಥಾನ ತೆರವಾಗಿತ್ತು. ಈ ಸ್ಥಾನಕ್ಕೆ ಫೆಬ್ರವರಿ 17ರಂದು ಚುನಾವಣೆ ನಡೆಯುತ್ತಿದೆ. ವಿಧಾನಸಭೆಯ ಶಾಸಕರು ಮತದಾನದ ಮೂಲಕ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಬೇಕಿದೆ.

ಲಕ್ಷ್ಮಣ ಸವದಿ ಬಿಜೆಪಿ ಅಭ್ಯರ್ಥಿ
ಉಪ ಮುಖ್ಯಮಂತ್ರಿ ಮತ್ತು ಯಡಿಯೂರಪ್ಪ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಲಕ್ಷ್ಮಣ ಸವದಿ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ ಸವದಿ ಫೆಬ್ರವರಿ 26ರೊಳಗೆ ವಿಧಾನಸಭೆ, ಪರಿಷತ್ ಸದಸ್ಯರಾಗಬೇಕಿತ್ತು. ಇಲ್ಲವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು.

ಅಥಣಿ ಕ್ಷೇತ್ರದಲ್ಲಿ ಸೋಲು
2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಸೋತಿದ್ದರು. ಆದರೆ, ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. ಈಗ ಕ್ಷೇತ್ರದ ರಾಜಕೀಯ ಬದಲಾಗಿದ್ದು, ಮಹೇಶ್ ಕುಮಟಳ್ಳಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಅಥಣಿ ಉಪ ಚುನಾವಣೆಯಲ್ಲಿ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಆರ್. ಶಂಕರ್ಗೆ ನಿರಾಸೆ
ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಅನ್ನು ಆರ್. ಶಂಕರ್ ಅರುಣ್ ಕುಮಾರ್ ಪೂಜಾರ್ಗೆ ಬಿಟ್ಟುಕೊಟ್ಟಿದ್ದರು. ಪರಿಷತ್ ಉಪ ಚುನಾವಣೆಯಲ್ಲಿ ಕಣಕ್ಕಿಳಿದು ಯಡಿಯೂರಪ್ಪ ಸಂಪುಟ ಸೇರುವ ಆಲೋಚನೆಯಲ್ಲಿದ್ದರು. ಆದರೆ, ಹೈಕಮಾಂಡ್ ಲಕ್ಷ್ಮಣ ಸವದಿಗೆ ಟಿಕೆಟ್ ಕೊಟ್ಟಿದೆ.












Click it and Unblock the Notifications