Gruha Lakshmi Scheme: ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ನೆರವು: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ, ಡಿಸೆಂಬರ್ 14: ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೆ ಕೂಡಾ ಗೃಹ ಲಕ್ಷ್ಮೀ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದರು.
ಶುಕ್ರವಾರವಿಧಾನ ಪರಿಷತ್ತಿನಲ್ಲಿ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತೀ ತಿಂಗಳು ರೂ.2000 ,ಆರ್ಥಿಕ ಸಹಾಯ ಯೋಜನೆಯಡಿ ರೂ.30000 ಗಳ ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 6018 ದೇವದಾಸಿ ಮಹಿಳೆಯರನ್ನು ಸಮೀಕ್ಷೆ ಯಲ್ಲಿ ಗುರುತಿಸಿದ್ದು 2653 ಮಂದಿ ಜೀವಂತವಿದ್ದಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಮತ್ತೋಮ್ಮೆಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಸಚಿವರು ಅನಿಷ್ಟ ಪದ್ಧತಿಯಾದ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುತ್ತಿದೆ ಎಂದರು.
ಬೆಂಗಳೂರಿನ ರಾಜಕಾಲುವೆ ಅಭಿವೃದ್ಧಿಗೆ 5000 ಕೋಟಿ: ಕೃಷ್ಣ ಬೈರೇಗೌಡ
ಮಳೆಗಾಲದಲ್ಲಿ ಬೆಂಗಳೂರಿನಲ್ಲೂ ಸಹ ನೀರು ಒಳ ಚರಂಡಿಯಲ್ಲಿ ಹರಿಯದೆ ರಸ್ತೆ ಮೇಲೆ ಹರಿಯುವ ಕಾರಣ ಪ್ರವಾಹ ಸ್ಥಿತಿ ಉಂಟಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ರಾಜಕಾಲುವೆ ಅಭಿವೃದ್ಧಿಗೆ ವಿಶ್ವಸಂಸ್ಥೆ ಸಹಯೋಗದಲ್ಲಿ ರೂ.5,000 ಕೋಟಿ ಹಣ ವ್ಯಯಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಈ ಬಗ್ಗೆಯೂ ಸದನಕ್ಕೆ ಮಾಹಿತಿ ನೀಡಿದ ಅವರು, "ಬೆಂಗಳೂರಿನಲ್ಲೂ ಸಹ ಈ ವರ್ಷದ ಮಳೆಗಾಲದಲ್ಲಿ ಎಥೇಚ್ಚ ಹಾನಿ ಉಂಟಾಗಿದೆ. ಮಳೆ ನೀರು ರಸ್ತೆಗಳ ಮೇಲೆ ಹರಿದು ವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಪರಿಣಾಮ ಜನ ಸಾಕಷ್ಟು ಸಮಸ್ಯೆಗಳಿಗೆ ತುತ್ತಾಗಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾ ಕಾಲುವೆಗಳ ವ್ಯವಸ್ಥೆಯನ್ನು ಪರಿಪಕ್ವವಾಗಿ ಅಭಿವೃದ್ಧಿ ಮಾಡಬೇಕು ಎಂದು ತೀರ್ಮಾನಿಸಿ ಕಂದಾಯ ಇಲಾಖೆಗೂ ಜವಾಬ್ದಾರಿ ನೀಡಿದ್ದಾರೆ.
ಬೆಂಗಳೂರಿನಲ್ಲಿ 856 ಕಿಮೀ ರಾಜಕಾಲುವೆಗಳು ಇವೆ. ಕೆಲವು ಕಡೆ ಮೂರನೇ ಹಂತದ ಕಾಲುವೆಗಳು 200 ಕಿಮೀ ಎಂದು ಗುರುತಿಸಲಾಗಿದೆ. ಕಾಲುವೆಗಳನ್ನು ಹೆಚ್ಚು ನೀರು ಕೊಂಡೊಯ್ಯಲು ಶಾಶ್ವತ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದ್ದು, 350 ಕಿಮೀ ಅಭಿವೃದ್ಧಿಗೆ ಯೋಜನೆ ರೂಪಿಸಲು ಸೂಚಿಸಲಾಗಿದೆ. ಮೊದಲ ಹಂತದಲ್ಲಿ ರೂ. 240 ಕೋಟಿ ಕೆಲ ತಿಂಗಳಲ್ಲಿ ಟೆಂಡರ್ಗೆ ಹೋಗಲಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ ಬಾಕಿ ಇರುವ ಎಲ್ಲಾ ರಾಜಕಾಲುವೆಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ನೀಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸ್ವತಃ ಡಿಕೆ ಶಿವಕುಮಾರ್ ಅವರು ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.
