ಡಿ.ಕೆ. ಸಾಹೇಬ್ರು ಚಿಲ್ಲರೆ ರಾಜಕಾರಣ ಮಾಡೊಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
Recommended Video

ಬೆಂಗಳೂರು, ಸೆಪ್ಟೆಂಬರ್ 18: ಬೆಳಗಾವಿ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸತೀಶ್ ಮತ್ತು ರಮೇಶ್ ಜಾರಕಿಹೊಳಿ ಸಹೋದರರು ಬಂಡೆದ್ದ ಸಂದರ್ಭದಿಂದಲೂ ಅದರ ಬಗ್ಗೆ ಪ್ರತಿಕ್ರಿಯೆ ನೀಡದಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೊನೆಗೂ ಮೌನ ಮುರಿದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿನ ಪಕ್ಷದ ಆಂತರಿಕ ಸಮಸ್ಯೆಗೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ತಮ್ಮ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ಈ ವಿವಾದದಲ್ಲಿ ಡಿ.ಕೆ. ಶಿವಕುಮಾರ್ ಅವರ ಹಸ್ತಕ್ಷೇಪದ ಬಗ್ಗೆ ಜಾರಕಿಹೊಳಿ ಸಹೋದರರು ದೂರು ನೀಡಿದ್ದಾರಲ್ಲ ಎಂಬ ಪ್ರಶ್ನೆಗೆ ಅವರು, 'ಡಿ.ಕೆ. ಸಾಹೇಬರು ಚಿಲ್ಲರೆ ರಾಜಕಾರಣ ಮಾಡುವುದಿಲ್ಲ. ಅವರು ತಮ್ಮದೇ ರೀತಿಯಲ್ಲಿ ಬೆಳೆದುಬಂದ ನಾಯಕರು. ಅವರದೇ ಮಟ್ಟದ ರಾಜಕಾರಣ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು.

ಪಕ್ಷ ತಮಗೆ ಉತ್ತಮ ಸ್ಥಾನ, ಅವಕಾಶಗಳನ್ನು ನೀಡಿದೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎಂದ ಅವರು, ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಶಾಸಕರು ಅತೃಪ್ತಿ ಹೊರಹಾಕಿರುವುದಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದರು.
ಮಂತ್ರಿಗಿರಿ ಹಣೆಯಲ್ಲಿ ಬರೆದಿರಬೇಕು. ನಾನು ಮಂತ್ರಿಗಿರಿ ಪಡೆದುಕೊಳ್ಳುವುದಕ್ಕಾಗಿ ಬ್ಲ್ಯಾಕ್ಮೇಲ್ ಮಾಡುವುದಿಲ್ಲ ಎಂದರು. ಬೆಳಗಾವಿಯಲ್ಲಿ ಪಕ್ಷದ ಸಮಸ್ಯೆ ಬಗ್ಗೆ ಕಾಂಗ್ರೆಸ್ ನಾಯಕರ ಜತೆ ಪ್ರತ್ಯೇಕ ಚರ್ಚೆ ನಡೆಸಲಾಗುವುದು ಎನ್ನುವ ಮೂಲಕ ಜಿಲ್ಲೆಯ ಕಾಂಗ್ರೆಸ್ನಲ್ಲಿ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂಬ ಸುಳಿವನ್ನು ನೀಡಿದರು.
ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮುಸುಕಿನ ಗುದ್ದಾಟ ಕಾಂಗ್ರೆಸ್ಗೆ ತಲೆನೋವಾಗಿ ಪರಿಣಮಿಸಿದೆ. ಈ ಹಿಂದೆ ಪಿಎಲ್ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಉಂಟಾದ ಮನಸ್ತಾಪ ಇನ್ನೂ ಬಗೆಹರಿದಿಲ್ಲ.
ಈ ಮೂವರ ನಡುವೆ ಸಂಧಾನ ಏರ್ಪಡಿಸುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಪ್ರಯತ್ನ ಸಫಲವಾಗಿರಲಿಲ್ಲ.
ಬೆಳಗಾವಿ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಹೀಗಾಗಿ ಇನ್ನು ಯಾವುದೇ ಗೊಂದಲ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದರು. ಇದರ ನಂತರವೂ ಬೆಳಗಾವಿ ರಾಜಕಾರಣ ಇನ್ನಷ್ಟು ಗೊಂದಲಮಯವಾಗಿ ಮುಂದುವರಿಯುವ ಸೂಚನೆ ದೊರೆತಿದೆ.












Click it and Unblock the Notifications