Good News: 'ಭೂ ಗ್ಯಾರಂಟಿ' ಕುರಿತು ರೈತರಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್
Good News: ರಾಜ್ಯ ಸರ್ಕಾರವು ರೈತರಿಗೆ ಆಗಾಗ ಶುಭಸುದ್ದಿ ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಭೂ ಗ್ಯಾರಂಟಿ ಅಭಿಯಾನದ ಬಗ್ಗೆ ಅಪ್ಡೇಟ್ ಮಾಹಿತಿಯನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹೌದು.. ರೈತರಿಗೆ ಅನುಕೂಲ ಆಗುವ ದೃಷ್ಟಿಯಿಂದ ರಾಜ್ಯ ಸರ್ಕಾರ ಅಭಿಯಾನ ಆರಂಭಿಸಿದೆ. ಇದು ಭೂಮಿಗೆ ಸಂಬಂಧಿಸಿದ್ದು ಆಗಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಈ ಹಿಂದಿನ ಸರ್ಕಾರದ ಅವಧಿಯಲ್ಲಿ 3 ವರ್ಷಕ್ಕೆ ಕೇವಲ 5,801 ಪ್ರಕರಣಗಳಲ್ಲಿ ಮಾತ್ರ ರೈತರಿಗೆ ಪೋಡಿ ದುರಸ್ಥಿ ಮಾಡಿಕೊಟ್ಟಿದ್ದಾರೆ. ಆದರೆ, ಸದ್ಯ ಇದೀಗ ಕಳೆದ ಡಿಸೆಂಬರ್ನಲ್ಲಿ 'ನನ್ನ ಭೂಮಿ' ಹೆಸರಿನಲ್ಲಿ ಪೋಡಿ ಅಭಿಯಾನ ಕೈಗೊಂಡಿದ್ದು, ಕೇವಲ 7 ತಿಂಗಳುಗಳಲ್ಲಿ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಈವರೆಗೆ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಂಡಿದ್ದು, ಈ ಪೈಕಿ ಶೇಕಡ 20ರಷ್ಟು ಭೂಮಿಯ ಅಳತೆ ಕೆಲಸವೂ ಮುಗಿದಿದೆ. ಉಳಿದ ಪ್ರಕರಣಗಳನ್ನು ಮುಂದಿನ 6 ತಿಂಗಳಲ್ಲಿ ಪೋಡಿ ಮಾಡಿಕೊಡಲು ಸೂಚಿಸಲಾಗಿದೆ. ಅಷ್ಟೇ ಅಲ್ಲದೆ ಇನ್ನೂ 50,000-70,000 ಪೋಡಿ ಪ್ರಕರಣಗಳು ದಾಖಲಿ ಆಗುವ ನಿರೀಕ್ಷೆಯಿದೆ ಎಂದು ಹೇಳಿದರು.
ಮೂರು-ನಾಲ್ಕು ದಶಕಗಳ ಹಿಂದೆ ರೈತರಿಗೆ ದರ್ಖಾಸ್ತಿನಲ್ಲಿ ಮಂಜೂರು ಆಗಿದ್ದ ಜಮೀನಿಗೆ ಈವರೆಗೆ ಪೋಡಿ ಆಗಿಲ್ಲ. ಇದರಿಂದ ರೈತರು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿಯೇ ನನ್ನ ಭೂಮಿ ಹೆಸರಿನಲ್ಲಿ ಪೋಡಿ ಅಭಿಯಾನ ಆರಂಭಿಸಲಾಯಿತು ಎಂದರು.
ಈ ಅಭಿಯಾನದ ಅಡಿ ಜನರ ಅರ್ಜಿಗೆ ಕಾಯದೆ ಸರ್ಕಾರವೇ ರೈತರ ಮನೆ ಬಾಗಿಲಿಗೆ ತೆರಳಿ ಪೋಡಿ ಮಾಡಿಕೊಡುತ್ತಿದೆ. ಹಿಂದೆ ಮಂಜೂರಾಗಿದ್ದ ಜಮೀನಿಗೆ ಸರಿಯಾದ ದಾಖಲೆಗಳನ್ನು ಅವರ ಕೈಗೆ ಕೊಟ್ಟು ಅವರ ಭೂ ಮಾಲೀಕತ್ವಕ್ಕೆ ಗ್ಯಾರಂಟಿ ನೀಡುವುದು ಈ ಕಾರ್ಯಕ್ರಮದ ವಿಶೇಷ ಎಂದು ಹೇಳಿದರು.
