ಮಂಡ್ಯ, ಕೋಲಾರದಲ್ಲಿನ ಜೆಡಿಎಸ್ ಬಂಡಾಯ ಶಮನ
ಬೆಂಗಳೂರು, ಡಿಸೆಂಬರ್ 12 : ವಿಧಾನಪರಿಷತ್ ಚುನಾವಣೆಯ ಬಂಡಾಯವನ್ನು ಶಮನಗೊಳಿಸಲು ಜೆಡಿಎಸ್ ನಾಯಕರು ಯಶಸ್ವಿಯಾಗಿದ್ದಾರೆ. ಮಂಡ್ಯ ಮತ್ತು ಕೋಲಾರದಲ್ಲಿ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಶನಿವಾರವೇ ಕೊನೆಯ ದಿನ.
ಶನಿವಾರ ಬೆಂಗಳೂರಿನ ಪದ್ಮನಾಭನಗರದಲ್ಲಿನ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಮಂಡ್ಯ ಕ್ಷೇತ್ರದ ಬಂಡಾಯ ಅಭ್ಯರ್ಥಿ ಬಿ.ರಾಮಕೃಷ್ಣ ಅವರು ತಮ್ಮ ನಾಮಪತ್ರ ವಾಪಸ್ ಪಡೆಯಲು ಒಪ್ಪಿಗೆ ಸೂಚಿಸಿದ್ದಾರೆ. [ಬೆಂಗಳೂರಿಗೆ ಬಂತು ಮಂಡ್ಯದ ಬಂಡಾಯ]

ನಾಗಮಂಗಲ ಕ್ಷೇತ್ರದ ಶಾಸಕ ಚೆಲುವರಾಯಸ್ವಾಮಿ ಅವರ ಬೆಂಬಲಿಗರಾದ ಬಿ.ರಾಮಕೃಷ್ಣ ಅವರು ಮಂಡ್ಯ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಪಕ್ಷ ಅಪ್ಪಾಜಿ ಗೌಡರಿಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡಿದ್ದ ರಾಮಕೃಷ್ಣ ಅವರು ಬಂಡಾಯದ ಬಾವುಟ ಹಾರಿಸಿದ್ದರು. [ಪರಿಷತ್ ಚುನಾವಣೆ : ಕಣದಲ್ಲಿರುವ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ]
ಶುಕ್ರವಾರ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರ ಮಹತ್ವದ ಸಭೆ ನಡೆದಿತ್ತು. ಆದರೆ, ಚೆಲುವರಾಯಸ್ವಾಮಿ ಅವರು ಗೈರಾಗಿದ್ದರಿಂದ, ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. [ಡಿಸೆಂಬರ್ 27ರ ವಿಧಾನಪರಿಷತ್ ಚುನಾವಣೆ ಬಗ್ಗೆ ತಿಳಿಯಿರಿ]
ಕೋಲಾರದ ಬಂಡಾಯ ಶಮನ : ಕೋಲಾರ ಕ್ಷೇತ್ರದಲ್ಲಿ ಸಿ.ಆರ್.ಮನೋಹರ ಅವರು ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಆದರೆ, ಕೆ.ವೈ.ನಂಜೇಗೌಡ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಶನಿವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ನಂಜೇಗೌಡ ನಿವಾಸಕ್ಕೆ ಭೇಟಿ ನೀಡಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ನಂಜೇಗೌಡರು ಒಪ್ಪಿಗೆ ನೀಡಿದ್ದಾರೆ.
ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಡಿಸೆಂಬರ್ 12ರ ಶನಿವಾರ ಕೊನೆಯ ದಿನವಾಗಿದೆ.












Click it and Unblock the Notifications