ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆಯ ಭವಿಷ್ಯ ಇದೆ: ಸಿದ್ದರಾಮಯ್ಯ
ಬೆಳಗಾವಿ, ಮಾರ್ಚ್06 : 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ ಎಂದು ಭರವಸೆ ನೀಡಿದ ಸಿಎಂ, ಈ ಯೋಜನೆಯಿಂದ ಎರಡು ರೀತಿಯ ಲಾಭ ಆಗಲಿದೆ. ಮೊದಲಿಗೆ ಒಣ ಭೂಮಿ ಇರುವ ಜಮೀನುಗಳಿಗೆ ನೀರು ಒದಗುತ್ತದೆ. ಎರಡನೆಯದಾಗಿ ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಅಭಿವೃದ್ಧಿ ಕೂಡ ಆಗುತ್ತದೆ ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಉದಾಹರಣೆಗಳನ್ನು ನೀಡಿ ವಿವರಿಸಿದರು.

ಕೇಂದ್ರದ ಹಾಲಿ ಸರ್ಕಾರ ಮತ್ತು ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ. ಕೃಷ್ಣ ಮೇಲ್ದಂಡೆ, ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಒಂಚೂರು ಸಹಕಾರ ನೀಡುತ್ತಿಲ್ಲ. ಬೆಳಗಾವಿಯಲ್ಲಿ ಗೆದ್ದಿರುವ ಇಬ್ಬರು ಸಂಸದರು ಸೇರಿ ಬಿಜೆಪಿಯ ಒಬ್ಬೇ ಒಬ್ಬ ಸಂಸದ ಪಾರ್ಲಿಮೆಂಟಲ್ಲಿ ದ್ವನಿ ಎತ್ತಲಿಲ್ಲ. ಇದು ಬೆಳಗಾವಿ ಜನತೆಗೆ, ರಾಜ್ಯದ ಜನತೆಗೆ ಬಿಜೆಪಿ ಸಂಸದರು ಬಗೆದ ದ್ರೋಹ ಅಲ್ಲವೇ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.
ನೀರಾವರಿ ಯೋಜನೆಗಳ ಬಗ್ಗೆಯೂ ಈ ಸಂಸದರು ಬಾಯಿಯನ್ನೇ ಬಿಡಲಿಲ್ಲ, ರಾಜ್ಯಕ್ಕೆ ಆರ್ಥಿಕವಾಗಿ ವಂಚಿಸುತ್ತಿರುವ ಬಗ್ಗೆಯೂ ತುಟಿ ಬಿಡದ ಈ ಸಂಸದರಿಗೆ ನೀವು ಕೊಟ್ಟ ಓಟಿಗೆ ಏನು ಗೌರವ ಬಂತು ಹೇಳಿ. ಬಿಜೆಪಿ ಇವತ್ತಿನವರೆಗೂ ನುಡಿದಂತೆ ನಡೆದ ಒಂದೇ ಒಂದು ಉದಾಹರಣೆ ಇದೆಯಾ ನೀವೇ ವಿಚಾರ ಮಾಡಿ. ಕಾಂಗ್ರೆಸ್ ಸರ್ಕಾರ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ಕೊಟ್ಟ ಓಟಿಗೆ ಗೌರವ ಕೊಟ್ಟಿದ್ದೇವೆ. ಹೌದೋ ಇಲ್ಲವೋ ಎದೆ ಮುಟ್ಟಿಕೊಂಡು ಕೇಳಿಕೊಳ್ಳಿ ಎಂದು ಸಿಎಂ ಕರೆ ನೀಡಿದರು.
ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ, ಕುಟುಂಬದ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ಕೊಡುತ್ತಿರುವ ನಾವು ಬೇಕೋ-ದೇವರ ಹೆಸರಲ್ಲಿ ನಿಮ್ಮ ಭಾವನೆ ಕೆರಳಿಸಿ ನಿಮ್ಮ ಬದುಕಿಗೆ ವಂಚಿಸುತ್ತಿರುವ ಬಿಜೆಪಿ ಬೇಕಾ? ನಿಮ್ಮ ಹೃದಯವನ್ನು ಕೇಳಿಕೊಳ್ಳಿ. ನಿಮ್ಮ ಹೃದಯ ಹೇಳಿದವರಿಗೆ ಮತ ಹಾಕಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ನರೇಂದ್ರ ಮೋದಿಯವರ ಸುಳ್ಳುಗಳಿಗೆ, ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳಿಗೆ ಕೋಲೆ ಬಸವನಂತೆ ತಲೆ ಆಡಿಸುವ ಬಿಜೆಪಿಯನ್ನು ತಿರಸ್ಕರಿಸಿ. ನಾವು ಕೆಲಸ ಮಾಡಿ ಕೂಲಿ ಕೇಳುತ್ತಿದ್ದೇವೆ. ಕೆಲಸ ಮಾಡಿದವರಿಗೆ ನೀವು ಕೂಲಿ ಕೊಡಿ. ನಾಡಿನ ಬಡವರ, ಮಧ್ಯಮ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದು ತಪ್ಪಾ? ಆದರೆ ಬಿಜೆಪಿ ಇದನ್ನು ವಿರೋಧಿಸುತ್ತಿದೆ. ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು BJP ಅವಮಾನಿಸುತ್ತಿದೆ. ನಿಮ್ಮನ್ನು ಅವಮಾನಿಸುವವರನ್ನು ಕ್ಷಮಿಸಬೇಡಿ ಎಂದು ಹೇಳಿದರುಟ












Click it and Unblock the Notifications