ಭೂ ಸುರಕ್ಷಾ ಯೋಜನೆಯಡಿಯಲ್ಲಿ ಇಲ್ಲಿವರೆಗೆ 29.8 ಕೋಟಿ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗಿದ್ದು, ವರ್ಷಾಂತ್ಯದೊಳಗೆ ತಹಶೀಲ್ದಾರ್ ಕಚೇರಿಗಳಲ್ಲಿರುವ ಎಲ್ಲಾ ಮೂಲ ಕಡತಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ರೈತರು ತಹಶೀಲ್ದಾರ್ ಕಚೇರಿಗಳಲ್ಲಿ ತಮ್ಮ ಭೂ ದಾಖಲೆಗಳನ್ನು ತೆಗೆದುಕೊಳ್ಳಲು ತುಂಬಾ ಕಷ್ಟಪಡುತ್ತಿದ್ದಾರೆ. ಎಷ್ಟೋ ದಾಖಲೆಗಳು ಕಳೆದೇ ಹೋಗಿದ್ದರೆ, ಮತ್ತಷ್ಟು ದಾಖಲೆಗಳನ್ನು ಕಾನೂನುಬಾಹೀರವಾಗಿ ತಿದ್ದುವ ಮೂಲಕ ರೈತರನ್ನು ಕೋರ್ಟು ಕಚೇರಿಗಳಿಗೆ ಅಲೆದಾಡಿಸಲಾಗುತ್ತಿದೆ. ರೈತರಿಗೆ ಈ ಎಲ್ಲಾ ತೊಂದರೆಗಳಿಂದ ಮುಕ್ತಿ ನೀಡುವ ಉದ್ದೇಶದಿಂದ ಭೂ ಸುರಕ್ಷಾ ಯೋಜನೆಯನ್ನು ಜಾರಿಗೆ ತರಲಾಯಿತು.
ಈ ಯೋಜನೆ ಯಶಸ್ವಿ ಆದರೆ, ಹಲವು ಅಕ್ರಮಗಳನ್ನು ತಡೆಯಬಹುದು. ಅಲ್ಲದೆ, ರೈತರು ಅನಗತ್ಯವಾಗಿ ಸರ್ಕಾರಿ ಕಚೇರಿ ಅಲೆಯುವುದನ್ನು ತಪ್ಪಿಸುವುದರ ಜೊತೆಗೆ ಮನೆಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿ ದಾಖಲೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಈ ಯೋಜನೆಯನ್ನು ಪ್ರಾಯೋಗಿಕವಾಗಿ 31 ತಾಲೂಕುಗಳಲ್ಲಿ ಆರಂಭಿಸಿ ಇದೀಗ ಎಲ್ಲಾ ತಾಲೂಕುಗಳಲ್ಲೂ ಕೆಲಸ ಆರಂಭಿ ಮಾಡಲಾಗಿದೆ. ರಾಜ್ಯಾದ್ಯಂತ ತಹಶೀಲ್ದಾರ್, ಎಸಿ ಹಾಗೂ ಡಿಸಿ ಕಚೇರಿಗಳಲ್ಲಿ ಸುಮಾರು 100 ಕೋಟಿ ಮೂಲ ದಾಖಲೆ ಪುಟಗಳಿವೆ ಎಂದು ಅಂದಾಜಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಪುಟಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಗ್ರಾಮ ಆಡಳಿತಾಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಕಚೇರಿ ವ್ಯವಸ್ಥೆ ಮಾಡಿಕೊಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಸುಮಾರು 2,600 ಕಡೆಗಳಲ್ಲಿ ವಿಎ ಗಳಿಗೆ ಕಚೇರಿ ನೀಡಲಾಗಿದೆ ಎಂದು ಹೇಳಿದರು.
"ಸ್ವಾತಂತ್ರ್ಯ ಪೂರ್ವ ಕಾಲದಿಂದಲೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸ್ವಂತ ಕಚೇರಿ ಇಲ್ಲ. ಹೀಗಾಗಿ ಅವರು ಬೀದಿಯಲ್ಲೇ ನಿಂತು ಕೆಲಸ ಮಾಡಬೇಕಾದ ಅನಿವಾರ್ಯತೆ ಇತ್ತು. ತಮಗೆ ಕಚೇರಿ ನೀಡುವಂತೆ ಅವರೂ ಸಹ ಅನೇಕ ಬಾರಿ ಹೋರಾಟ ನಡೆಸಿದ್ದಾರೆ. ಅವರ ಹೋರಾಟ ನ್ಯಾಯಯುತವಾಗಿದ್ದು, ಸರ್ಕಾರವೂ ಸ್ಪಂದಿಸಿದೆ. ಗ್ರಾಮ ಪಂಚಾಯತ್ ಕಚೇರಿಗಳಲ್ಲೇ ಗ್ರಾಮ ಆಡಳಿತ ಅಧಿಕಾರಿಗಳಿಗೂ ಕಚೇರಿ ವ್ಯವಸ್ಥೆ ಮಾಡುವ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ಚರ್ಚೆ ನಡೆಸಲಾಗಿದ್ದು, ಅದರಂತೆ ಈ ಹಿಂದೆ 1,200 ಅಧಿಕಾರಿಗಳಿಗೆ ಕಚೇರಿ ವ್ಯವಸ್ಥೆ ನೀಡಲಾಗಿದೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಅಭಿಯಾನದ ಮಾದರಿಯಲ್ಲಿ 2,600 ಕಡೆಗಳಲ್ಲಿ ಕಚೇರಿ ವ್ಯವಸ್ಥೆ ಮಾಡಲಾಗಿದ್ದು, ಉಳಿದ 3500 ಅಧಿಕಾರಿಗಳಿಗೂ ಶೀಘ್ರದಲ್ಲೇ ಕಚೇರಿ ನೀಡಲಾಗುವುದು. ಗ್ರಾಮ ಪಂಚಾಯಿತಿ ಆವರಣಗಳಲ್ಲಿ ಕೊಠಡಿ ನಿರ್ಮಿಸಲು ಸ್ಥಳಾವಕಾಶ ಇದ್ದರೆ, ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ" ಎಂದರು.












Click it and Unblock the Notifications