'ವಕ್ಫ್ ಬೋರ್ಡ್ ಹೆಸರಿನಲ್ಲಿ ಕಾಂಗ್ರೆಸ್ ನಾಯಕರಿಂದ ಜಮೀನು ಲೂಟಿ'
ಬೆಂಗಳೂರು, ಏಪ್ರಿಲ್ 03: ಲೋಕಸಭೆಯಲ್ಲಿ ನಿನ್ನೆ(ಏಪ್ರಿಲ್02) ಒಂದು ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ವಕಾಂಗ್ರೆಸ್ ಪಕ್ಷ ವಕ್ಫ್ ಕಾಯಿದೆಗೆ ತಿದ್ದುಪಡಿಯನ್ನು ರಾಜ್ಯ- ದೇಶದಲ್ಲಿ ವಿರೋಧಿಸುವುದು ಒಂದು ದುರಂತ. ಕರ್ನಾಟಕದಲ್ಲಿ ಸಾವಿರಾರು ಕೋಟಿ ಮೌಲ್ಯದ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರು, ರಾಜಕಾರಣಿಗಳು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿ ವೇಳೆ ಮಾತನಾಡಿದ ಬಿ ವಿಜಯೇಂದ್ರ ಅವರು, ವಕ್ಫ್ ಬೋರ್ಡ್ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರು, ರಾಜಕಾರಣಿಗಳು ಲೂಟಿ ಮಾಡಿದ್ದಾರೆ. ಇಂಥ ಕಾಂಗ್ರೆಸ್ ಮುಖಂಡರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದರು. ಹಲವಾರು ದಶಕಗಳಿಂದ ವಕ್ಫ್ ಕಾಯಿದೆ ಬಗ್ಗೆ ದೇಶ- ರಾಜ್ಯದಲ್ಲಿ ಚರ್ಚೆ ನಡೆಯುತ್ತಿತ್ತು. ನಮ್ಮ ರಾಜ್ಯದಲ್ಲಿ ಸಾವಿರ ವರ್ಷಗಳ ಇತಿಹಾಸ ಇರುವ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳ ಜಮೀನನ್ನು, ರಾಜ್ಯದ ಲಕ್ಷ ಲಕ್ಷ ರೈತರ ಜಮೀನನ್ನು ಕೂಡ ವಕ್ಫ್ ಬೋರ್ಡ್ ಹೆಸರು ಹೇಳಿಕೊಂಡು ಕಿತ್ತುಕೊಳ್ಳುವ ಕೆಲಸ ನಡೆದಿತ್ತು ಎಂದು ಆಕ್ಷೇಪಿಸಿದರು.

ಇದರ ವಿರುದ್ಧ ಬಿಜೆಪಿ, ಕೆಲ ತಿಂಗಳುಗಳ ಹಿಂದೆ ಪ್ರತಿಭಟನೆ ಮಾಡಿತ್ತು. ಕೇಂದ್ರದಲ್ಲಿ ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಸಂಸತ್ತಿನ ಉಪ ಸಮಿತಿ ರಚಿಸಿದ್ದರು. ವಕ್ಫ್ ಮಂಡಳಿ ಹೆಸರಿನಲ್ಲಿ ದೇಶ, ರಾಜ್ಯದ ಜನರಿಗೆ ಆಗುತ್ತಿದ್ದ ದೋಖಾ, ಅನ್ಯಾಯ ಸರಿಪಡಿಸಲು ಈ ಉಪ ಸಮಿತಿ ರಚಿಸಲಾಗಿತ್ತು ಎಂದು ಬಿ ವೈ ವಿಜಯೇಂದ್ರ ಅವರು ತಿಳಿಸಿದರು.
ವಕ್ಫ್ ತಿದ್ದುಪಡಿ ಮಸೂದೆಗೆ ನಿನ್ನೆ ಮಧ್ಯರಾತ್ರಿ ಲೋಕಸಭೆ ಮಂಜೂರಾತಿ ಕೊಟ್ಟಿದ್ದು, ಇದೊಂದು ಐತಿಹಾಸಿಕ ಕ್ಷಣ ಎಂದು ತಿಳಿಸಿದರು. ಪ್ರತಿಯೊಬ್ಬರೂ ಸಂಭ್ರಮ ಆಚರಿಸುವ ಸುಸಂದರ್ಭ ಇದು ಎಂದರು. ಈ ಮಸೂದೆಗೆ ಮಂಜೂರಾತಿಯನ್ನು ಹಿಂದೂಗಳಷ್ಟೇ ಅಲ್ಲ. ಮುಸಲ್ಮಾನರೂ ಸ್ವಾಗತಿಸಿದ್ದಾರೆ ಎಂದು ತಿಳಿಸಿದರು. ಇದೇವೇಳೆ ಧರಣಿನಿರತರಿಗೆ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಲಾಯಿತು.
ಸಿಎಂ ಮನೆಗೆ ಮುತ್ತಿಗೆಗೆ ಮುಂದಾದ ಬಿಜೆಪಿ ಕಾರ್ಯಕರ್ತರ ಸೆರೆ
ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯ ಅಹೋರಾತ್ರಿ ಧರಣಿಯ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲು ಕರೆ ನೀಡಿದರು.ಈ ಕರೆಯಂತೆ ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜ್, ಪ್ರಮುಖರಾದ ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್ ಮೊದಲಾದವರಲ್ಲದೆ, ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.












Click it and Unblock the Notifications