ಕಾಂಗ್ರೆಸ್ 2ನೇ ಪಟ್ಟಿ; ಬಿಜೆಪಿ, ಜೆಡಿಎಸ್ ಬಿಟ್ಟು ಬಂದವರಿಗೆ ಟಿಕೆಟ್
ಬೆಂಗಳೂರು, ಏಪ್ರಿಲ್ 06; ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್ 42 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಪಕ್ಷ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿತ್ತು. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಒಪ್ಪಿಗೆ ಸಿಕ್ಕಿತ್ತು. ಗುರುವಾರ ಸಿಇಸಿ ಉಸ್ತುವಾರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಮೊದಲ ಪಟ್ಟಿಯಂತೆಯೇ 2ನೇ ಪಟ್ಟಿಯಲ್ಲಿಯೂ ಕಾಂಗ್ರೆಸ್ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಬಿಟ್ಟು ಬಂದ ನಾಯಕರಿಗೆ ಈ ಬಾರಿಯ ಚುನಾವಣೆಯ ಟಿಕೆಟ್ ನೀಡಿದೆ. ಆದರೆ ಅಚ್ಚರಿ ಎಂಬಂತೆ ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ. ಎಸ್. ವಿ. ದತ್ತಾ ಬದಲು ಆನಂದ್ ಕೆ. ಎಸ್. ಪಕ್ಷದ ಅಭ್ಯರ್ಥಿಯಾಗಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಕೂಡ್ಲಗಿಯ ಮಾಜಿ ಶಾಸಕ ಎನ್. ವೈ. ಗೋಪಾಕೃಷ್ಣಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು (ಎಸ್ಟಿ) ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್. ಆರ್. ಶ್ರೀನಿವಾಸ್ಗೂ ಸಹ ಪಕ್ಷ ಈ ಬಾರಿಯ ಚುನಾವಣೆಗೆ ಅದೇ ಕ್ಷೇತ್ರದ ಟಿಕೆಟ್ ನೀಡಿದೆ. ಅಲ್ಲದೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ಬಾಬೂರಾವ್ ಚಿಂಚನಸೂರು ಗುರುಮಿಠಕಲ್ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಿಮ್ಮನೆ ರತ್ನಾಕರ್ಗೆ ಟಿಕೆಟ್; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಟಿಕೆಟ್ ಸಹ ಕುತೂಹಲಕ್ಕೆ ಕಾರಣವಾಗಿತ್ತು. ಕ್ಷೇತ್ರದ ಮಾಜಿ ಶಾಸಕ ಕಿಮ್ಮನೆ ರತ್ನಾಕರ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಆರ್. ಎಂ. ಮಂಜುನಾಥ ಗೌಡ ಆಕಾಂಕ್ಷಿಯಾಗಿದ್ದರು. ಕಳೆದ ವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಉಭಯ ನಾಯರ ಜೊತೆ ಸಭೆ ನಡೆಸಿದ್ದರು. ಆಗಲೇ ಕಿಮ್ಮನೆ ರತ್ನಾಕರಗೆ ಟಿಕೆಟ್ ಸಿಗಲಿದೆ ಎಂಬುದು ಖಚಿತವಾಗಿತ್ತು ಕಾಂಗ್ರೆಸ್ 2ನೇ ಪಟ್ಟಿಯಲ್ಲಿ ಅವರನ್ನು ತೀರ್ಥಹಳ್ಳಿ ಕ್ಷೇತ್ರಕ್ಕೆ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.
ಜೆಡಿಎಸ್ ಬಿಟ್ಟು ಬಂದ ನಾಯಕರಿಗೆ ಟಿಕೆಟ್ ನೀಡಿರುವ ಬಗ್ಗೆ ಜೆಡಿಎಸ್ ಪಕ್ಷ ಟ್ವೀಟ್ ಮಾಡಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡುವ ಬೆಲೆ ಇದೆಯೇ? ಎಂದು ಕೇಳಿದೆ. 'ಪಕ್ಷದ್ರೋಹಿ ಚಟುವಟಿಕೆಯಿಂದ ಜೆಡಿಎಸ್ನಿಂದ ಉಚ್ಛಾಟಿಸಲ್ಪಟ್ಟ ಶಾಸಕರಿಗೆ ಟಿಕೆಟ್ ನೀಡಲು ಕರ್ನಾಟಕ ಕಾಂಗ್ರೆಸ್ ಪಕ್ಷ ಸಂಘಟಿಸಿದ ಕಾರ್ಯಕರ್ತರನ್ನೇ ಉಚ್ಛಾಟನೆ ಮಾಡುತ್ತಿದೆ. ಪಕ್ಷ ಕಟ್ಟಿಬೆಳೆಸಿದ ಕಾರ್ಯಕರ್ತರಿಗೆ ಕಾಂಗ್ರೆಸ್ ನೀಡುವ ಬೆಲೆ ಇದು. ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳುಮಟ್ಟಕ್ಕೂ ಇಳಿಯುತ್ತದೆ ಎಂಬುವುದಕ್ಕೆ ಇದು ತಾಜಾ ಉದಾಹರಣೆ' ಎಂದು ಟೀಕಿಸಿದೆ.
ವಡ್ನಾಳ್ ರಾಜಣ್ಣ; ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ವಡ್ನಾಳ್ ರಾಜಣ್ಣಗೆ ಟಿಕೆಟ್ ಸಿಕ್ಕಿಲ್ಲ. ವಯಸ್ಸಿನ ಕಾರಣ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಕ್ಷೇತ್ರದಲ್ಲಿ ಬಸವರಾಜು ವಿ. ಶಿವಗಂಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಕಿಸಾನ್ ಕಾಂಗ್ರೆಸ್ನ ಜಿಲ್ಲಾ ಅಧ್ಯಕ್ಷರಾದ ಬಸವರಾಜು ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಾ ಚುನಾವಣಾ ತಯಾರಿ ಮಾಡಿಕೊಂಡಿದ್ದರು. ಈಗ ಪಕ್ಷ ಟಿಕೆಟ್ ಘೋಷಣೆ ಮಾಡಿದೆ.












Click it and Unblock the Notifications