'ಬಿ' ವರದಿ ಸಲ್ಲಿಸಿದರೂ ಬೆಳ್ಳಂದೂರು ಕೇಸಿನಲ್ಲಿ BSY ಗೆ ಕಂಟಕ ತಪ್ಪಲಿಲ್ಲ!
ಬೆಂಗಳೂರು, ಮೇ. 28: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ವಯಸ್ಸಾದರೂ ಅವರ ಮೇಲೆ ದಾಖಲಾಗಿರುವ ಪ್ರಕರಣಗಳು ವಿಶ್ರಾಂತಿ ಪಡೆಯಲು ಬಿಡುತ್ತಿಲ್ಲ! ಬೆಳ್ಳಂದೂರು ಜಮೀನು ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಅನಾರೋಗ್ಯದ ಕಾರಣ ನೀಡಿ ಯಡಿಯೂರಪ್ಪ ವಿನಾಯಿತಿ ಪಡೆದಿದ್ದಾರೆ.
ಬೆಳ್ಳಂದೂರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಮಾಡಿದ ಅರೋಪಕ್ಕೆ ಸಂಬಂಧಿಸದಿಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖುದ್ದು ಹಾಜರಾತಿಗೆ ಸಮನ್ಸ್ ಜಾರಿ ಮಾಡಿತ್ತು. ಅನಾರೋಗ್ಯದ ಕಾರಣ ನೀಡಿ ಬಿ.ಎಸ್. ಯಡಿಯೂರಪ್ಪ ಅವರು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಬಿ.ಎಸ್. ಯಡಿಯೂರಪ್ಪ ಅವರಿಗೆ 79 ವರ್ಷ ವಯಸ್ಸಾಗಿದೆ. ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದಾರೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರು ವೈದ್ಯರ ಹಾರೈಕೆಯಲ್ಲಿದ್ದಾರೆ. ಮುಂದಿನ ಹತ್ತು ದಿನಗಳ ಕಾಲ ಬೆಡ್ ರೆಸ್ಟ್ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಯಡಿಯೂರಪ್ಪ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಹಾಜರಾತಿಗೆ ವಿನಾಯಿತಿ ನೀಡದ ನ್ಯಾಯಾಲಯ ಜೂ. 17 ರಂದು ಯಡಿಯೂರಪ್ಪ ಖುದ್ದು ಹಾಜರಾತಿಗೆ ನ್ಯಾಯಾಲಯ ಸೂಚಿಸಿದೆ.

ಏನಿದು ಡಿ ನೋಟಿಫಿಕೇಷನ್ ಪ್ರಕರಣ:
ಐಟಿ ಪಾರ್ಕ್ ನಿರ್ಮಾಣಕ್ಕೆಂದು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ವಾಧೀನ ಪಡಿಸಿಕೊಂಡು ಅಂತಿಮ ಅಧಿಸೂಚನೆ ಹೊರಡಿಸಿತ್ತು. ದೇವರ ಬಿಸನಹಳ್ಳಿ ಬೆಳ್ಳಂದೂರು ಗ್ರಾಮಕ್ಕೆ ಸಂಬಂಧಿಸದಿಂತೆ 4.30 ಎಕರೆ ಜಮೀನನ್ನು ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಟ್ಟು ಡಿ ನೋಟಿಫಿಕೇಷನ್ ಮಾಡಿದ್ದರು. ಈ ಕುರಿತು 2013 ರಲ್ಲಿ ರೈತ ವಾಸುದೇವ ರೆಡ್ಡಿ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. 2015 ರಲ್ಲಿ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಯಾವುದೇ ಅಕ್ರಮ ಸಾಬೀತಾಗಿಲ್ಲ ಎಂದು ನ್ಯಾಯಾಲಯಕ್ಕೆ ಬಿ. ವರದಿ ಸಲ್ಲಿಸಿದ್ದರು. ಈ ಪ್ರಕರಣ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ಬಿ ವರದಿಯನ್ನು ತಿರಸ್ಕರಿಸಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಮತ್ತೊಮ್ಮೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ವರದಿ ಸಲ್ಲಿಸಿದ್ದರು. ಇದನ್ನು ತಿರಸ್ಕರಿಸಿರುವ ನ್ಯಾಯಾಲಯ ಇದೀಗ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿದೆ.












Click it and Unblock the Notifications