ರಾಜಕಾಲುವೆ ಅಭಿವೃದ್ಧಿಗೆ ಒನ್ ಟೈಮ್ ಪ್ರಾಜೆಕ್ಟ್ ಬಗ್ಗೆ ವಿಶ್ವಬ್ಯಾಂಕ್ ಜೊತೆ ಮಾತುಕತೆ ನಡೆಸಿ ರೂ. 3000 ಕೋಟಿ ಹಣ ಸಾಲ ಪಡೆದು ಬೆಂಗಳೂರಿನಲ್ಲಿ ಮಳೆ ತೋಂದರೆ ನೀಗಿಸುವ ಕಾಮಗಾರಿಗಳನ್ನು ತೆಗೆದುಕೊಳ್ಳುವ ಯೋಜನೆ ರೂಪಿಸಿದ್ದೇವೆ.ಈ ಪೈಕಿ 2000 ಕೋಟಿ ಹಣವನ್ನು ರಾಜಕಾಲುವೆ ಸರಿಪರಿಸಲು ಬಿಬಿಎಂಪಿಗೆ ಹಾಗೂ 1000 ಕೋಟಿ ಹಣವನ್ನು ಬಿಡಬ್ಲ್ಯುಎಸ್ಎಸ್ಬಿ ಗೆ ನೀಡಿ ಎಲ್ಲೆಲ್ಲಿ ಒಳ ಚರಂಡಿ ವ್ಯವಸ್ಥೆ ಇಲ್ಲ ಅಲ್ಲಿ ಕಾಮಗಾರಿ ನಡೆಸಲು ತಿಳಿಸಲಾಗುವುದು. ಇದಲ್ಲದೆ, ನಮ್ಮ ಹಣಕಾಸು ಇಲಾಖೆ ಹಾಗೂ ವಿಪತ್ತು ನಿರ್ವಹಣೆ ಇಲಾಖೆಯಿಂದಲೂ ರೂ 2,000 ಕೋಟಿ ಹಣವನ್ನು ರಾಜಕಾಲುವೆ ಅಭಿವೃದ್ಧಿಗೆ ನೀಡಲಾಗುವುದು ಎಂದು ತಿಳಿಸಿದರು.
ಭೂ ಕುಸಿತ ತಡೆಗೆ ಶಾಶ್ವತ ಪರಿಹಾರ ಯೋಜನೆ
ಈ ವರ್ಷ ಭೂ ಕುಸಿತ ಪ್ರಕರಣ ನಿರೀಕ್ಷೆಗಿಂತ ಹೆಚ್ಚಾಗಿದೆ.ಕಾರವಾರದ ಘಟನೆ ಎಲ್ಲರನ್ನೂ ಘಾಸಿಗೊಳಿಸಿದೆ. ಮಲೆನಾಡು ಭಾಗದಲ್ಲೂ ಸಣ್ಣಪುಟ್ಟ ಭೂ ಕುಸಿತದ ಘಟನೆ ಸಂಭವಿಸಿದೆ. ಈ ನಿಟ್ಟಿನಲ್ಲಿ ಭೂ ಕುಸಿತವನ್ನು ತಡೆಗಟ್ಟಲು ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಸದನಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
ಈ ಬಗ್ಗೆ ಗಮನ ಸೆಳೆದ ಅವರು, "ಭೂ ಕುಸಿತ ತಡೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚಿಸಿ ಅವರ ಸೂಚನೆ ಹಿನ್ನೆಲೆ ಎರಡೂವರೆ ವರ್ಷದ ಅವಧಿಗೆ ರೂ.400 ಕೋಟಿ ರೂಪಾಯಿ ವೆಚ್ಚದಲ್ಲಿ ಭೂ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೇವೆ. ಭೂ ಕುಸಿತಕ್ಕೆ ಒಳಗಾಗಬಹುದಾದ ಪ್ರದೇಶಗಳ ಬಗ್ಗೆ ನ್ಯಾಷನಲ್ ಜಿಯೋಲಾಜಿಕಲ್ ಸರ್ವೇ ಎಂಬ ಕೇಂದ್ರ ಸರ್ಕಾರದ ಸಂಸ್ಥೆಯಿಂದ ವರದಿ ತರಿಸಲಾಗಿದೆ. ಆ ವರದಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ 6 ಜಿಲ್ಲೆಗಳ 863 ಗ್ರಾಮ ಪಂಚಾಯಿತಿಗಳನ್ನು ಭೂ ಕುಸಿತ ಉಂಟಾಗಬಹುದಾದ ಪ್ರದೇಶಗಳು ಎಂದು ಗುರುತಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಭೂ ಕುಸಿತ ತಡೆಯುವ ಸಂಬಂಧಿ ಯೋಜನೆಗಳ ಕುರಿತು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳಲಾಗಿದೆ. ರೂ. 425 ಕೋಟಿ ಮೌಲ್ಯದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಮನವಿ ನೀಡಿದ್ದಾರೆ. ಭೂ ಕುಸಿತ ತಡೆಗಟ್ಟುವ ಕಾಮಗಾರಿಗೆ ಹಣ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಅದರ ಭಾಗವಾಗಿ ತತಕ್ಷಣ ರೂ.152 ಕೋಟಿ ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ. ಇದಲ್ಲದೆ, ಮಳೆ ಹೆಚ್ಚಾದಾಗ ನಗರ ಪ್ರದೇಶಗಳಲ್ಲಿ ನೀರನ್ನು ಹೊರಹಾಕುವ ಮೂಲಭೂತ ವ್ಯವಸ್ಥೆ ಇಲ್ಲ. ಇದೂ ಸಹ ಪ್ರವಾಹಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ರೂ. 184 ಕೋಟಿ ಮೌಲ್ಯದ 259 ಕಾಮಗಾರಿಗಳಿಗೆ ತತಕ್ಷಣ ಅನುಮೋದನೆ ನೀಡಲಿದ್ದೇವೆ ಎಂದು ಅವರು ತಿಳಿಸಿದರು.












Click it and Unblock the Notifications