ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ?
ಬೆಂಗಳೂರು, ಡಿಸೆಂಬರ್ 14 : ವಿಧಾನಪರಿಷತ್ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿರುವ ಕಾಂಗ್ರೆಸ್ ನಾಯಕರಿಗೆ ಉಚ್ಚಾಟನೆ ಶಿಕ್ಷೆ ಕಾದಿದೆ. ಮೂವರು ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಿ ಎಂದು ಹೈಕಮಾಂಡ್ ನಾಯಕರಿಗೆ ಶಿಫಾರಸು ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಮೂವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಸೋಮವಾರ ಶಿಫಾರಸು ಮಾಡಿದ್ದಾರೆ. ಬಂಡಾಯ ಅಭ್ಯರ್ಥಿಗಳ ಮನವೊಲಿಕೆಗೆ ಶನಿವಾರ ರಾಜ್ಯ ನಾಯಕರು ಮಾಡಿದ ಪ್ರಯತ್ನ ವಿಫಲವಾಗಿತ್ತು. [ಪರಿಷತ್ ಚುನಾವಣೆ : ಕಣದಲ್ಲಿರುವ ಎಲ್ಲಾ ಪಕ್ಷದ ಅಭ್ಯರ್ಥಿಗಳ ಪಟ್ಟಿ]

ಮೂವರು ಅಭ್ಯರ್ಥಿಗಳು : ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಜಯಪ್ರಕಾಶ್ ಹೆಗ್ಡೆ, ದಯಾನಂದ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಬಂಟ್ವಾಳ್ ಅವರು ಸ್ಪರ್ಧಿಸಿದ್ದಾರೆ. ಈ ಮೂವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಶಿಫಾರಸು ಮಾಡಲಾಗಿದೆ.[ಚುನಾವಣಾ ಅಖಾಡಕ್ಕಿಳಿದ ಹೆಗ್ಡೆ]
ದಕ್ಷಿಣ ಕನ್ನಡ-ಉಡುಪಿ ಕ್ಷೇತ್ರದಲ್ಲಿ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಟಿಕೆಟ್ ನೀಡಿರುವುದರ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಅವರು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದೇ ಕ್ಷೇತ್ರದಿಂದ ಹರಿಕೃಷ್ಣ ಬಂಟ್ವಾಳ್ ಸ್ಪರ್ಧಿಸಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ವಿರುದ್ಧ ಮುನಿಸಿಕೊಂಡಿರುವ ದಯಾನಂದ ರೆಡ್ಡಿ ಅವರು, ಬೆಂಗಳೂರು ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಶನಿವಾರ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ನಡೆದ ಸಂಧಾನ ಸಭೆಯಲ್ಲಿ ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ದಯಾನಂದ ರೆಡ್ಡಿ ಸ್ಪಷ್ಟಪಡಿಸಿದ್ದರು.












Click it and Unblock the Notifications