ಪರಿಷತ್ ಉಪ ಚುನಾವಣೆ : ಅವಿರೋಧವಾಗಿ ಆಯ್ಕೆಯಾಗುವ ಸದಸ್ಯರ ಪರಿಚಯ
ಬೆಂಗಳೂರು, ಸೆಪ್ಟೆಂಬರ್ 26 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಮೂವರು ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 3ರಂದು ಚುನಾವಣೆ ನಿಗದಿಯಾಗಿದೆ. ಆದರೆ, ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದು, ಸೆ.27ರಂದು ಅಧಿಕೃತ ಘೋಷಣೆಯಾಗಲಿದೆ.
ವಿಧಾನಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ನ ಇಬ್ಬರು ಮತ್ತು ಜೆಡಿಎಸ್ನ ಒಬ್ಬ ಅಭ್ಯರ್ಥಿ ಸಲ್ಲಿಸಿದ್ದ ನಾಮಪತ್ರ ಅಂಗೀಕಾರಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಟಿ.ಆರ್.ಹರಿಶ್ಚಂದ್ರ ಗೌಡ ಮತ್ತು ವೆಂಕಟೇಶ್ವರ ಮಹಾಸ್ವಾಮೀಜಿ ಕಟಕದೊಂಡ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕಾರವಾಗಿದೆ.
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಏಕೆ ಸ್ಪರ್ಧಿಸುತ್ತಿಲ್ಲ?
ಕಣದಲ್ಲಿ ಬೇರೆ ಅಭ್ಯರ್ಥಿಗಳು ಇಲ್ಲದ ಕಾರಣ ಅವಿರೋಧ ಆಯ್ಕೆ ನಡೆಯಲಿದೆ. ಸೆ.27 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಅಂದು ಚುನಾವನಾಧಿಕಾರಿ ಎಂ.ಎಸ್.ಕುಮಾರಸ್ವಾಮಿ ಅವರು ಅವಿರೋಧ ಆಯ್ಕೆ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಪರಿಷತ್ ಚುನಾವಣೆ : ಜೆಡಿಎಸ್ನಲ್ಲಿ ಅಭ್ಯರ್ಥಿ ಬಗ್ಗೆ ಅಸಮಾಧಾನ
2018ರ ವಿಧಾನಸಭೆ ಚುನಾವಣೆಯಲ್ಲಿ ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ ಮತ್ತು ಡಾ.ಜಿ.ಪರಮೇಶ್ವರ ಅವರು ಜಯಗಳಿಸಿದ್ದರು. ವಿಧಾನಪರಿಷತ್ ಸದಸ್ಯರಾಗಿದ್ದ ಮೂವರು ನಾಯಕರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಸ್ಥಾನಗಳು ತೆರವಾಗಿವೆ....
ರಾಜ್ಯ ರಾಜಕೀಯದಲ್ಲಿ ಮಳೆ ನಿಂತು ಹೋದ ಮೇಲೆ ಆಗಿದ್ದೇನು?
ನಜೀರ್ ಅಹ್ಮದ್
ನಜೀರ್ ಅಹ್ಮದ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. 2ನೇ ಬಾರಿಗೆ ಅವರು ಪರಿಷತ್ ಸದ್ಯರಾಗುತ್ತಿದ್ದಾರೆ.
1983, 1999 ಮತ್ತು 2013ರ ಚುನಾವಣೆಯಲ್ಲಿ ನಜೀರ್ ಅಹ್ಮದ್ ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಒಂದೂವರೆ ವರ್ಷ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದರು.
ಕಾಂಗ್ರೆಸ್ 2ನೇ ಅಭ್ಯರ್ಥಿ
ಸವಿತಾ ಸಮಾಜದ ಮುಖಂಡ ಎಂ.ಸಿ.ವೇಣುಗೋಪಾಲ್ ಅವರು ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಆಪ್ತರು ವೇಣುಗೋಪಾಲ್.
ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 2018ರ ಚುನಾವಣೆಯಲ್ಲಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಸೌಮ್ಯಾ ರೆಡ್ಡಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರು.
ಎಚ್.ಎಂ.ರಮೇಶ್ ಗೌಡ
ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಚ್.ಎಂ.ರಮೇಶ್ ಗೌಡ ನಾಮಪತ್ರ ಸಲ್ಲಿಸಿದ್ದಾರೆ. ರಮೇಶ್ ಗೌಡ ಅಭ್ಯರ್ಥಿಯಾಗಿ ಆಯ್ಕೆಯಾದ ಬಗ್ಗೆಯೇ ಪಕ್ಷದಲ್ಲಿ ಇನ್ನೂ ಚರ್ಚೆ ನಡೆಯುತ್ತಿದೆ. ಬೆಂಗಳೂರು ನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷರು ಇವರು.
ಉದ್ಯಮಿಯೂ ಆಗಿರುವ ಇವರು ಹೆಣ್ಣೂರಿನಲ್ಲಿ ಎಚ್.ಎಂ.ಇಂಟರ್ ನ್ಯಾಷನಲ್ ಶಾಲೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿಯೂ ತೊಡಗಿಸಿಕೊಂಡಿದ್ದಾರೆ.
ಬಿಜೆಪಿ ಚುನಾವಣೆಯಿಂದ ದೂರ
ರಾಜ್ಯ ಪ್ರತಿಪಕ್ಷ ಬಿಜೆಪಿ ವಿಧಾನ ಪರಿಷತ್ ಚುನಾವಣೆಯಿಂದ ದೂರವುಳಿದಿದೆ. ಅಭ್ಯರ್ಥಿಗಳನ್ನು ಪಕ್ಷ ಕಣಕ್ಕಿಳಿಸಿಲ್ಲ. ಚುನಾವಣೆಯಲ್ಲಿ ಅಭ್ಯರ್ಥಿ ಜಯಗಳಿಸಲು 112 ಮತಗಳ ಕೊರತೆ ಇತ್ತು. ಆದರೆ, ವಿಧಾನಸಭೆಯಲ್ಲಿ ಪಕ್ಷ 104 ಸ್ಥಾನಗಳನ್ನು ಹೊಂದಿದೆ. ಮತಗಳ ಕೊರತೆ ಹಿನ್ನಲೆಯಲ್ಲಿ ಅಭ್ಯರ್ಥಿಗಳು ಕಣಕ್ಕಿಳಿದಿಲ್ಲ.