ಕಾಂಗ್ರೆಸ್-ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್ ನಿರಾಳ
ಬೆಂಗಳೂರು, ಡಿಸೆಂಬರ್ 12 : ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಮೂರು ಕ್ಷೇತ್ರಗಳಲ್ಲಿ ಎದ್ದಿದ್ದ ಬಂಡಾಯವನ್ನು ಜೆಡಿಎಸ್ ನಾಯಕರು ಶಮನಗೊಳಿಸಿದ್ದು ನಿಟ್ಟುಸಿರುವ ಬಿಟ್ಟಿದ್ದಾರೆ. ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರು ನಗರ ಕ್ಷೇತ್ರ, ಉಡುಪಿಯಲ್ಲಿ ಬಂಡಾಯದ ಬಿಸಿ ತಟ್ಟಿದೆ. ವಿಜಯಪುರ-ಬಾಗಲಕೋಟೆ ಕ್ಷೇತ್ರದ ಬಿಜೆಪಿಯ ಬಂಡಾಯ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ನಾಮಪತ್ರ ವಾಪಸ್ ಪಡೆದಿಲ್ಲ. ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆ ವಿಫಲವಾಗಿದೆ. [ಜೆಡಿಎಸ್ ಬಂಡಾಯ ಶಮನ]

ಮನವೊಲಿಕೆ ವಿಫಲ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ದಯಾನಂದ ರೆಡ್ಡಿ ಮನವೊಲಿಕೆಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಸಂಧಾನ ಸಭೆ ನಡೆಯಿತು. ಸಭೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ದಯಾನಂದ ರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದರು. ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದರು. [ಡಿಸೆಂಬರ್ 27ರ ವಿಧಾನಪರಿಷತ್ ಚುನಾವಣೆ ಬಗ್ಗೆ ತಿಳಿಯಿರಿ]
ಉಡುಪಿಯಲ್ಲಿ ಬಂಡಾಯ : ಉಡುಪಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ವಾಪಸ್ ಪಡೆಯಲು ಒಪ್ಪಿಗೆ ನೀಡಿಲ್ಲ. ಪ್ರತಾಪಚಂದ್ರ ಶೆಟ್ಟಿ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದ ಹೆಗ್ಡೆ ಅವರು ಬಂಡಾಯದ ಬಾವುಟ ಹಾರಿಸಿದ್ದಾರೆ. [ಚುನಾವಣಾ ಅಖಾಡಕ್ಕಿಳಿದ ಹೆಗ್ಡೆ]
ಬಿಜೆಪಿ ಸಂಧಾನ ಸಭೆ ವಿಫಲ : ಬಿಜೆಪಿಗೂ ಬಂಡಾಯದ ಬಿಸಿ ತಟ್ಟಿದೆ. ವಿಜಯಪುರ-ಬಾಗಲಕೋಟೆ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಮನವೊಲಿಕೆಗೆ ಹಿರಿಯ ನಾಯಕ ಗೋವಿಂದ ಕಾರಜೋಳ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿಲ್ಲ.
ಜೆಡಿಎಸ್ ನಿರಾಳ : ಜೆಡಿಎಸ್ ಪಕ್ಷ ಮಂಡ್ಯ ಮತ್ತು ಕೋಲಾರದಲ್ಲಿನ ಬಂಡಾಯವನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದೆ. ಮಂಡ್ಯದಲ್ಲಿ ಬಿ.ರಾಮಕೃಷ್ಣ ಮತ್ತು ಕೋಲಾರದಲ್ಲಿ ಕೆ.ವೈ.ನಂಜೇಗೌಡ ನಾಮಪತ್ರ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.












Click it and Unblock the Notifications