ಚಿಕ್ಕಬಳ್ಳಾಪುರ ಬಂದ್: ಲಘು ಲಾಠಿ ಪ್ರಹಾರ, ಉದ್ವಿಘ್ನ ಪರಿಸ್ಥಿತಿ
ಚಿಕ್ಕಬಳ್ಳಾಪುರ, ಡಿಸೆಂಬರ್ 20: ಬೆಳಿಗ್ಗಿನಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಎಚ್.ಎನ್. ವ್ಯಾಲಿ ಯೋಜನೆ ವಿರೋಧಿಸಿ ಕರೆ ನೀಡಿದ್ದ ಚಿಕ್ಕಬಳ್ಳಾಪುರ ಬಂದ್ ಮಧ್ಯಾಹ್ನದ ವೇಳೆಗೆ ಉದ್ವಿಘ್ನಗೊಂಡಿದೆ.
ಹೆಬ್ಬಾಳ, ನಾಗವಾರ ಕೆರೆಯ ಕಲುಷಿತ ನೀರನ್ನು ಎರಡು ಹಂತದಲ್ಲಿ ಶುದ್ಧೀಕರಣಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುವ ಎಚ್.ಎನ್.ವ್ಯಾಲಿ ಯೋಜನೆ ವಿರೋಧಿಸಿ ಚಿಕ್ಕಬಳ್ಳಾಪುರ ಬಂದ್ಗೆ ಕರೆ ನೀಡಲಾಗಿತ್ತು. ಶಾಶ್ವತ ನೀರಾವರಿ ಹೋರಾಟ ಸಮಿತಿ, ರೈತ ಸಂಘಗಳು, ಕನ್ನಡಪರ ಸಂಘಟನೆಗಳು, ಜೆಡಿಎಸ್, ಬಿಜೆಪಿ ಮತ್ತು ವಿವಿಧ ಸಂಘ ಸಂಸ್ಥೆಗಳು ಈ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದವು.

ಆದರೆ ಕಾಂಗ್ರೆಸ್ ಕಾರ್ಯಕರ್ತರು ಬಂದ್ ವಿರೋಧಿಸಿ ನಗರಾದ್ಯಂತ ಬೈಕ್ ರ್ಯಾಲಿ ನಡೆಸಿ ವರ್ತಕರಿಗೆ ಬಾಗಿಲು ತೆಗೆಯುವಂತೆ ಕರೆ ನೀಡುತ್ತ ಸಾಗಿದರು. ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಬಂದ್ಗೆ ಬೆಂಬಲ ವ್ಯಕ್ತಪಡಿಸಿ ಬೈಕ್ ರ್ಯಾಲಿ ನಡೆಸಿದರು. ಚಳವಳಿಗಾರರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ರ್ಯಾಲಿ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಂತೆ ಪರ-ವಿರೋಧದ ಘೋಷಣೆಗಳು ಮೊಳಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಈ ವೇಳೆ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕಾರ್ಯಕರ್ತರ ಮನವೊಲಿಸಿ ಅಲ್ಲಿಂದ ಕಳುಹಿಸಲು ಮುಂದಾದರು. ಈ ವೇಳೆ ಘೋಷಣೆಗಳು ತಾರಕಕ್ಕೆ ಏರಿ, ನೂಕಾಟ ತಳ್ಳಾಟ ಕಾಣಿಸಿಕೊಂಡಿತು. ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದಕ್ಕೆ ಮುಂದಾದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು. ಈ ಸಮಯದಲ್ಲಿ ಕೆಲವರಿಗೆ ಗಾಯಗಳಾಗಿವೆ.
ಪರಿಸ್ಥಿತಿ ಸದ್ಯ ಬೂದಿ ಮುಚ್ಚಿದ ಕೆಂಡದಂತಿದ್ದು ಮುಂಜಾಗ್ರತೆ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.












Click it and Unblock the Notifications