ವಿಧಾನ ಪರಿಷತ್ ಉಪ ಚುನಾವಣೆ, ಮಹತ್ವದ ಸಭೆ ನಡೆಸಿದ ಬಿವೈ ವಿಜಯೇಂದ್ರ
ಬೆಂಗಳೂರು, ಸೆಪ್ಟೆಂಬರ್ 23: ಕರ್ನಾಟಕದ ವಿಧಾನ ಪರಿಷತ್ನ ಒಂದು ಸ್ಥಾನವನ್ನು ಭರ್ತಿ ಮಾಡಲು ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ. ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪ ಚುನಾವಣೆ ಎದುರಾಗಿದ್ದು, ಬಿಜೆಪಿ ಟಿಕೆಟ್ಗಾಗಿ ಪೈಪೋಟಿ ಜೋರಾಗಿದೆ.
ವಿಧಾನ ಪರಿಷತ್ ಉಪ ಚುನಾವಣೆ ಘೋಷಣೆ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಸೋಮವಾರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಕೋರ್ ಕಮಿಟಿಯ ಮಹತ್ವದ ಸಭೆ ನಡೆಯಿತು. ಅಭ್ಯರ್ಥಿ ಆಯ್ಕೆ ಸೇರಿದಂತೆ ವಿವಿಧ ವಿಚಾರದ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರತಿಪಕ್ಷ ನಾಯಕ ಆರ್. ಅಶೋಕ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ, ಸಿ. ಟಿ. ರವಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲಾಗಿದ್ದು, ಯಾರು ಅಭ್ಯರ್ಥಿ ಎಂದು ಇನ್ನೂ ಸಹ ಪಕ್ಷ ಘೋಷಣೆ ಮಾಡಿಲ್ಲ.
ಬಿಜೆಪಿ ಟಿಕೆಟ್ಗಾಗಿ ಪೈಪೋಟಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 26ರಂದು ಉಪ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 3 ಕೊನೆಯ ದಿನ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 7 ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ.
ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿದ್ದ ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವಧಿ 5/1/2028ರ ತನಕ ಇತ್ತು. ಆದರೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆ 2024ಕ್ಕೆ ಸ್ಪರ್ಧಿಸಿ ಜಯಗಳಿಸಿದ್ದರು. ಚುನಾವಣೆ ಗೆದ್ದ ಬಳಿಕ ಜೂನ್ 24ರಂದು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಈಗ ಉಪ ಚುನಾವಣೆ ಎದುರಾಗಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ನಡೆಯಬೇಕಿದೆ. ಆದ್ದರಿಂದ ಕರಾವಳಿ ಆಗದ ನಾಯಕರಿಗೆ ಉಪ ಚುನಾವಣೆ ಟಿಕೆಟ್ ಸಿಗಲಿದೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. 2024ರ ಲೋಕಸಭೆ ಟಿಕೆಟ್ ನಳಿನ್ ಕುಮಾರ್ ಕಟೀಲ್ ಕೈತಪ್ಪಿತ್ತು. ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡುವ ಮೂಲಕ ರಾಜ್ಯ ರಾಜಕೀಯಕ್ಕೆ ಕರೆತರಲಾಗುತ್ತದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಉಪ ಚುನಾವಣೆ ಟಿಕೆಟ್ಗಾಗಿ ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕಂಪ್ಲ, ಮಂಗಳೂರು ವಿಭಾಗದ ಉಸ್ತುವಾರಿ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಘಟಕದ ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ ಕಯಿಲಾಡಿ ಸುರೇಶ್ ನಾಯಕ್ ಹೆಸರುಗಳು ಸಹ ಕೇಳಿ ಬರುತ್ತಿವೆ. ಆದರೆ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿ ಮಾಡಲು ಕೇಂದ್ರ ನಾಯಕರು ಸಹ ಚಿಂತನೆ ನಡೆಸಿದ್ದಾರೆ ಎಂಬುದು ಸದ್ಯದ ಸುದ್ದಿ.
ನಳಿನ್ ಕುಮಾರ್ ಮೂರು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆದ್ದರಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಹೊಸಬರಿಗೆ ಉಪ ಚುನಾವಣೆ ಟಿಕೆಟ್ ನೀಡಬೇಕು ಎಂದು ರಾಜ್ಯ ಘಟಕ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಬಿಲ್ಲವ ಸಮುದಾಯದ ನಾಯಕರು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ ಎಂಬ ಸುದ್ದಿಗಳು ಸಹ ಹಬ್ಬಿದೆ. ಯಾರು ಅಭ್ಯರ್ಥಿ? ಎಂಬುದು ಸದ್ಯದ ಕುತೂಹಲವಾಗಿದೆ.












Click it and Unblock the Notifications