ವಕೀಲ ಜಗದೀಶ್ ಜಾಮೀನು ತೀರ್ಪು ಶನಿವಾರ ಪ್ರಕಟ: ಮತ್ತೆರಡು ಕೇಸು ದಾಖಲು
ಬೆಂಗಳೂರು, ಮಾ. 04: ನ್ಯಾಯಾಲಯದ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಕೀಲ ಕೆ.ಎನ್. ಜಗದೀಶ್ ಅವರ ಜಾಮೀನು ಅರ್ಜಿಯ ತೀರ್ಪು ಮಾ. 05 ರಂದು ಹೊರ ಬೀಳಲಿದೆ.
ನ್ಯಾಯಾಲಯದ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ವಕೀಲ ಜಗದೀಶ್ ಅವರನ್ನು ಬಂಧಿಸಲಾಗಿತ್ತು. ಇದರ ನಡುವೆ ಸದ್ದಿಲ್ಲದೆ ಜಗದೀಶ್ ವಿರುದ್ಧ ಮತ್ತೆರಡು ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿ ಬಾಡಿ ವಾರಂಟ್ ಆಧಾರದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಯಲಿದೆ.
ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣ ಸಂಬಂಧ ಆರೋಪಿತ ವಕೀಲ ಜಗದೀಶ್ ಅವರನ್ನು ಜೈಲಿನಲ್ಲಿಯೇ ವಿಚಾರಣೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಹೀಗಾಗಿ ಮಾ. 05 ರಂದು ಜಗದೀಶ್ ಅವರನ್ನು ಕೊಡಿಗೇಹಳ್ಳಿ ಪೊಲೀಸರು ಜೈಲಿನಲ್ಲಿ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇದರ ಜತೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪೇದೆ ರಮೇಶ್ ಎಂಬುವರನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಒಂದು ಕೇಸು ದಾಖಲಾಗಿದೆ. ಎರಡು ಪ್ರಕರಣಗಳ ವಿಚಾರಣೆಯನ್ನು ಜೈಲಿನಲ್ಲಿಯೇ ಎದುರಿಸಬೇಕಾಗಿದೆ.

ಜಾತಿ ನಿಂದನೆ ಪ್ರಕರಣದ ವಿವರ:
ಕುಮಾರಸ್ವಾಮಿ ಲೇಔಟ್ನ ನಿವಾಸಿ ಮುತ್ತಯ್ಯ ಎಂಬವರು ಫೆ. 14ರಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯಿದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್ ಅಡಿ ಕೊಡಿಗೇಹಳ್ಳಿ ಠಾಣೆಯಲ್ಲಿ ಜಗದೀಶ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ 68 ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಗುರುವಾರ ನಡೆದಿದ್ದು, ನ್ಯಾ. ಕಾಶಿಂ ಚೂರಿಖಾನ್ ಪೀಠ ವಿಚಾರಣೆ ನಡೆಸಿತು.

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿತ ವಕೀಲ ಕೆ ಎಂ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತನಿಖಾಧಿಕಾರಿಯು ವಿಚಾರಣೆ ನಡೆಸಲು ಅನುಮತಿ ಕೋರಲಾಯಿತು. ಅನುಮತಿ ನೀಡಿ ಸಿಟಿ ಸಿವಿಲ್ ನ್ಯಾಯಾಲಯ ಆದೇಶಿಸಿತು ಈ ಹಿನ್ನೆಲೆಯಲ್ಲಿ ಜಗದೀಶ್ ನ್ಯಾಯಾಂಗ ಬಂಧನ ಮುಂದುವರೆಯಲಿದೆ. ಕೋರ್ಟ್ ಆವರಣದ ಗಲಾಟೆ ಪ್ರಕರಣದಲ್ಲಿ ಮಾ. 05 ರಂದು ಜಾಮೀನು ದೊರೆತರೂ ಬಿಡುಗಡೆ ಸಾಧ್ಯತೆ ಕಡಿಮೆ.

ವಿಧಾನಸೌಧ ಪೊಲೀಸ್ ಠಾಣೆ ಯಲ್ಲಿ ಮತ್ತೊಂದು ಕೇಸು:
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತರ ಸಹಾಯಕ ಸಿಬ್ಬಂದಿ ರಮೇಶ್ ಎಂಬವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ರಮೇಶ್ ಅವರ ಪರವಾಗಿ ಪೊಲೀಸ್ ಸಿಬ್ಬಂದಿ ನಾಗರಾಜ್ ಕೇನಿಕರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಫೆ. 13 ರಂದು ನೀಡಿರುವ ದೂರಿನ ಮೇರೆಗೆ ಜಗದೀಶ್ ವಿರುದ್ಧ ಐಪಿಸಿ ಸೆಕ್ಷನ್ 506, 290, 353ರ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಜಗದೀಶ್ ಅವರನ್ನು ಬಾಡಿ ವಾರಂಟ್ ಆಧಾರದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ.

ನ್ಯಾಯಾಲಯದ ಆವರಣದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 5ರಂದು ಜಗದೀಶ್ ಅವರ ಜಾಮೀನು ಮನವಿಯ ಕುರಿತು ನ್ಯಾಯಾಲಯವು ಆದೇಶ ಮಾಡಲಿದೆ. ಅಂದೇ ಜಾತಿ ನಿಂದನೆ ಪ್ರಕರಣದಲ್ಲಿಯೂ ಆರೋಪಿಯಾಗಿರುವ ಜಗದೀಶ್ ಅವರ ಜಾಮೀನು ಮನವಿಗೆ ಸಂಬಂಧಿಸಿದಂತೆ ವಾದ ಮಂಡನೆ ಮಾ. 05 ರಂದೇ ನಡೆಯುವ ಸಾಧ್ಯತೆಯಿದೆ.












Click it and Unblock the Notifications