Gruha Lakshmi Scheme: 3 ತಿಂಗಳ 6000 ಹಣ: ಗೃಹ ಲಕ್ಷ್ಮಿಯರಿಗೆ ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು, ಸೆಪ್ಟೆಂಬರ್ 04: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ಗೃಹಿಣಿಯರಿಗೆ 2000 ರೂಪಾಯಿ ಹಣವನ್ನ ಸರ್ಕಾರ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ಇದೀಗ ಬರೋಬ್ಬರಿ ಎಂಟು ತಿಂಗಳಿನಿಂದ ಹಣ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳ ಹಣ ಬಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಹಿಳೆಯರು ಅಸಮಾಧಾನ ಹೊರ ಹಾಕಿದ್ದಾರೆ.
ಕಳೆದ ಮೂರ್ನಾಲ್ಕು ಕಂತುಗಳ ಹಣವನ್ನ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದ್ದು, ಬ್ಯಾಂಕ್ ಖಾತೆ ಹಣ ಬಂದಿಲ್ಲ ಎಂದು ಮಹಿಳೆಯರು ಕೂಡ ಗರಂ ಆಗಿದ್ದಾರೆ. ಸರ್ಕಾರ ಸರಿಯಾಗಿ ಹಣ ನೀಡದಿದ್ರೆ ಮುಂದಿನ ಬಾರಿ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಮಹಿಳಾಮಣಿಯರು ಎಚ್ಚರಿಕೆ ನೀಡ್ತಿದ್ದಾರೆ ಎನ್ನಲಾಗ್ತಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆ ಪಂಚ ಯೋಜನೆ ಭರವಸೆ ಕೊಟ್ಟ ಸರ್ಕಾರ ಇದೀಗ ಯೋಜನೆಗೆ ಕೋಟಿ ಕೋಟಿ ಸುರಿಯುವ ಬೇಕಾದ ಇಕ್ಕಟ್ಟಿಗೆ ಸಿಲುಕಿದಂತೆ ಕಾಣ್ತಿದೆ.

ಕಳೆದ ಎಂಟು ತಿಂಗಳಿನಿಂದ ಗೃಹ ಲಕ್ಷ್ಮಿ ಹಣ ತಿಂಗಳಿಗೆ ಸರಿಯಾಗಿ ಜಮಾ ಆಗುತ್ತಿಲ್ಲ ಎನ್ನುವ ಆರೋಪ ಕೇಳಿ ಬರ್ತಾನೆ ಇದೆ. ಮಹಿಳೆಯರಷ್ಟೇ ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೂಡ ಸರ್ಕಾರದ ಬೊಕ್ಕಸ ಖಾಲಿಯಾಗಿದ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇದರ ನಡುವೆ ಮಹಿಳಾ ಹಾಗೂ ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹ ಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮಹಿಳೆಯ ಅಕೌಂಟ್ ಸೇರಲಿದೆ ಎಂದಿದ್ದಾರೆ. ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವೆ ಹೇಳಿದ್ದಾರೆ.
ಇನ್ನೂ ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಧಾನಸೌಧದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು, ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ. ಸಮೀಕ್ಷೆಯಲ್ಲಿ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಸಮೀಕ್ಷೆಗಳನ್ನು ನಡೆಸಲಾಗುವುದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದರು.
ಸಮೀಕ್ಷೆಯ ಪೋಸ್ಟರ್ ಬಿಡುಗಡೆ ವೇಳೆ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಬಾಬು, ಹಿರಿಯ ಅಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.












Click it and Unblock the Notifications