DCM DK Shivakumar :ಇದು ಸ್ಟಾಲಿನ್ ಬಾಡಿಗೆ ಸರ್ಕಾರನಾ ಎಂದ ಎಚ್ ಡಿ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 26: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ ಹಿನ್ನೆಲೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಸರ್ಕಾರದ ಈ ಕ್ರಮವನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದು, ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಎಂದು ಕಿಡಿಕಾರಿದ್ದು, ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಈ ಕುರಿತು ಮಂಗಳವಾರ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಕುಮಾರಸ್ವಾಮಿ ಅವರ ತಂದೆ ದೇವೇಗೌಡರು ಏನು ಹೇಳಿದ್ದರು, ಈಗ ಏನು ಪತ್ರ ಬರೆದಿದ್ದಾರೆ ಎಂದು ಗೊತ್ತಿದೆಯೇ ಅವರಿಗೆ? ನೀರಿನ ವಿಚಾರದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡಲಿ ಎಂದು ಹೇಳಿದ್ದಾರೆ.

ತಮಿಳುನಾಡು ಕೇಳಿದಷ್ಟು ನೀರನ್ನು ನಾವು ಬಿಡಲು ಆಗುವುದಿಲ್ಲ, ನಾವು ಬಿಡುವುದೂ ಇಲ್ಲ. ನಮ್ಮ ಬಳಿ ಅಷ್ಟು ನೀರಿಲ್ಲ. ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆಯುತ್ತಿದ್ದು, ತಮಿಳುನಾಡಿನವರು 12,500 ಕ್ಯೂಸೆಕ್ಸ್ ನೀರಿಗೆ ಬೇಡಿಕೆ ಇಟ್ಟಿದ್ದಾರೆ. ಪ್ರಸ್ತುತ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಹೇಳಿದರು.
ಪ್ರತಿದಿನ ಎಷ್ಟು ನೀರು ಬರುತ್ತಿದೆ ಮತ್ತು ಹೊರ ಹೋಗುತ್ತಿದೆ ಎನ್ನುವ ಮಾಹಿತಿಯನ್ನು ಮುಚ್ಚಿಡಲು ಸಾಧ್ಯವಿಲ್ಲ. ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ಅದು ದಾಖಲಾಗುತ್ತದೆ. ಇದನ್ನು ಎರಡೂ ರಾಜ್ಯಗಳ ಅಧಿಕಾರಿಗಳು ಗಮನಿಸುತ್ತಿರುತ್ತಾರೆ. ಅದರ ಮೇಲ್ವಿಚಾರಣೆ ರಾಜ್ಯದ ಬಳಿ ಇಲ್ಲ. ಕಾವೇರಿ ನೀರು ನಿರ್ವಹಣಾ ಸಮಿತಿಯ ಬಳಿ ಇದೆ. ಆದ ಕಾರಣ ನೀರಿನ ಹರಿವಿನ ವಿಚಾರದಲ್ಲಿ ನಾನಾಗಲಿ, ಅವರಾಗಲಿ ಸುಳ್ಳು ಹೇಳಲು ಸಾಧ್ಯವಿಲ್ಲ
ನಾವು ಸುಳ್ಳು ಹೇಳಿದರೆ ನಮ್ಮ ಮುಂದೆ ವಾಸ್ತಾವಾಂಶ ಇಡುತ್ತಾರೆ. ತಾಂತ್ರಿಕ ವಿಚಾರಗಳು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ನೀಡುತ್ತಾರೆ. ನಾವು ಹೇಳಿದರೆ ಕೇಳುವುದಿಲ್ಲ. ಬೆಂಗಳೂರು ಸೇರಿದಂತೆ ಸುತ್ತಾಮುತ್ತಾ ಮಳೆ ಬಿದ್ದ ಪರಿಣಾಮ ಸ್ವಲ್ಪ ನೀರಿನ ಮಟ್ಟ ಹೆಚ್ಚಾಗಿದೆ.

ಇಂದು ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆಯಿದ್ದು ರಾಜ್ಯದ ಅಧಿಕಾರಿಗಳು ವಾಸ್ತವಾಂಶವನ್ನು ಸಮಿತಿಯ ಮುಂಡಿಡಲಿದ್ದಾರೆ. ರಾಜ್ಯದ ಹಿತವೇ ನಮ್ಮ ಮೊದಲ ಆದ್ಯತೆ, ಇಂದು ಅಥವಾ ನಾಳೆ ನಾನು ಮತ್ತು ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ, ಕಾವೇರಿ ನೀರಿನ ವಿಚಾರವಾಗಿ ಬಂದ್ ಗೆ ಸಹಕಾರ ನೀಡಿದ ಬೆಂಗಳೂರಿನ ನಾಗರಿಕರಿಗೆ ಅಭಿನಂದನೆಗಳು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಪ್ರತಿಭಟನೆ ಮಾಡಿದ ಎಲ್ಲಾ ಸಂಘಟನೆಯವರಿಗೆ ಮಾಧ್ಯಮಗಳ ಮೂಲಕ ಧನ್ಯವಾದ ಎಂದು ತಿಳಿಸಿದರು.












Click it and Unblock the Notifications