ಮಲೆನಾಡ ಗಾಂಧಿ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು
ಬೆಂಗಳೂರು, ಜನವರಿ 07 : ಮಲೆನಾಡ ಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಶಿಕ್ಷಣ ಸಚಿವ ಎಚ್.ಜಿ. ಗೋವಿಂದೇಗೌಡ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೊಪ್ಪ ಹೊರವಲಯದಲ್ಲಿರುವ ಮಣಿಪುರ ಎಸ್ಟೇಟ್ನಲ್ಲಿ ಇಂದು ಸಂಜೆ ಗೋವಿಂದೇಗೌಡರ ಅಂತ್ಯಕ್ರಿಯೆ ನಡೆಯಲಿದೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಚ್.ಜಿ.ಗೋವಿಂದೇಗೌಡರು (90) ಬುಧವಾರ ಮಧ್ಯಾಹ್ನ 2.45ರ ಸುಮಾರಿಗೆ ಕೊಪ್ಪ ಹೊರವಲಯದಲ್ಲಿರುವ ಮಣಿಪುರ ಎಸ್ಟೇಟ್ನಲ್ಲಿ ವಿಧಿವಶರಾದರು. ಗೋವಿಂದೇಗೌಡರ ಎರಡು ಕಣ್ಣುಗಳನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡಲಾಗಿದೆ. [ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ ವಿಧಿವಶ]
ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಮಣಿಪುರ ಎಸ್ಟೇಟ್ನಲ್ಲಿ ಗೋವಿಂದೇಗೌಡರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಿದ್ದು, ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ಗಣ್ಯರು ಗೋವಿಂದೇಗೌಡರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಯಾರು, ಏನು ಹೇಳಿದರು ಚಿತ್ರಗಳಲ್ಲಿ ನೋಡಿ.....

'ಸರಳ, ಸಜ್ಜನ ರಾಜಕಾರಣಿ'
'ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದಾಗ 1 ಲಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದ್ದರು. ಮಲೆನಾಡ ಗಾಂಧಿ ಎಂದೇ ಜನಪ್ರಿಯರಾದ ಅವರು ಸರಳ, ಸಜ್ಜನಿಕೆಯ ರಾಜಕಾರಣಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

'ಪ್ರಾಮಾಣಿಕ ರಾಜಕಾರಣಿ ಕಳೆದುಕೊಂಡಿದ್ದೇವೆ'
'ಎಚ್.ಡಿ.ಗೋವಿಂದೇಗೌಡರ ನಿಧನದಿಂದಾಗಿ ಪ್ರಾಮಾಣಿಕ ರಾಜಕಾರಣಿಯನ್ನು ರಾಜ್ಯ ಕಳೆದುಕೊಂಡಿದೆ' ಎಂದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. 'ಗೋವಿಂದೇ ಗೌಡರ ನಿಧನ ನೋವು ತಂದಿದೆ. 50 ವರ್ಷಗಳ ಕಾಲ ನನ್ನ ಮತ್ತು ಅವರ ನಡುವೆ ಉತ್ತಮ ಬಾಂಧವ್ಯವಿತ್ತು. ಹಲವು ವಿಚಾರದಲ್ಲಿ ಅವರು ನನಗೆ ಮಾರ್ಗದರ್ಶನ ಮಾಡಿದ್ದಾರೆ' ಎಂದು ಗೌಡರು ನೆನಪು ಮಾಡಿಕೊಂಡಿದ್ದಾರೆ.

'ಪ್ರಾಮಾಣಿಕ ನಾಯಕನನ್ನು ಕಳೆದುಕೊಂಡಿದೆ'
'ಗೋವಿಂದೇಗೌಡರ ನಿಧನದಿಂದಾಗಿ ರಾಜ್ಯ ಪ್ರಾಮಾಣಿಕ ನಾಯಕನನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ಶೋಕ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಂತಾಪ ಸೂಚಿಸಿದ್ದಾರೆ.

'ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದರು'
'ಗೋವಿಂದೇಗೌಡರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಕ್ರಾಂತಿ, ಜಾರಿಗೆ ತಂದ ಹಲವು ಕಾರ್ಯಕ್ರಮಗಳು ಇಂದಿಗೂ ಜನರ ಮನಸ್ಸಿನಲ್ಲಿವೆ. ಅವರ ನಿಧನದಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ವೈಯಕ್ತಿಕವಾಗಿಯೂ ಅವರು ನನಗೆ ತುಂಬಾ ಆತ್ಮೀಯರು' ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಸಂತಾಪ ಸೂಚಿಸಿದ್ದಾರೆ.

'ತೀವ್ರ ದುಃಖವಾಗಿದೆ'
'ಗೋವಿಂದೇಗೌಡರು ಶಿಕ್ಷಕರ ನೇಮಕಾತಿಯಲ್ಲಿ ಮೆರಿಟ್ ಮತ್ತು ರೋಸ್ಟರ್ ಪದ್ಧತಿ ಅನುಷ್ಠಾನಗೊಳಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಸುಧಾರಣೆಗಳನ್ನು ತಂದವರು. ಅವರ ಅಗಲಿಕೆಯಿಂದಾಗಿ ಪ್ರಾಮಾಣಿಕ ರಾಜಕಾರಣಿಯೊಬ್ಬರನ್ನು ರಾಜ್ಯ ಕಳೆದುಕೊಂಡಂತಾಗಿದೆ. ತೀವ್ರವಾದ ದುಃಖವಾಗಿದೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.












Click it and Unblock the Notifications