Siddaramaiah: ಮರ್ಯಾದಾ ಹತ್ಯೆ ತಡೆಗೆ ಕಾನೂನು: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮರ್ಯಾದಾ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲ ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯಲ್ಲಿ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಾನ್ಯಾ ಪಾಟೀಲ್ ಅವರನ್ನು ಆಕೆಯ ತಂದೆಯೇ ಹತ್ಯೆ ಮಾಡಿದ್ದರು. ಗರ್ಭಿಣಿ ಪುತ್ರಿಯನ್ನೇ ಹತ್ಯೆ ಮಾಡಿದ್ದ ಈ ಪ್ರಕರಣ ದೇಶಾದ್ಯಂತ ಗಮನ ಸೆಳೆದಿತ್ತು. ಇದೀಗ ಮರ್ಯಾದಾ ಹತ್ಯೆ ತಡೆಯಲು ಕಾಯ್ದೆಯನ್ನು ರೂಪಿಸಿ ಜಾರಿ ಮಾಡಬೇಕೆಂಬ ಮನವಿಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಹೋರಾಟಗಾರ್ತಿ ಕೆ ನೀಲಾ ಅವರು, ಅನ್ನ ಜಾತಿ ಯುವಕನ ಮದುವೆಯಾದ ಕಾರಣಕ್ಕೆ ತಂದೆಯೊಬ್ಬರು 7 ತಿಂಗಳ ಗರ್ಭಿಣಿ ಪುತ್ರಿಯನ್ನೇ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಠಿಣ ಕಾನೂನು ಜಾರಿಗೆ ಒತ್ತಾಯಿಸಿದರು. ರಾಜ್ಯದಲ್ಲಿ ಮರ್ಯಾದೆ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಯಾವ ಭಾಷೆ ಕಲಿತರೂ ಕನ್ನಡಿಗರಾಗಿಯೇ ಉಳಿಯಬೇಕು
ರಾಜ್ಯದಲ್ಲಿ ಕನ್ನಡ ಕಲಿಯದೆಯೇ ಬದುಕಬಹುದಾದ ವಾತಾವರಣವಿದೆ. ಕನ್ನಡ ಕಲಿಯಲೇಬೇಕಾದ ಅನಿವಾರ್ಯತೆ ಇಲ್ಲ. ಬೇರೆ ಭಾಷೆಯಲ್ಲಿ ಮಾತನಾಡುವವರೊಂದಿಗೆ ನಾವು ಕನ್ನಡದಲ್ಲಿಯೇ ಮಾತನಾಡಬೇಕು. ತಮಿಳುನಾಡು ತೆಲಂಗಾಣ, ಕೇರಳ, ಮಹಾರಾಷ್ಟ್ರ ಹಾಗೂ ಆಂಧ್ರದಲ್ಲಿ ಅವರವರ ಭಾಷೆಯಲ್ಲಿಯೇ ಮಾತನಾಡುತ್ತಾರೆ. ಕನ್ನಡಿಗರು ಏಕೆ ಕನ್ನಡದಲ್ಲಿ ಮಾತನಾಡಬಾರದು? ಕನ್ನಡದಲ್ಲಿಯೇ ಮಾತನಾಡಬೇಕು. ಅನಿವಾರ್ಯವಾದರೆ ಬೇರೆ ಭಾಷೆ ಬಳಸಿ. ಯಾವ ಭಾಷೆ ಕಲಿತರೂ ಕನ್ನಡಿಗರಾಗಿಯೇ ಉಳಿಯಬೇಕು ಎಂದರು.
ಕನ್ನಡ ಭಾಷೆ, ನೆಲ, ಜಲ, ಗಡಿ ಇವುಗಳ ಬಗ್ಗೆ ಹೋರಾಟ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಎಲ್ಲಾದರೂ ಇರು, ಎಂತಾದರೂ ಇರು, ಕನ್ನಡವಾಗಿರು" ಎಂದು ಕುವೆಂಪು ಹೇಳಿದ್ದಾರೆ. 1983 ರಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ನೇಮಕಗೊಂಡು ಒಂದೂವರೆ ವರ್ಷ ಕಾರ್ಯನಿರ್ವಹಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಕನ್ನಡ ಬೆರಳಚ್ಚು ಯಂತ್ರಗಳನ್ನು ಎಲ್ಲೆಡೆ ಕಳುಹಿಸಿದ್ದು ಅವರು ಮಾಡಿದ ಮೊದಲ ಕೆಲಸವಾಗಿತ್ತು ಎಂದು ನೆನಪಿಸಿಕೊಂಡರು.
ಕನ್ನಡ ಆಡಳಿತ ಭಾಷೆಯಾಗಿದ್ದು, ಕನ್ನಡ ಬಳಕೆಅನಿವಾರ್ಯವಾಗಬೇಕೆಂದು ತೀರ್ಮಾನಿಸಿ ಈ ಕೆಲಸ ಮಾಡಿದೆ ಎಂದರು. ಯಾರೇ ಆಂಗ್ಲ ಭಾಷೆಯಲ್ಲಿ ಮಾತನಾಡಿದರೂ ಕನ್ನಡದಲ್ಲಿಯೇ ಮಾತನಾಡಿಸುವುದು ಹಾಗೂ ಕನ್ನಡದಲ್ಲಿಯೇ ಸಹಿ ಮಾಡುವುದು ಮತ್ತು ಟಿಪ್ಪಣಿ ಬರೆಯುವುದು ಎಂದರು. ಹೊರರಾಜ್ಯಗಳಿಗೆ ಬರೆಯುವಾಗ ಮಾತ್ರ ಆಂಗ್ಲ ಭಾಷೆ ಬಳಸಿದರೂ ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬರಗೂರು ರಾಮಚಂದ್ರಪ್ಪ ಅವರು ಹೇಳಿದಂತೆ ಈ ಕನ್ನಡ ಶಾಲೆಗಳ ಬಗ್ಗೆ ಕೂಡಲೇ ಒಂದು ಸಭೆ ಕರೆದು , ಅಲ್ಲಿನ ತೀರ್ಮಾನವನ್ನು ಜಾರಿಗೊಳಿಸಲಾಗುವುದು ಎಂದರು.ವೈಯಕ್ತಿಕವಾಗಿ ನಾನು ದ್ವಿಭಾಷಾ ನೀತಿಯ ಪರವಾಗಿದ್ದು , ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ತೀರ್ಮಾನ ಕೈಗೊಳ್ಳುವುದು ಎಂದರು. ಕನ್ನಡ ಚಳವಳಿಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪಸಮಿತಿಯನ್ನು ರಚಿಸಲಾಗಿದ್ದು, ಗೃಹ ಸಚಿವರು ಅಧ್ಯಕ್ಷರಾಗಿದ್ದಾರೆ. ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.












Click it and Unblock the Notifications