ಲಿಂಗಾಯಿತ ಅಭಿವೃದ್ಧಿ ಮಂಡಳಿಗಾಗಿ ಲಕ್ಷ್ಮಣ ಸವದಿ ಬೇಡಿಕೆ
ಬೆಂಗಳೂರು, ನವೆಂಬರ್ 16: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಸರ್ಕಾರದ ನಿರ್ಧಾರದ ವಿರುದ್ಧ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.
ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೋಮವಾರ ಮುಖ್ಯಮಂತ್ರಿಗಳ ಬಳಿ ಹೊಸ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆ ಮತ್ತೊಂದು ಸುತ್ತಿನ ರಾಜಕೀಯ ಚರ್ಚೆಗಳಿಗೆ ಅವಕಾಶ ಮಾಡಿಕೊಡಲಿದೆ.
ಲಕ್ಷ್ಮಣ ಸವದಿ ಫೇಸ್ ಬುಕ್ನಲ್ಲಿ, ' ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು' ಬೇಡಿಕೆ ಇಟ್ಟಿದ್ದಾರೆ.

'ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ. ಬಿ. ಎಸ್. ಯಡಿಯೂರಪ್ಪನವರಲ್ಲಿ ಕಳಕಳಿಯ ಮನವಿ ಮಾಡಿಕೊಳ್ಳುತ್ತೇನೆ' ಎಂದು ಲಕ್ಷ್ಮಣ ಸವದಿ ಫೇಸ್ ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲು ಸರ್ಕಾರ ತೀರ್ಮಾನ ಮಾಡಿದಾಗಲೇ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಸ್ಥಾಪನೆ ಮಾಡಬೇಕು ಎಂಬ ಚರ್ಚೆಗಳು ಆರಂಭವಾಗಿದ್ದವು.

ಈಗ ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿ ಅವರೇ ಮಂಡಳಿ/ನಿಗಮವನ್ನು ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಸಂಸದರಾಗಿದ್ದ ಬಿಜೆಪಿ ನಾಯಕ ಸುರೇಶ್ ಅಂಗಡಿ ಕೋವಿಡ್ನಿಂದಾಗಿ ಮೃತಪಟ್ಟಿದ್ದರಿಂದ ಉಪ ಚುನಾವಣೆ ಎದುರಾಗಿದೆ. ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಈಗ ಲಿಂಗಾಯತ ಸಮುದಾಯದವರು ಸಹ ಪ್ರಾಧಿಕಾರ/ನಿಮಮ ರಚನೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಬೇಡಿಕೆಗೆ ಸ್ಪಂದಿಸಲಿದೆಯೇ? ಎಂದು ಕಾದು ನೋಡಬೇಕಿದೆ.












Click it and Unblock the Notifications